ರೈತರ ಆದಾಯ ದ್ವಿಗುಣ: ರಾಜ್ಯದ ಕಾರ್ಯತಂತ್ರ ರೂಪಿಸಲು ರೈತರ ಸಮಿತಿ ರಚನೆ- ಮುಖ್ಯಮಂತ್ರಿ ಘೋಷಣೆ

ಕರ್ನಾಟಕ ರಾಜ್ಯದಲ್ಲಿ ನಿರ್ದಿಷ್ಟವಾಗಿ ಹಮ್ಮಿಕೊಳ್ಳಬಹುದಾದ ಕಾರ್ಯತಂತ್ರಗಳ ಕುರಿತು ವರದಿ ಸಲ್ಲಿಸಲು ರೈತರನ್ನೊಳಗೊಂಡ ಸಮಿತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ರಾಜ್ಯವು ರೈತರ ಆದಾಯ ದ್ವಿಗುಣಗೊಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲು ಉತ್ಸುಕವಾಗಿದ್ದು, ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕರ್ನಾಟಕ ರಾಜ್ಯದಲ್ಲಿ ನಿರ್ದಿಷ್ಟವಾಗಿ ಹಮ್ಮಿಕೊಳ್ಳಬಹುದಾದ ಕಾರ್ಯತಂತ್ರಗಳ ಕುರಿತು ವರದಿ ಸಲ್ಲಿಸಲು ರೈತರನ್ನೊಳಗೊಂಡ ಸಮಿತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಚಿಸಿರುವ ಉನ್ನತಾಧಿಕಾರ ಸಮಿತಿಯ ಅಧ್ಯಕ್ಷ, ನಿವೃತ್ತ ಐ ಎ ಎಸ್ ಅಧಿಕಾರಿ ಅಶೋಕ್ ದಳವಾಯಿ ಅವರ ವರದಿಯ ಮುಖ್ಯಾಂಶಗಳ ಕುರಿತು ಪ್ರಾತ್ಯಕ್ಷಿಕೆ ಹಾಗೂ ಚರ್ಚೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತ  ಈ ವಿಷಯ ತಿಳಿಸಿದರು.

ಇಂದು ಕೃಷಿ ಉತ್ಪಾದನೆ ಕೇಂದ್ರಿತವಾಗಿದ್ದು, ಆದಾಯ ಕೇಂದ್ರಿತವಾಗಬೇಕಿದೆ. ರೈತರ ಮನಸ್ಥಿತಿಯಲ್ಲಿ ಬದಲಾವಣೆಯಾಗಬೇಕಿದೆ. ಈ ನಿಟ್ಟಿನಲ್ಲಿ ಸಮಿತಿಯು ಕೇಂದ್ರ ಸರ್ಕಾರದ ಸಮಿತಿಯೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಬೇಕು. ಕರ್ನಾಟಕವು ರಾಜ್ಯದ ಕೃಷಿ ಚಟುವಟಿಕೆ, ಹವಾಮಾನ, ಭೂ ಮಾಲೀಕತ್ವ ಮೊದಲಾದ ವಿಷಯಗಳಲ್ಲಿ ಅತ್ಯುತ್ತಮ ದತ್ತಾಂಶವನ್ನು ಹೊಂದಿದ್ದು, ಇದರ ಆಧಾರದಲ್ಲಿ ಕಾರ್ಯತಂತ್ರ ರೂಪಿಸುವ ಕುರಿತು ಸಮಿತಿಯು ವರದಿ ನೀಡಬೇಕು ಎಂದು ಮುಖ್ಯಮಂತ್ರಿಗಳು ಆಶಯ ವ್ಯಕ್ತಪಡಿಸಿದರು.

ಕೃಷಿ ಸಚಿವರ ನೇತೃತ್ವದಲ್ಲಿ ಸಮಿತಿ: ಇದಲ್ಲದೆ, ಕೃಷಿ ವಿಶ್ವವಿದ್ಯಾಲಯಗಳ ಸಂಶೋಧನೆಗಳು ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತಿರಬೇಕು.  ರಾಜ್ಯದ ಕೃಷಿ ವಲಯದಲ್ಲಿ ಬೀಜ, ಗೊಬ್ಬರ ಹಾಗೂ ಕೀಟಗಳ ನಿರ್ವಹಣೆಗೆ ಕೃಷಿ ವಿಶ್ವವಿದ್ಯಾಲಯಗಳ ನೆರವಿನಿಂದ ಕ್ರಮ ವಹಿಸಲು, ಕೃಷಿ ಸಚಿವರ ಅಧ್ಯಕ್ಷತೆಯಲ್ಲಿ ಉನ್ನತಾಧಿಕಾರ ಸಮಿತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಾಕ್ಸ್ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪನೆ: ಕೃಷಿ, ತೋಟಗಾರಿಕೆ, ಡೈರಿ, ಪ್ರಾಣಿಜನ್ಯ ಉತ್ಪನ್ನಗಳ ಸಂಸ್ಕರಣೆ ಹಾಗೂ ಗ್ರಾಮೀಣ ಮತ್ತು ಗುಡಿ ಕೈಗಾರಿಕೆಯ ಮೂಲಕ ರೈತರಿಗೆ ಹೆಚ್ಚಿನ ಆದಾಯ ತರಲು ಹಾಗೂ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಉದ್ಯೋಗ ಸೃಜನೆಗೆ ಪೂರಕವಾಗಿ ಸೆಕೆಂಡರಿ ಅಗ್ರಿಕಲ್ಚರ್ (ಡೈರೆಕ್ಟೊರೇಟ್) ನಿರ್ದೇಶನಾಲಯವನ್ನು ಸ್ಥಾಪಿಸಲಾಗುವುದು. ಇದರಿಂದ ಕೃಷಿ ಉತ್ಪನ್ನಗಳಿಂದ ಉಪ ಕೃಷಿ ಉತ್ಪನ್ನ ತಯಾರಿಸಲಾಗುವುದು. ಇದರಿಂದ ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿ ಆಗುತ್ತದೆ. ಒಟ್ಟಾರೆ ರೈತರ ಆದಾಯ ಹೆಚ್ವುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಸಭೆಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್, ತೋಟಗಾರಿಕಾ ಸಚಿವ ಮುನಿರತ್ನ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com