ಆರೋಪ ಮಾಡಿದವರು ಇದೀಗ ಮೈಸೂರಿಗರ ಕ್ಷಮೆ ಕೇಳಲಿ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆಗ್ರಹ
ಮೈಸೂರು: ಆಮ್ಲಜನಕ ಪೂರೈಕೆ ವಿಚಾರವಾಗಿ, ಮೈಸೂರಿನ ಮೇಲೆ ಕಳಂಕ ಹೊರಿಸಲು ಮುಂದಾದ ಎಲ್ಲರೂ ಮೈಸೂರಿಗರ ಕ್ಷಮೆ ಕೇಳಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಆಗ್ರಹಿಸಿದ್ದಾರೆ.
ಚಾಮರಾಜನಗರದ ದುರಂತ ಕುರಿತಂತೆ ಹೈಕೋರ್ಟ್ ಸಮಿತಿ ವರದಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಮೇಲೆ ಆರೋಪ ಮಾಡಲು ಹೋಗಿ, ಮೈಸೂರಿಗೆ ಕಳಂಕ ತರುವ ಪ್ರಯತ್ನ ನಡೆದಿತ್ತು. ಇದೀಗ ಅದರಿಂದ ಹೊರಗೆ ಬಂದಿದ್ದೇವೆ ಎಂದು ಹೇಳಿದ್ದಾರೆ.
ನಮ್ಮ ವಿರುದ್ಧ ಮಾಡಿದ ಆರೋಪಗಳು ಆಧಾರ ರಹಿತ. ಇದಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ. ಸರ್ಕಾರಕ್ಕೆ ವರದಿ ಕೊಡುತ್ತೇವೆ ಎಂದು ತಿಳಿಸಿದ್ದಾರೆ.
ಮೈಸೂರಿಗೆ ಬಂದ 7 ತಿಂಗಳಿಂದ ವೈಯಕ್ತಿಕವಾಗಿ ಆರೋಪ ಕೇಳುತ್ತಿರುವೆ. ಸೇವೆಗೆ ಸೇರಿದ್ದೇ ದೇಶ ಸೇವೆಗೆ. ಇಂತಹ ಸಣ್ಣಪುಟ್ಟ ಆರೋಪಗಳಿಗೆ ಕಾಲವೇ ಉತ್ತರ ನೀಡಲಿದೆ. ಮಾಧ್ಯಮದವರೂ ಸಣ್ಣ ವಿಷಯಕ್ಕೂ ಪ್ರತಿಕ್ರಿಯೆ ಕೇಳೋದು ಸರಿಯಲ್ಲ. ಎಲ್ಲದಕ್ಕೂ ಉತ್ತರ ಕೊಡುತ್ತಾ ಕೂರಲು ಆಗುವುದಿಲ್ಲ. ಸಾಂಕ್ರಾಮಿಕ ಪಿಡುಗಿನ ಸಮಯವಿದು. ಜನರ ಜೀವ ರಕ್ಷಿಸಲು ಎಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕಾದ ಕಾಲವಿದು ಎಂದ ಅವರು, ಜಿಲ್ಲಾಧಿಕಾರಿ ನಿವಾಸದಲ್ಲಿ ಈಜುಕೊಳ, ಜಿಮ್ ನಿರ್ಮಾಣಕ್ಕೆ ಸಂಬಂಧಿತ ಆರೋಪಕ್ಕೆ ತಿರುಗೇಟು ನೀಡಿದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ