ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಂಬಲ ಬೆಲೆ ನಿಗದಿ ಪಡಿಸಿ: ಕುರುಬೂರು ಶಾಂತಕುಮಾರ್ ಆಗ್ರಹ
ಮೈಸೂರು: ರೈತರ ಕೃಷಿ ಉತ್ಪನ್ನಗಳಿಗೆ ಖರೀದಿದಾರರು ಇಲ್ಲದೇ ಬೆಲೆ ಕುಸಿತವಾಗುತ್ತಿರುವ ಕಾರಣ ಸರ್ಕಾರವೇ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿ ಖರೀದಿಸುವಂತೆ ರೈತ ಮುಖಂಡ ಕುರುಬೂರು ಶಾಂತ್ ಕುಮಾರ್ ಒತ್ತಾಯಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ, ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಕೊರೊನಾ ವೈರಸ್ ಹಾವಳಿಯಿಂದಾಗಿ ಕೃಷಿ ಕ್ಷೇತ್ರದಲ್ಲಿ ಬೆಳೆಗಳ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.
ಇದರಿಂದ ರೈತರ ಪರಿಸ್ಥಿತಿ ಅಯೋಮಯವಾಗಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಕೂಡಲೇ ತರಕಾರಿ ಮತ್ತು ವಿವಿಧ
ರೀತಿಯ ಹಣ್ಣುಗಳಿಗೆ ಸೂಕ್ತ ಬೆಂಬಲ ಬೆಲೆಯನ್ನು ನಿಗದಿಪಡಿಸುವುದರೊಂದಿಗೆ ಇವುಗಳನ್ನು ಸರ್ಕಾರವೇ ಖರೀದಿಸಲು ಮುಂದಾಗಬೇಕು ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಅವರು ಕೃಷಿಯನ್ನು ಲಾಕ್ಡೌನ್ ವ್ಯಾಪ್ತಿಗೆ ತರಬೇಕು. ರೈತರು ತಮ್ಮ ಪ್ರಾಣ ಕಳೆದುಕೊಳ್ಳುವ ಮುನ್ನ ಸರ್ಕಾರ ಇದನ್ನು ಜಾರಿಗೊಳಿಸುವಂತೆ ಒತ್ತಾಯಿಸಿದರು.
ಕೊರೊನಾ ಮಹಾಮಾರಿಯ 2ನೇ ಅಲೆ ಗ್ರಾಮಾಂತರ ಪ್ರದೇಶಗಳಿಗೂ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕು ಮಟ್ಟದಲ್ಲಿಯೂ ಕೋವಿಡ್ ಪರೀಕ್ಷಾ ಕೇಂದ್ರ ಹಾಗೂ ವಾರ್ ರೂಂಗಳನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ