ಅಕ್ರಮ ಕ್ರೀಡಾ ಸಮುಚ್ಚಯ ನಿರ್ಮಾಣ: ಆದೇಶ ಪಾಲಿಸದ ಬಿಬಿಎಂಪಿಗೆ ಹೈಕೋರ್ಟ್ ತರಾಟೆ

ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ನೆಹರೂ ಪಾರ್ಕ್ನಲ್ಲಿ ಅಕ್ರಮವಾಗಿ ಕ್ರೀಡಾ ಸಮುಚ್ಚಯ ನಿರ್ಮಾಣ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ನೀಡಿದ್ದ ನಿರ್ದೇಶನ ಪಾಲಿಸದ ಬಿಬಿಎಂಪಿಯನ್ನು ಕರ್ನಾಟಕ ಹೈಕೋರ್ಟ್ ಎಚ್ಚರಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ನೆಹರೂ ಪಾರ್ಕ್ನಲ್ಲಿ ಅಕ್ರಮವಾಗಿ ಕ್ರೀಡಾ ಸಮುಚ್ಚಯ ನಿರ್ಮಾಣ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ನೀಡಿದ್ದ ನಿರ್ದೇಶನ ಪಾಲಿಸದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ತೀವ್ರ ತರಾಟೆಗೆ ತೆಗೆದುಕೊಂಡಿರುವ ಕರ್ನಾಟಕ ಹೈಕೋರ್ಟ್, ನ್ಯಾಯಾಲಯದ ಆದೇಶಗಳನ್ನು ಲಘುವಾಗಿ ಪರಿಗಣಿಸುವ ಅಧಿಕಾರಿಗಳನ್ನು ಜೈಲಿಗೆ ಕಳುಹಿಸಬೇಕಾಗುತ್ತದೆ ಎಂದು ಮಂಗಳವಾರ ಎಚ್ಚರಿಸಿದೆ.

ಉದ್ಯಾನಗಳು ಹಾಗೂ ಆಟದ ಮೈದಾನಗಳ ಅಸಮರ್ಪಕ ನಿರ್ವಹಣೆ ಪ್ರಶ್ನಿಸಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ಜುಲೈ 19ರಂದು ನಡೆದ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ವೆಂಕಟೇಶ್ ದಳವಾಯಿ ಶೇಷಾದ್ರಿಪುರದ ನೆಹರೂ ಪಾರ್ಕ್ನಲ್ಲಿ ನೆಹರೂ ಕ್ರೀಡಾ ಸಮುಚ್ಚಯದ ಹೆಸರಿನಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂಬ ವಿಚಾರವನ್ನು ಪೀಠದ ಗಮನಕ್ಕೆ ತಂದು ಅದಕ್ಕೆ ಸಂಬಂಧಿಸಿದ ಚಿತ್ರಗಳನ್ನು ಸಲ್ಲಿಸಿದರು.

ಅದನ್ನು ಪರಿಶೀಲಿಸಿದ್ದ ಪೀಠ, ಅರ್ಜಿದಾರರು ಆರೋಪಿಸಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲು ಕೂಡಲೇ ಅಧಿಕಾರಿಯೊಬ್ಬರನ್ನು ಪಾಲಿಕೆ ನಿಯೋಜಿಸಬೇಕು. ಆ ಅಧಿಕಾರಿ ಉದ್ಯಾನದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆಯೇ ಎಂಬುದನ್ನು ಪರಿಶೀಲಿಸಿ ಮೂರು ವಾರಗಳಲ್ಲಿ ನ್ಯಾಯಾಲಯಕ್ಕೆ ಅನುಪಾಲನಾ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿತ್ತು. ಆ ನಂತರ ಮೂರ್ನಾಲ್ಕು ಬಾರಿ ಅರ್ಜಿ ವಿಚಾರಣೆಗೆ ಬಂದಾಗಲೂ ವರದಿ ಸಲ್ಲಿಸಲು ಪಾಲಿಕೆ ಕಾಲಾವಕಾಶ ಪಡೆದುಕೊಂಡಿತ್ತು.

ಮಂಗಳವಾರ ಮತ್ತೆ ಅರ್ಜಿ ವಿಚಾರಣೆಗೆ ಬಂದಾಗ ಬಿಬಿಎಂಪಿ ರ ವಕೀಲರು ಜು.19ರ ಆದೇಶದ ಅನುಪಾಲನಾ ವರದಿ ಸಲ್ಲಿಸಲು ಕಾಲಾವಕಾಶ ಕೋರಿದರು. ಅದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ನ್ಯಾಯಪೀಠ, ನ್ಯಾಯಾಲಯದ ಆದೇಶಗಳನ್ನು ಅಧಿಕಾರಿಗಳು ಲಘುವಾಗಿ ಪರಿಗಣಿಸಿದ್ದಾರೆ. ಇದನ್ನೆಲ್ಲ ನೋಡುತ್ತಾ ಸುಮ್ಮನೆ ಕೂರಲು ಸಾಧ್ಯವಿಲ್ಲ. ಒಂದಿಬ್ಬರು ಅಧಿಕಾರಿಗಳನ್ನು ಜೈಲಿಗೆ ಕಳುಹಿಸಿದರೆ ಎಲ್ಲಾ ಸರಿ ಹೋಗಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರನ್ನೇ ಜೈಲಿಗೆ ಕಳುಹಿಸಬೇಕಾದೀತು ಎಂದು ಎಚ್ಚರಿಸಿತು.

ನ್ಯಾಯಾಲಯದ ಘನತೆ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ಉದ್ಯಾನ, ಆಟದ ಮೈದಾನಗಳಲ್ಲಿ ಅನಧಿಕೃತ ಕಟ್ಟಡಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ದೊಡ್ಡವರ ವಿರುದ್ಧ ಕ್ರಮ ಜರುಗಿಸಲು ಪಾಲಿಕೆ ಹಿಂಜರಿಯಬಹುದು. ಆದರೆ, ನ್ಯಾಯಾಲಯಕ್ಕೆ ಅಂಥ ಯಾವುದೇ ಹಿಂಜರಿಕೆ ಇಲ್ಲ. ಕೂಡಲೇ ಕ್ರಮ ಜರುಗಿಸದಿದ್ದರೆ ಅಧಿಕಾರಿಗಳಿಗೆ ತೊಂದರೆ ಖಚಿತ ಎಂದು ನ್ಯಾಯಪೀಠ ತಿಳಿಸಿತು. ಅಲ್ಲದೆ, ಇದೇ ಅಂತಿಮ ಅವಕಾಶವಾಗಿದ್ದು, ಮುಂದಿನ ವಿಚಾರಣೆ ವೇಳೆ ವರದಿ ಸಲ್ಲಿಸುವಂತೆ ತಾಕೀತು ಮಾಡಿ ವಿಚಾರಣೆಯನ್ನು ಡಿಸೆಂಬರ್ 16ಕ್ಕೆ ಮುಂದೂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com