ರಾಜ್ಯಕ್ಕೆ ರಾಷ್ಟ್ರಪತಿ ಕೋವಿಂದ್ ಆಗಮನ; ಸಿಎಂ ಬೊಮ್ಮಾಯಿ ಸ್ವಾಗತ
ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ದಿನಗಳ ರಾಜ್ಯ ಪ್ರವಾಸಕ್ಕಾಗಿ ಬುಧವಾರ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರಾಷ್ಟ್ರಪತಿಗಳಿಗೆ ಶಾಲು ಹೊದಿಸಿ ಸರ್ಕಾರದ ಪರವಾಗಿ ಸನ್ಮಾನಿಸಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇಂದು ಸಂಜೆ 7 ಗಂಟೆಗೆ ರಾಜಭವನದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳ ಜೊತೆ ಹೈ ಟೀ ಕಾರ್ಯಕ್ರಮ ಏರ್ಲಿಪಡಿಸಲಾಗಿದ್ದು, ರಾಷ್ಟ್ರಪತಿಗಳು ರಾತ್ರಿ ರಾಜಭವನದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
ನಾಳೆ ಆಕ್ಟೊಬರ್ 7 ರಂದು ರಾಷ್ಟ್ರಪತಿಗಳು ಚಾಮರಾಜನಗರ ಜಿಲ್ಲೆ ಬಿಳಿಗಿರಿರಂಗನಾಥಸ್ವಾಮಿ ದೇಗುಲಕ್ಕೆ ಭೇಟಿ ನೀಡಲಿದ್ದು, ಜಿಲ್ಲೆಯಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಲೋಕಾರ್ಪಣೆಗೊಳಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸಾಥ್ ಅವರು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮ ನಂತರ ಮೈಸೂರು, ಮಂಗಳೂರಿಗೆ ತೆರಳುವ ರಾಷ್ಟ್ರಪತಿಗಳು ಅಕ್ಟೊಬರ್ 8 ರಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿ, ಶ್ರೀಗಳಿಂದ ಆಶೀರ್ವಾದ ಪಡೆಯಲಿದ್ದಾರೆ. ಅಂದೇ ಮಂಗಳೂರಿನಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ಮರಳಲಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ