ಔಷಧಿ, ಆಕ್ಸಿಜನ್ ಕೊರತೆ ನೀಗಿಸಲು ಡ್ರಗ್ ಕಂಟ್ರೋಲರ್ ಕಚೇರಿಯಿಂದ ಸಹಾಯವಾಣಿ: ಸಚಿವ ಸುಧಾಕರ್

ಔಷಧ ಲಭ್ಯತೆ, ಆಕ್ಸಿಜನ್ ಕೊರತೆ ನೀಗಿಸಲು ಡ್ರಗ್ ಕಂಟ್ರೋಲರ್ ಕಚೇರಿಯಿಂದ ಸಹಾಯವಾಣಿ, ವಾರ್ ರೂಮ್ ನಿಂದ ಹಾಸಿಗೆ ಲಭ್ಯತೆ ಬಗ್ಗೆ ರಿಯಲ್ ಟೈಮ್ ಮಾಹಿತಿ, ಆಯಾ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಕೋವಿಡ್ ಅರಿವು ಮೂಡಿಸಲು...
ಸುಧಾಕರ್
ಸುಧಾಕರ್

ಮೈಸೂರು: ಔಷಧ ಲಭ್ಯತೆ, ಆಕ್ಸಿಜನ್ ಕೊರತೆ ನೀಗಿಸಲು ಡ್ರಗ್ ಕಂಟ್ರೋಲರ್ ಕಚೇರಿಯಿಂದ ಸಹಾಯವಾಣಿ, ವಾರ್ ರೂಮ್ ನಿಂದ ಹಾಸಿಗೆ ಲಭ್ಯತೆ ಬಗ್ಗೆ ರಿಯಲ್ ಟೈಮ್ ಮಾಹಿತಿ, ಆಯಾ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಕೋವಿಡ್ ಅರಿವು ಮೂಡಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮೈಸೂರಿನಲ್ಲಿ ಮರಣ ಪ್ರಮಾಣ ಶೇ.4 ರಷ್ಟಿದೆ. ಬಹುಪಾಲು ಮರಣಗಳು, ರೋಗಿಗಳು ತಡವಾಗಿ ಆಸ್ಪತ್ರೆಗೆ ಬಂದಿರುವುದರಿಂದ ಸಂಭವಿಸಿದೆ. ಹೃದಯ ಸಮಸ್ಯೆ ಮೊದಲಾದ ಬೇರೆ ಸಮಸ್ಯೆಗಳಿಂದಲೂ ಸಾವಾಗಿದೆ. ಸಾವಿನ ಆಡಿಟ್ ಮಾಡುತ್ತಿದ್ದು, ನಿಖರ ಕಾರಣದ ಬಗ್ಗೆ ವರದಿ ಬಂದಿದೆ. ಮೈಸೂರಿನಲ್ಲಿ ಆರೋಗ್ಯ ಸೌಲಭ್ಯಗಳು ಉತ್ತಮವಾಗಿದ್ದು, ಮರಣ ಪ್ರಮಾಣ ನಿಯಂತ್ರಿಸಬೇಕಿದೆ. ಜಿಲ್ಲೆಯಲ್ಲಿ ಒಂದೆರಡು ಆಸ್ಪತ್ರೆಗಳು ಸುವರ್ಣ ಆರೋಗ್ಯ ಸುರಕ್ಷ ಟ್ರಸ್ಟ್ ನಡಿ ಇರಲಿಲ್ಲ. ಈಗ ಮತ್ತೆ ಆಸ್ಪತ್ರೆಗಳು ನೋಂದಾಯಿಸಿಕೊಂಡಿವೆ. ಇನ್ನು ಶೇ.50ರಷ್ಟು ಹಾಸಿಗೆ ಕೋವಿಡ್‍ಗೆ ಮೀಸಲಿಡಲಾಗುತ್ತದೆ. ಆಸ್ಪತ್ರೆಗಳು ಕೊಡದಿದ್ದರೆ ಸರ್ಕಾರವೇ ಪಡೆಯಲಿದೆ ಎಂದರು.

ಸರ್ಕಾರಕ್ಕೆ ಜೀವನಕ್ಕಿಂತ ಜೀವ ಮುಖ್ಯ ಎಂಬ ಚಿಂತನೆ ಇದೆ. ಕೂಲಿ ಕಾರ್ಮಿಕರು, ಕೃಷಿ ಚಟುವಟಿಕೆ, ಕೈಗಾರಿಕೆ, ಕಚೇರಿಯಲ್ಲಿ ಕೆಲಸ ಮಾಡುವವರಿಗೆ ತೊಂದರೆ ಮಾಡಿಲ್ಲ. ಗುಂಪುಗೂಡುವುದನ್ನು ಹಾಗೂ ಸಾಂಕ್ರಾಮಿಕ ಹರಡಲು ಕಾರಣವಾಗುವ ಚಟುವಟಿಕೆಗಳನ್ನು ಮಾತ್ರ ನಿರ್ಬಂಧಿಸಲಾಗಿದೆ. ಏಪ್ರಿಲ್ 1 ರಿಂದ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚಿದೆ. ಪರೀಕ್ಷೆ, ಸಂಪರ್ಕ ಪತ್ತೆ, ಲಸಿಕೆ ಅಭಿಯಾನ ಉತ್ತಮವಾಗಿ ನಡೆಯುತ್ತಿದೆ. ಈವರೆಗೆ 7 ಲಕ್ಷ ಜನರಿಗೆ ಲಸಿಕೆ ನೀಡಿದ್ದು, ಇನ್ನೂ ಹೆಚ್ಚಿನವರಿಗೆ ನೀಡಲು ಸೂಚಿಸಲಾಗಿದೆ. ರಾಜ್ಯ ಸರ್ಕಾರ ಅತ್ಯಂತ ಸೂಕ್ತವಾದ ಕೋವಿಡ್ ಮಾರ್ಗಸೂಚಿ ರೂಪಿಸಿದೆ. ಆದರೆ ಇದು ಏಕಾಏಕಿಯಾದ ನಿರ್ಧಾರವಲ್ಲ. ನಿಯಮಪಾಲನೆಗೆ ಜನರು ಸಹಕರಿಸಬೇಕು ಎಂದು ಡಾ.ಕೆ.ಸುಧಾಕರ್ ಮನವಿ ಮಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com