ಬೆಂಗಳೂರು: ಮಕ್ಕಳ ಸಾರಿ, ಐಎಲ್ಐ ಹಾಗೂ ಶಂಕಿತ ಕೋವಿಡ್ ಪ್ರಕರಣಗಳ ಮೇಲೆ ಹೆಚ್ಚಿನ ನಿಗಾ ಇರಿಸಲಾಗಿದೆ ಎಂದು ಬಿಬಿಎಂಪಿ ಹೇಳಿದೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು, ಕೊರೋನಾ ಮೂರನೇ ಅಲೆ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಮುಖ್ಯಮಂತ್ರಿಗಳು ನೀಡಿರುವ ನಿರ್ದೇಶನಗಳನ್ನು ಪಾಲನೆ ಮಾಡಲಾಗುತ್ತಿದೆ. ಇದರಂತೆ, ಮಕ್ಕಳ ಸಾರಿ, ಐಎಲ್ಐ ಹಾಗೂ ಶಂಕಿತ ಕೋವಿಡ್ ಪ್ರಕರಣಗಳು ಕಂಡು ಬರುತ್ತಿದ್ದಂತೆಯೇ ಎಲ್ಲಾ ಶಿಶು ವೈದ್ಯರು, ಕುಟುಂಬ ವೈದ್ಯರು, ವೈದ್ಯಕೀಯ ಸಂಸ್ಥೆಗಳು ಹಾಗೂ ಆಸ್ಪತ್ರೆಗಳು ಕೆಪಿಎಂಇ ಪೋರ್ಟಲ್ ನಲ್ಲಿ ವರದಿ ಮಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಈ ಕುರಿತು ಪರಿಶೀಲನೆ ನಡೆಸಲು ನೋಡಲ್ ಅಧಿಕಾರಿಯಾಗಿ ಡಾ.ದೀಪಕ್ ನಾಡಿಗ್ ಅವರನ್ನು ನಿಯೋಜಿಸಲಾಗಿದೆ. ಪೋರ್ಟಲ್ ನಲ್ಲಿ ಹೆಸರು, ವಿಳಾಸ ಹಾಗೂ ಇತರೆ ಮಾಹಿತಿಗಳನ್ನು ಸೂಕ್ತ ರೀತಿಯಲ್ಲಿ ದಾಖಲು ಮಾಡಬೇಕೆಂದು ಸುತ್ತೋಲೆಯನ್ನೂ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ವೈದ್ಯಕೀಯ ಸಂಸ್ಥೆಗಳು ಹಾಗೂ ಆಸ್ಪತ್ರೆಗಳಿಗೆ ಬರುವ ಶೇ.10ರಷ್ಟು ಮಕ್ಕಳ ಪ್ರಕರಣಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸುವಂತೆ ಹಾಗೂ ಪ್ರಕರಣಗಳ ಮೇಲೆ ಹೆಚ್ಚಿನ ನಿಗಾ ಇರಿಸುವಂತೆ ಸೂಚಿಸಲಾಗಿದೆ. ಕೋವಿಡ್ ಪಾಸಿಟಿವ್ ಬಂದ ಸ್ಯಾಂಪಲ್ ಗಳನ್ನು ಜೀನೋಮ್ ಸೀಕ್ವೆನ್ಸಿಂಗ್'ಗೆ ಕಳುಹಿಸಲಾಗುತ್ತದೆ ಎಂದಿದ್ದಾರೆ.
Advertisement