ವಿಜಯಪುರ: ಸಿಂದಗಿಯಲ್ಲಿ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಜೈಲಿನಲ್ಲಿ ಅನುಮಾನಸ್ಪದವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಐವರು ಪೊಲೀಸರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
ವಿಜಯಪುರ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಆನಂದ ಕುಮಾರ್ ಅವರು, ಸಿಂದಗಿ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸಂಗಮೇಶ್ ಹೊಸಮನಿ, ಸಿಬ್ಬಂದಿ ಎನ್ ಬಿ ನಾದ್, ಗುರುರಾಜ ಮಾಶ್ಯಾಳ, ಅನಂತ್ ಪಾಟೀಲ್, ಪಿ ಎಲ್ ಪಟ್ಟೇದ್ ಎಂಬುವವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಕರ್ತವ್ಯ ಲೋಪ ಆರೋಪದಡಿ ಐವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದ್ದು, ಸದ್ಯ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ ಎಂದು ಆನಂದ್ ಕುಮಾರ್ ತಿಳಿಸಿದ್ದಾರೆ.
ಸಿಂದಗಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಿ ಆಕೆಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿ 37 ವರ್ಷದ ದೇವಿಂದ್ರ ಸಂಗೋಗಿಯನ್ನು ಬಂಧಿಸಿದ್ದರು. ಆದರೆ, ಭಾನುವಾರ ನಸುಕಿನ ಜಾವ ಆರೋಪಿ ಸಿಂದಗಿ ಪೊಲೀಸ್ ಠಾಣೆಯ ಶೌಚಾಲಯದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದನು.
Advertisement