ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಜಿಂದಾಲ್ ಸ್ಟೀಲ್ ಕಂಪೆನಿಗೆ ಸರ್ಕಾರದ ಜಮೀನು ಕಡಿಮೆ ದರಕ್ಕೆ ಮಾರಾಟ ನಿರ್ಧಾರ ಖಚಿತಪಡಿಸಿಲ್ಲ: ಹೈಕೋರ್ಟ್ ಗೆ ಸರ್ಕಾರ ಉತ್ತರ

ಬಳ್ಳಾರಿಯ ಜೆಎಸ್ ಡಬ್ಲ್ಯು ಸ್ಟೀಲ್ಸ್ ಕಾರ್ಪೊರೇಶನ್ ಪ್ರೈವೆಟ್ ಲಿಮಿಟೆಡ್ ಗೆ ಕಡಿಮೆ ದರದಲ್ಲಿ ನೀಡಲು ಹಿಂದಿನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ತೆಗೆದುಕೊಂಡ ತೀರ್ಮಾನವನ್ನು ಇಂದಿನ ಸರ್ಕಾರ ದೃಢೀಕರಿಸಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ.
Published on

ಬೆಂಗಳೂರು: 3 ಸಾವಿರದ 667 ಎಕರೆ ಜಮೀನನ್ನು ಬಳ್ಳಾರಿಯ ಜೆಎಸ್ ಡಬ್ಲ್ಯು ಸ್ಟೀಲ್ಸ್ ಕಾರ್ಪೊರೇಶನ್ ಪ್ರೈವೆಟ್ ಲಿಮಿಟೆಡ್ ಗೆ ಕಡಿಮೆ ದರದಲ್ಲಿ ನೀಡಲು ಹಿಂದಿನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ತೆಗೆದುಕೊಂಡ ತೀರ್ಮಾನವನ್ನು ಇಂದಿನ ಸರ್ಕಾರ ದೃಢೀಕರಿಸಿಲ್ಲ, ಈ ಬಗ್ಗೆ ಸಿಎಂ ಬೊಮ್ಮಾಯಿ ನೇತೃತ್ವದ ಸರ್ಕಾರ ಮರುಪರಿಶೀಲಿಸುತ್ತಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ.

ಹಿಂದೆ ಕೈಗಾರಿಕಾ ಸಚಿವರಾಗಿದ್ದ ಜಗದೀಶ್ ಶೆಟ್ಟರ್ ನೇತೃತ್ವದ ಸಂಪುಟ ಉಪ ಸಮಿತಿಯ ಶಿಫಾರಸಿನ ಮೇರೆಗೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸರ್ಕಾರಿ ವಕೀಲರು ಸಲ್ಲಿಸಿದ ಸಲ್ಲಿಕೆಯನ್ನು ದಾಖಲಿಸಿದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ವಿಭಾಗೀಯ ಪೀಠವು ವಜಾಗೊಳಿಸಿ ಈ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಹೇಳಿದೆ.

ಕಳೆದ ಏಪ್ರಿಲ್ 26ರಂದು ಯಡಿಯೂರಪ್ಪ ನೇತೃತ್ವದ ಸರ್ಕಾರ ತೆಗೆದುಕೊಂಡ ನಿರ್ಧಾರವನ್ನು ಪ್ರಶ್ನಿಸಿ ಬೆಂಗಳೂರಿನ ಬಿಟಿಎಂ ಲೇ ಔಟ್ ನ ನಿವಾಸಿ ಕೆ ಎ ಪೌಲ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಪ್ರತಿ ಎಕರೆಗೆ 1.22 ಲಕ್ಷಕ್ಕೆ ಜಿಂದಾಲ್ ಸ್ಟೀಲ್ ಕಂಪೆನಿಗೆ ಮಾರಾಟ ಮಾಡುವಂತೆ ಸೇಲ್ ಡೀಡ್ ನಲ್ಲಿ ಬರೆದಿರುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದ್ದರು. ಈ ಬಗ್ಗೆ ಜೂನ್ 7ರಂದು ವಿಚಾರಣೆ ನಡೆಸಿದ ನ್ಯಾಯಾಲಯ ಸರ್ಕಾರಕ್ಕೆ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com