ಬೆಂಗಳೂರು: ರಾಜ್ಯದ ರೈತರ ಆದಾಯ ದ್ವಿಗುಣಗೊಳಿಸಲು ಬಹಳ ಮುತುವರ್ಜಿ ವಹಿಸಿಕೊಂಡಿದ್ದು, 2023-24ಕ್ಕೆ ರೈತರ ಆದಾಯ ದ್ವಿಗುಣಗೊಳಿಸಲು ಬಹಳಷ್ಟು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಲಸಿಕೆ ಬಸ್ ಗೆ ಚಾಲನೆ ನೀಡಿ ಮಾತನಾಡಿದ ಅವರು, ರೈತರ ಕಲ್ಯಾಣಕ್ಕೆ ಯೋಜನೆಗಳನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ನಮ್ಮ ಜೊತೆ ಕೆಲಸ ಮಾಡಲು ಸಿದ್ಧವಿದೆ. ರೈತರನ್ನೊಳಗೊಂಡ ಸಮಿತಿಯನ್ನು ರಚಿಸಿ ರೈತರ ಆದಾಯ ದ್ವಿಗುಣಗೊಳಿಸಲು ಏನೇನು ಕ್ರಮಗಳನ್ನು ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರ ಜೊತೆ ಚರ್ಚಿಸಲಾಗುವುದು ಎಂದರು.
ರಾಜ್ಯದ ರೈತರ ಆದಾಯ ವರದಿಯನ್ನು ಸಿದ್ದಪಡಿಸಿ ಆದಾಯ ದ್ವಿಗುಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಕೃಷಿ ವಿಶ್ವವಿದ್ಯಾಲಯಗಳನ್ನು ಬಳಕೆ ಮಾಡಿ ಬೀಜ, ರಸಗೊಬ್ಬರ ನಿರ್ವಹಣೆ ಮಾಡಿ ಭೂಮಿಯ ಫಲವತ್ತತೆಯನ್ನು ಹೇಗೆ ಸುಧಾರಿಸಬೇಕೆಂದು ಅಧ್ಯಯನ ಮಾಡಲು ಸಮಿತಿಯನ್ನು ರಚಿಸಲಾಗುವುದು. ಇದರಲ್ಲಿ ಕೃಷಿ, ಹೈನುಗಾರಿಕೆ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ ಹೀಗೆ ಎಲ್ಲಾ ಕೃಷಿ ಸಂಬಂಧಿ ಚಟುವಟಿಕೆಗಳನ್ನು, ಕೃಷಿ ಉತ್ಪನ್ನಗಳ ಮೌಲ್ಯ ವೃದ್ಧಿಸುವುದು, ಅವುಗಳ ಉತ್ತಮ ಸಂಸ್ಕರಣೆ ಮಾಡುವ ಸಲುವಾಗಿ ವಿಶೇಷವಾದ ಕಾರ್ಯಪಡೆಯನ್ನು ರಚಿಸಲಾಗುವುದು ಎಂದು ತಿಳಿಸಿದರು.
ರೈತರ ಆದಾಯ ದ್ವಿಗುಣಗೊಳಿಸುವ ಯೋಜನೆಯ ಮುಖ್ಯಸ್ಥರಾದ ಅಶೋಕ್ ದಲ್ವಾಯಿ ದೆಹಲಿಯಿಂದ ಬಂದಿದ್ದರು ಎಂದು ಕೂಡ ಸಿಎಂ ಹೇಳಿದರು.
Advertisement