ವಾರಾಂತ್ಯ ಲಾಕ್ ಡೌನ್: ಇಂದು ಸಂಜೆಯಿಂದಲೇ ನಮ್ಮ ಮೆಟ್ರೋ, ಬಿಎಂಟಿಸಿ ಬಸ್ ಸಂಚಾರ ಸ್ಥಗಿತ

ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಕಟ್ಟಿಹಾಕಲು ಶುಕ್ರವಾರ ರಾತ್ರಿಯಿಂದಲೇ ವಾರಾಂತ್ಯ ಲಾಕ್ ಡೌನ್ ಜಾರಿಯಾಗುತ್ತಿದ್ದು, ಶನಿವಾರ ಮತ್ತು ಭಾನುವಾರ ಕರುನಾಡು ಸಂಪೂರ್ಣ ಬಂದ್ ಆಗಲಿದೆ.
ಮೆಟ್ರೋ ರೈಲು (ಸಂಗ್ರಹ ಚಿತ್ರ)
ಮೆಟ್ರೋ ರೈಲು (ಸಂಗ್ರಹ ಚಿತ್ರ)

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಕಟ್ಟಿಹಾಕಲು ಶುಕ್ರವಾರ ರಾತ್ರಿಯಿಂದಲೇ ವಾರಾಂತ್ಯ ಲಾಕ್ ಡೌನ್ ಜಾರಿಯಾಗುತ್ತಿದ್ದು, ಶನಿವಾರ ಮತ್ತು ಭಾನುವಾರ ಕರುನಾಡು ಸಂಪೂರ್ಣ ಬಂದ್ ಆಗಲಿದೆ.

ವಾರಾಂತ್ಯ ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ಬಿಎಂಟಿಸಿ ಬಸ್ ಗಳು ಸಂಚರಿಸುವುದಿಲ್ಲ. ತುರ್ತು ಸೇವೆಗಾಗಿ ಮಾತ್ರ 500 ಬಸ್ ಗಳು ಸಂಚರಿಸಲಿವೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ ಸಿಖಾ ಅವರು ಮಾಹಿತಿ ನೀಡಿದ್ದಾರೆ.

ಇನ್ನು ನಗರದಲ್ಲಿ ನಮ್ಮ ಮೆಟ್ರೋ ಸಂಚಾರ ಸಹ ಸಂಪೂರ್ಣ ಬಂದ್ ಆಗಲಿದ್ದು, ಇಂದು ಸಂಜೆ 7.30 ರಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಯಾವುದೇ ಮೆಟ್ರೋ ರೈಲು ಸಂಚರಿಸುವುದಿಲ್ಲ. ಇಂದು ಸಂಜೆ 7.30ಕ್ಕೆ ಮೈಸೂರು ರಸ್ತೆ, ಬೈಯಪ್ಪನಹಳ್ಳಿ, ನಾಗಸಂದ್ರ ಮತ್ತು ಸಿಲ್ಕ್ ಸಂಸ್ಥೆಯಿಂದ ಕೊನೆಯ ರೈಲು ಹೊರಡಲಿದೆ ಎಂದು ಬಿಎಂಆರ್ ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

ಸೋಮವಾರ ಬೆಳಗ್ಗೆ 7ರಿಂದ ಎಂದಿನಂತೆ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.

ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಭಾರೀ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಪ್ರಿಲ್ 21 ರಿಂದ ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯ ಲಾಕ್ ಡೌನ್ ಘೋಷಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com