ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿ ಮೂವರು ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದ ನಗರದ 8ನೆ ಎಸಿಎಂಎಂ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ಗುರುವಾರ ತಡೆ ನೀಡಿದೆ.
ತಮ್ಮ ವಿರುದ್ಧ ತನಿಖೆಗೆ ನಿರ್ದೇಶಿಸಿರುವ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್.ಅನುಚೇತ್ ಹಾಗೂ ಕಬ್ಬನ್ ಪಾರ್ಕ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಬಿ. ಮಾರುತಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ಕುರಿತ ಅರ್ಜಿಯನ್ನು ನಿನ್ನೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ನಗರದ 8ನೆ ಎಸಿಎಂಎಂ ಕೋರ್ಟ್ ಆದೇಶಕ್ಕೆ ತಡೆ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರಾದ ಪ್ರಸನ್ನಕುಮಾರ್ ಅವರು ವಾದ ಮಂಡಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ತನಿಖೆ ನಡೆಸಿದ್ದು, ಅಂತಿಮ ವರದಿ ಸಲ್ಲಿಸಲು ಎಸ್ಐಟಿ ಸಿದ್ದವಿದೆ. ಹೀಗಾಗಿ ಮ್ಯಾಜಿಸ್ಟ್ರ್ರೇಟ್ ಕೋರ್ಟ್ ತನಿಖೆ ನಡೆಸಲು ನೀಡಿರುವ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿದರು.ಇದನ್ನು ಪರಿಗಣಿಸಿದ ಪೀಠ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.
8ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್, ನವೆಂಬರ್ 23 ರಂದು, ಜನಾಧಿಕಾರ ಸಂಘರ್ಷ ಪರಿಷತ್ತಿನ (ಜೆಎಸ್ಪಿ) ಅಧ್ಯಕ್ಷ ಆದರ್ಶ್ ಆರ್ ಅಯ್ಯರ್ ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ಗೆ ಸಲ್ಲಿಸಿದ ಖಾಸಗಿ ದೂರನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸ್ ಅಧಿಕಾರಿಗಳ ವಿರುದ್ಧ ಸಿಆರ್ಪಿಸಿಯ 156(3) ಸೆಕ್ಷನ್ ಅಡಿಯಲ್ಲಿ ತನಿಖೆ ನಡೆಸಲು ಆದೇಶಿಸಿದ್ದರು
Advertisement