ಬೆಂಗಳೂರು: ದೆಹಲಿ ಪ್ರವಾಸ ಮುಗಿಸಿಕೊಂಡು ಬಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮ ಪ್ರತಿನಿಧಿಗಳ ಮುಂದೆ ವಿವರ ನೀಡಿದ್ದಾರೆ.
ನಿನ್ನೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಪ್ರತಿದಿನ 5 ಲಕ್ಷ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅದಕ್ಕೆ ಲಸಿಕೆ ಪೂರೈಸಬೇಕೆಂದು ಕೇಳಿಕೊಂಡಿದ್ದೇನೆ ಎಂದರು. ಅದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ನಮ್ಮ ಉದ್ದೇಶ ಸೆಪ್ಟೆಂಬರ್ ತಿಂಗಳಿನಿಂದ ಪ್ರತಿದಿನ 5 ಲಕ್ಷ ಲಸಿಕೆ ನೀಡುವುದಾಗಿದೆ ಎಂದರು.ಮೇಕೆದಾಟು, ಮಹದಾಯಿ, ತುಂಗಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಜನಶಕ್ತಿ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೇನೆ. ಸುಪ್ರೀಂ ಕೋರ್ಟ್ ನಲ್ಲಿರುವ ಜಲ ವಿವಾದಗಳ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಿದ್ದೇನೆ ಎಂದರು.
ಹಣಕಾಸು ಸಚಿವೆಯನ್ನು ಭೇಟಿ ಮಾಡಿ ಜಿಎಸ್ ಟಿ ಅನುದಾನ ನೀಡಿಕೆಯ ಅವಧಿ ಮುಂದುವರಿಕೆ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ಕರ್ನಾಟಕಕ್ಕೆ ಮೆಗಾ ಟೆಕ್ಸ್ಟ್ ಟೈಲ್ ಪಾರ್ಕ್ ಸ್ಥಾಪನೆಗೆ ಜವಳಿ ಖಾತೆ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ ಎಂದು ವಿವರ ನೀಡಿದರು. ಇದರಿಂದ ರಾಜ್ಯದ ಜನತೆಗೆ ಹೆಚ್ಚಿನ ಮಟ್ಟದ ಉದ್ಯೋಗ ಕಲ್ಪಿಸುವ ಕಾರ್ಯಕ್ರಮವಾಗಿದೆ ಎಂದರು.
ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಎಲ್ಲಾ ವಿವರಗಳನ್ನು ಪಡೆದುಕೊಂಡಿದ್ದಾರೆ. ಯಾವ ಹಂತದಲ್ಲಿದೆ ತನಿಖೆ ಎಂಬ ಬಗ್ಗೆ ವಿವರ ಹೇಳಿಲ್ಲ ಎಂದರು.
30ನೇ ತಾರೀಖು ತಜ್ಞರ ಸಮಿತಿ ಸಭೆ ಇದೆ. ಅದರಲ್ಲಿ ಕೊರೋನಾ ಮೂರನೇ ಅಲೆ ನಿಯಂತ್ರಣ, ಹಬ್ಬಹರಿದಿನಗಳ ಆಚರಣೆಗೆ ಕ್ರಮ ಕೈಗೊಳ್ಳುವ ಕುರಿತು ಚರ್ಚೆಯಾಗಲಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.
Advertisement