ಬೆಂಗಳೂರು ಗ್ರಾಮಾಂತರ ಜಿಲ್ಲೆ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಘೋಷಣೆ

ರಾಜ್ಯ ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಿಗೆ ಚುನಾವಣಾ ವೇಳಾಪಟ್ಟಿ ಘೋಷಣೆ ಮಾಡಿದೆ.
ಚುನಾವಣಾ ಆಯೋಗ
ಚುನಾವಣಾ ಆಯೋಗ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಿಗೆ ಚುನಾವಣಾ ವೇಳಾಪಟ್ಟಿ ಘೋಷಣೆ ಮಾಡಿದೆ.

ರಾಜ್ಯ ಚುನಾವಣಾ ಆಯೋಗವು 2021ರ ಜೂನ್ ನಿಂದ 2022ರ ಮಾರ್ಚ್ ವರೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ಯ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 308ಎಎ ಮತ್ತು 308ಎಬಿ ಅನ್ವಯ ಚುನಾವಣೆ ವೇಳಾಪಟ್ಟಿಯನ್ನು ಘೋಷಿಸಿದೆ.

ಅವಧಿ ಮುಕ್ತಾಯವಾಗುವ ಗ್ರಾಮ ಪಂಚಾಯಿತಿಗಳಾದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಅರಳುಮಲ್ಲಿಗೆ ಗ್ರಾಮ ಪಂಚಾಯಿತಿಯ 18 ಸದಸ್ಯ ಸ್ಥಾನಗಳು, ದರ್ಗಾಜೋಗಿಹಳ್ಳಿಯ ಗ್ರಾಮ ಪಂಚಾಯಿತಿಯ 24 ಸದಸ್ಯ ಸ್ಥಾನಗಳು ಹಾಗೂ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿಯ 15 ಸದಸ್ಯ ಸ್ಥಾನಗಳು, ನಲ್ಲೂರು ಗ್ರಾಮ ಪಂಚಾಯಿತಿಯ 15 ಸದಸ್ಯ ಸ್ಥಾನಗಳಿಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ.

ಸಾರ್ವತ್ರಿಕ ಚುನಾವಣೆಯಲ್ಲಿ ಸದಸ್ಯರು ಆಯ್ಕೆಯಾಗದ (ನ್ಯಾಯಾಲಯ ಪ್ರಕರಣ/ಇತರೆ ಕಾರಣಗಳಿಗಾಗಿ) ಪೂರ್ಣ ಗ್ರಾಮಪಂಚಾಯಿತಿಯಾದ ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಗ್ರಾಮ ಪಂಚಾಯಿತಿಯ 21 ಸದಸ್ಯ ಸ್ಥಾನಗಳು ಹಾಗೂ 2021ನೇ ಸಾಲಿನಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ದೊಡ್ಡಬಳ್ಳಾಪುರ ತಾಲ್ಲೂಕಿನ 15-ತಿಪ್ಪೂರು ಗ್ರಾಮ ಪಂಚಾಯಿತಿ, ಹೊಸಕೋಟೆ ತಾಲ್ಲೂಕಿನ 14-ಕುಂಬಳಹಳ್ಳಿ, 21-ದೇವನಗುಂದಿ ಹಾಗೂ 26-ಮುತ್ಸಂದ್ರ ಗ್ರಾಮ ಪಂಚಾಯಿತಿಗಳ ತಲಾ 1 ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ. ಚುನಾವಣಾ ವೇಳಾಪಟ್ಟಿಯಂತೆ 2021ರ ಡಿಸೆಂಬರ್ 13ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. 

2021ರ ಡಿಸೆಂಬರ್ 17ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಡಿಸೆಂಬರ್ 18ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು. ಡಿಸೆಂಬರ್ 20ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಡಿಸೆಂಬರ್ 27ರಂದು ಮತದಾನ ಅವಶ್ಯವಿದ್ದರೆ ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 29ರಂದು ಮರು ಮತದಾನ ಅವಶ್ಯವಿದ್ದರೆ, ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಮರುಮತದಾನ ನಡೆಯಲಿದೆ. ಡಿಸೆಂಬರ್ 30ರ ಗುರುವಾರದಂದು ತಾಲ್ಲೂಕು ಕೇಂದ್ರಗಳಲ್ಲಿ ಬೆಳಿಗ್ಗೆ 8:00 ಗಂಟೆಯಿಂದ ಮತಗಳ ಏಣಿಕೆ ಕಾರ್ಯ ನಡೆಯಲಿದ್ದು, ಡಿಸೆಂಬರ್ 30ರಂದು ಚುನಾವಣಾ ಮಾದರಿ ನೀತಿ ಸಂಹಿತೆ ಮುಕ್ತಾಯಗೊಳ್ಳಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com