ಕೋಲಾರ: ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಒಂದೂವರೆ ಕೋಟಿ ಕೋವಿಡ್-19 ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಸ್ಟ್ ನಲ್ಲಿ ರಾಜ್ಯಕ್ಕೆ 1.12 ಕೋಟಿ ಲಸಿಕೆ ಬಂದಿದ್ದು, 1.10 ಕೋಟಿ ಲಸಿಕೆ ನೀಡಲಾಗಿದೆ. ಜನವರಿಯಿಂದ ಈವರೆಗೆ ಆಗಸ್ಟ್ ತಿಂಗಳಲ್ಲೇ ಅತ್ಯಧಿಕ ಲಸಿಕೆ ನೀಡಲಾಗಿದೆ. ಈ ತಿಂಗಳಲ್ಲಿ ಕನಿಷ್ಠ 1.50 ಕೋಟಿ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದರು.
ಕೇರಳದಿಂದ ಬರುವವರಿಗೆ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ನಿಯಮ ಜಾರಿಗೆ ತರಲಾಗಿದೆ. ಆದರೆ, ಪ್ರತಿದಿನ ಬರುವ ವಿದ್ಯಾರ್ಥಿಗಳು ಸೇರಿದಂತೆ ಕೆಲವರಿಗೆ ಮಾರ್ಗಸೂಚಿಯಲ್ಲಿ ವಿನಾಯಿತಿ ನೀಡಲಾಗಿದೆ. ಲಸಿಕೆ ಪಡೆಯದವರಿಗೆ ಪಡಿತರ, ಪಿಂಚಣಿ ತಡೆಹಿಡಿಯುವುದನ್ನು ಸರ್ಕಾರ ಒಪ್ಪುವುದಿಲ್ಲ. ಈ ರೀತಿ ನಿರ್ಧಾರವನ್ನು ಸರ್ಕಾರ ಎಲ್ಲಾ ಮಾಡಿಲ್ಲ ಎಂದು ಅವರು ಹೇಳಿದರು.
ಬೀದರ್, ಯಾದಗಿರಿ, ಕಲಬುರಗಿ ಮೊದಲಾದ ಜಿಲ್ಲೆಗಳಲ್ಲಿ ಜನರು ಕೋವಿಡ್ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಕೆಲವೆಡೆ ಚುನಾಯಿತ ಪ್ರತಿನಿಧಿ, ಸಂಘ, ಸಂಸ್ಥೆಗಳು ಲಸಿಕೆ ಪಡೆಯುವವರಿಗೆ ಅನುಕೂಲ ಮಾಡಿಕೊಡುವ ಕೆಲಸ ಮಾಡುತ್ತಿವೆ. ಜನರು ಲಸಿಕೆ ಹಾಕಿಸಿಕೊಳ್ಳಬೇಕೆಂಬುದು ಇದರ ಉದ್ದೇಶ. ಜಾಗೃತಿ ಮೂಡಿಸುವ ಭರದಲ್ಲಿ ಏನಾದರೂ ಆಗಿರಬಹುದು. ಈ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದು ಅವರು ತಿಳಿಸಿದರು.
Advertisement