ಬೆಂಗಳೂರು: ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಮಾರಾಟ, ಇಬ್ಬರ ಬಂಧನ
ಬೆಂಗಳೂರು: ಕಾಳ ಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿದ್ದ ಇಬ್ಬರೂ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಶಿವ ಗಣೇಶ್ ಮತ್ತು ಭರತ್ ಬಂಧಿತ ಆರೋಪಿಗಳು. ಬಂಧಿತರಿಂದ ಪೊಲೀಸರು 4 ಆಕ್ಸಿಜನ್ ಸಿಲಿಂಡರ್ ವಶಕ್ಕೆ ಪಡೆದಿದ್ದಾರೆ.
ಬಂಧಿತರು ಶೇಷಾದ್ರಿಪುರಂ ಮತ್ತು ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಂಕಿತ ರೋಗಿಗಳನ್ನೇ ಕೇಂದ್ರಿಕರಿಸಿಕೊಂಡು ಆಕ್ಸಿಜನ್ ಸಿಲಿಂಡರ್ ಗಳನ್ನು ದುಪ್ಪಟ್ಟು ಹಣಕ್ಕೆ ಮಾರಾಟ ಮಾಡುತ್ತಿದ್ದ ಬಗ್ಗೆ ಸಿಸಿಬಿ ಪೊಲೀಸರಿಗೆ ದೂರು ಬಂದಿತ್ತು.
ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಸಿಲಿಂಡರ್ ಕೇಳುವ ಸೋಗಿನಲ್ಲಿ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ ಅಕ್ರಮವಾಗಿ ದಾಸ್ತಾನು ಮಾಡಿಕೊಂಡಿದ್ದ ಆಕ್ಸಿಜನ್ ಸಿಲಿಂಡರ್ ಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ಧ ಶೇಷಾದ್ರಿಪುರಂ, ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಿಸಿಕೊಂಡಿದ್ದಾರೆ.
ಆರೋಪಿಗಳು ಆಕ್ಸಿಜನ್ ಅಭಾವವನ್ನೇ ಬಂಡವಾಳ ಮಾಡಿಕೊಂಡು ದುಪ್ಪಟ್ಟು ಹಣ ಮಾಡಿಕೊಳ್ಳಲು ಮುಂದಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಆಕ್ಸಿಜನ್ ಅಕ್ರಮ ದಂಧೆಯ ಹಿಂದೆ ಮತ್ತಷ್ಟು ಆರೋಪಿಗಳಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ