ಬೆಂಗಳೂರು: ಮೈಸೂರಿನ ಕನ್ನಡ ಪುಸ್ತಕ ಪ್ರೇಮಿ ಸೈಯದ್ ಇಸಾಕ್ ಅವರ ಗ್ರಂಥಾಲಯ ಬೆಂಕಿಗೆ ಆಹುತಿಯಾಗಿರುವುದರಿಂದ, ಅದರ ಮರು ಸ್ಥಾಪನೆಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ 8,243 ಪುಸ್ತಕಗಳನ್ನು ದಾನ ರೂಪದಲ್ಲಿ ನೀಡಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
‘ಗ್ರಂಥಾಲಯ ಬೆಂಕಿಗೆ ಆಹುತಿಯಾದ ಸುದ್ದಿ ತಿಳಿದ ತಕ್ಷಣವೇ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಿಗೆ ಇಲಾಖೆಯಿಂದ ಪುಸ್ತಕಗಳನ್ನು ಒದಗಿಸಲು ಸೂಚಿಸಲಾಗಿತ್ತು. ಅಲ್ಲದೆ, ಸೈಯದ್ ಇಸಾಕ್ ಅವರ ಗ್ರಂಥಾಲಯಕ್ಕೆ ನೆರವು ಒದಗಿಸುವಂತೆ ಕೋಲ್ಕತ್ತದ ರಾಜಾರಾಂ ಮೋಹನರಾಯ್ ಗ್ರಂಥಾಲಯ ಪ್ರತಿಷ್ಠಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ’ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ನಡುವೆ ಗ್ರಂಥಾಲಯ ಮರು ನಿರ್ಮಾಣ ಕುರಿತು ಹೇಳಿಕೆ ನೀಡಿರುವ ಗ್ರಂಥಾಲಯ ಇಲಾಖೆಯ ಅಧಿಕಾರಿಗಳು, ಕೊರೋನಾ ಕರ್ಫ್ಯೂ ಹಿನ್ನೆಲೆಯಲ್ಲಿ ಮರುನಿರ್ಮಾಣ ಕಾರ್ಯವನ್ನು ಮುಂದೂಡಲಾಗಿದೆ. ಶೀಘ್ರದಲ್ಲೇ ಗ್ರಂಥಾಲಯ ಮರುನಿರ್ಮಾಣ ಮಾಡುವ ದಿನಾಂಕವನ್ನು ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
Advertisement