ಬೆಂಗಳೂರು: ರಾಜ್ಯದಲ್ಲಿ ಬಲವಂತವಾಗಿ ಹಾಗೂ ಆಸೆ ಆಮಿಷಗಳನ್ನು ಒಡ್ಡಿ ಮತಾಂತರ ನಡೆಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಕಾನೂನು ರೂಪಿಸುವ ಕುರಿತು ಗಂಭೀರ ಚಿಂತನೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯಾದಗಿರಿಯಲ್ಲಿ ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದರು.
ಈ ವೇಳೆ ಬಲವಂತದ ಮತಾಂತರ ನಿಯಂತ್ರಿಸಲು ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೆ ತರುವ ಕುರಿತು ಗಂಭೀರ ಚಿಂತನೆ ನಡೆಸುತ್ತಿರುವ ವಿಚಾರವನ್ನು ತಿಳಿಸಿದ್ದಾರೆ.
ಇದನ್ನೂ ಓದಿ: ಯಾದಗಿರಿಯಲ್ಲಿ ಮತಾಂತರಕ್ಕೆ ಯತ್ನ ಪ್ರಕರಣ; ನಾಲ್ವರ ಬಂಧನ
‘ಯಾದಗಿರಿ ಜಿಲ್ಲೆಯಲ್ಲಿ ಮತಾಂತರ ನಡೆಸಿರುವ ವಿಚಾರವು ಗಮನಕ್ಕೆ ಬಂದಿದೆ. ಈ ಬಗ್ಗೆ ಗಮನ ಹರಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ’ ಎಂದು ಹೇಳಿದರು.
ಸ್ವ ಇಚ್ಛೆಯಿಂದ ಮತಾಂತರಕ್ಕೆ ಅವಕಾಶವಿದೆ. ಆದರೆ, ಹಣ ಮತ್ತು ಇನ್ನಿತರ ರೀತಿಯ ಆಮಿಷಗಳನ್ನು ಒಡ್ಡಿ ಮತಾಂತರ ನಡೆಸುತ್ತಿರುವ ಪ್ರಕರಣಗಳು ಅಲ್ಲಲ್ಲಿ ನಡೆಯುತ್ತಿವೆ. ಕಲಬುರ್ಗಿ ಮತ್ತಿತ್ತರ ಕಡೆಗಳಲ್ಲಿ ಭೇಟಿ ನೀಡಿದಾಗ ಮತಾಂತರ ಮಾಡುತ್ತಿರುವ ಆರೋಪಗಳು ಕೇಳಿ ಬಂದಿವೆ. ಪದೇ ಪದೇ ಈ ವಿಚಾರ ಕೇಳಿ ಬರುತ್ತಿರುವ ಕಾರಣದಿಂದ ಶಾಶ್ವತವಾಗಿ ಕಡಿವಾಣ ಹಾಕಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
ಇತ್ತೀಚೆಗೆ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಮಾತನಾಡಿದ್ದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್, ‘ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು 20 ಸಾವಿರ ಮಂದಿ ಮತಾಂತರ ಆಗಿದ್ದಾರೆ. ನನ್ನ ತಾಯಿ ಸಹ ಮತಾಂತರಗೊಂಡಿದ್ದಾರೆ. ಕುಂಕುಮ ಇಡಬಾರದು ಹಾಗೂ ದೇವರ ಫೋಟೋ ಇಡಬಾರದು ಎಂದು ಅವರ ಬ್ರೈನ್ ವಾಶ್ ಮಾಡಲಾಗಿದೆ. ಇದು ಸರಿಯಲ್ಲ ಎಂದು ಕಿವಿಮಾತು ಹೇಳಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಾಯಿ ಬೆದರಿಕೆ ಹಾಕುತ್ತಿದ್ದಾರೆ. ಈ ಬೆಳವಣಿಗೆಯಿಂದ ಇಡೀ ಕುಟುಂಬ ಮುಜುಗರ ಅನುಭವಿಸುವಂತಾಗಿದೆ’ ಎಂದು ಹೇಳಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, . ಒತ್ತಾಯಪೂರ್ವಕವಾಗಿ ಮತಾಂತರ ಕಾನೂನುಬಾಹಿರ ಆಗಿದೆ. ಹಾಗಾಗಿ, ಬೇರೆ ಬೇರೆ ರಾಜ್ಯಗಳ ಕಾಯ್ದೆಯನ್ನು ಪರಿಶೀಲನೆ ಮಾಡಿ ರಾಜ್ಯದಲ್ಲೂ ಕಾಯ್ದೆ ಜಾರಿ ಮಾಡುವ ಬಗ್ಗೆ ಚರ್ಚಿಸುತ್ತೇವೆಂದು ಹೇಳಿದ್ದರು.
ಇತ್ತೀಚಿಗಷ್ಟೇ ಬೆಂಗಳೂರು ನಗರದಲ್ಲಿ ಮತಾಂತರದ ಆರೋಪ ಕೇಳಿಬಂದಿದ್ದು, ಆರ್ಎಸ್ಎಸ್ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ. ನಾರಾಯಣಸ್ವಾಮಿ ಎಂಬುವವರ ಮನೆಯಲ್ಲಿ ಸುಮಾರು 70 ರಿಂದ 80 ಮಕ್ಕಳನ್ನು ಸೇರಿಸಿ ಕ್ರೈಸ್ತ ಪ್ರಾರ್ಥನೆ ಮಾಡಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಅಲ್ಲದೆ ಈ ಕುರಿತು ಕಳೆದ ಭಾನುವಾರ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಮತಾಂತರಕ್ಕೆ ಪ್ರಯತ್ನಿಸಲಾಗಿದೆ ಎಂದು ಆರೋಪಿಸಲಾಗಿತ್ತು.
ಆರ್ಎಸ್ಎಸ್ ಕಾರ್ಯಕರ್ತರಿಂದ ಮಾಹಿತಿ ಪಡೆದ ಬ್ಯಾಡರಹಳ್ಳಿ ಪೊಲೀಸರು, ನಾರಾಯಣಸ್ವಾಮಿ ಮನೆಗೆ ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ಮಾಡಿದ್ದಾರೆ. ಕಳೆದ 10 ವರ್ಷದಿಂದ ಆ ಮನೆಯಲ್ಲಿ ಕೇವಲ ಪ್ರಾರ್ಥನೆ ಮಾಡಿದ್ದಾರಷ್ಟೇ. ಆದರೆ ಮತಾಂತರ ಮಾಡಿಲ್ಲವೆಂಬುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಸದ್ಯ ಕೊವಿಡ್ ನಿಯಮ ಉಲ್ಲಂಘಿಸಿ ಪ್ರಾರ್ಥನೆ ಹಿನ್ನೆಲೆ ನಾರಯಣಸ್ವಾಮಿ ವಿರುದ್ಧ ಎನ್ಡಿಎಮ್ಎ ಕೇಸ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
Advertisement