ರಾಜ್ಯಕ್ಕೆ ಕಾಲಿಟ್ಟ 'ಓಮಿಕ್ರಾನ್': ಹೊಸ ಮಾರ್ಗಸೂಚಿ ಕುರಿತು ತಜ್ಞರೊಂದಿಗೆ ಇಂದು ಸಿಎಂ ಬೊಮ್ಮಾಯಿ ಸಭೆ

ಭಾರತದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ಕಟ್ಟೆಚ್ಚರ ವಹಿಸಲು ಮುಂದಾಗಿದ್ದು, ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು ಭೇಟಿಯಾದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು ಭೇಟಿಯಾದರು.

ಬೆಂಗಳೂರು: ಭಾರತದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ಕಟ್ಟೆಚ್ಚರ ವಹಿಸಲು ಮುಂದಾಗಿದ್ದು, ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಿ ಸೋಂಕು ನಿಯಂತ್ರಣಕ್ಕೆ ಅಗತ್ಯ ನಿರ್ಬಂಧಗಳು ಹಾಗೂ ಚಿಕಿತ್ಸೆಗೆ ಅಗತ್ಯವಿರುವ ಸಿದ್ಧತೆಗಳ ಕುರಿತು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಇಂದು ಮಧ್ಯಾಹ್ನ 1 ಗಂಟೆಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ರಾಷ್ಟ್ರ ರಾಜಧಾನಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಲಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು ದೆಹಲಿಯಲ್ಲಿ ಭೇಟಿಯಾದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿಯವರು, ಹೊಸ ರೂಪಾಂತರದ ಸೋಂಕು ಹರಡುವಿಕೆಯನ್ನು ತಡೆಯಲು ಕಾರ್ಯತಂತ್ರಗಳ ಕುರಿತು ಚರ್ಚಿಸಲು ಶುಕ್ರವಾರ ಮಧ್ಯಾಹ್ನ ಬೆಂಗಳೂರಿನಲ್ಲಿ ತಜ್ಞರೊಂದಿಗೆ ತುರ್ತು ಸಭೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಸೋಂಕು ಹರಡುವಿಕೆಯನ್ನು ತಡೆಯಲು ಹೊಸ ಮಾರ್ಗಸೂಚಿಗಳ ಅವಶ್ಯಕತೆಯಿದೆ ಮತ್ತು ಶುಕ್ರವಾರದ ಸಭೆಯ ನಂತರ ಅವುಗಳ ಕುರಿತು ನಿರ್ಧರಿಸಲಾಗುತ್ತದೆ. ನಮಗೆ ತಿಳಿದುಬಂದಿರುವ ಮಾಹಿತಿಗಳ ಪ್ರಕಾರ ಹೊಸ ರೂಪಾಂತರಿ ಸೋಂಕು ಹರಡಿದರೂ ಸೋಂಕಿನಿಂದ ಆಸ್ಪತ್ರೆಗೆ ಸೇರಿಸುವ ಪರಿಸ್ಥಿತಿಗಳು ಎದುರಾಗುವುದಿಲ್ಲ ಎಂದು ತಿಳಿದುಬಂದಿದೆ. ಆದರೂ ನಾವು ವೈದ್ಯಕೀಯ ವರದಿ ಬಂದ ಕೂಡಲೇ ನಿಯಮಗಳಂತೆಯೇ ಚಿಕಿತ್ಸೆಗಳನ್ನು ನೀಡಲು ಕ್ರಮಗಳನ್ನು ಕೈಗೊಳ್ಳುತ್ತೇವೆಂದು ತಿಳಿಸಿದ್ದಾರೆ.

ಸೋಂಕಿತರ ವೈದ್ಯಕೀಯ ವರದಿ ಶುಕ್ರವಾರ ನಮ್ಮ ಕೈ ಸೇರಲಿದ್ದು, ವರದಿಯನ್ನು ಪರಿಶೀಲಿಸಿದ ಬಳಿಕ ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳ ಕುರಿತು ಸ್ಪಷ್ಟ ಮಾಹಿತಿಗಳು ತಿಳಿದುಬರಲಿದೆ ಎಂದಿದ್ದಾರೆ.

ಗುರುವಾರ ಸಿಎಂ ಬೊಮ್ಮಾಯಿ ಅವರು ಮಾಂಡವಿಯಾ ಅವರೊಂದಿಗೆ ಎರಡು ಸುತ್ತಿನ ಮಾತುಕತೆ ನಡೆಸಿದರು. ಓಮಿಕ್ರಾನ್ ಸೋಂಕು ಪತ್ತೆಯಾಗುವುದಕ್ಕೂ ಮುನ್ನ ಹಾಗೂ ಸೋಂಕು ಪತ್ತೆಯಾದ ಬಳಿಕ ಎರಡು ಬಾರಿ ಮಾತುಕತೆ ನಡೆಸಿದರು. ಈ ವೇಳೆ ಓಮಿಕ್ರಾನ್ ಸೋಂಕು ಸೇರಿದಂತೆ ಹಲವು ವಿಚಾರಗಳ ಬಗ್ಗೆಯೂ ಮುಖ್ಯಮಂತ್ರಿಗಳು ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಬುಧವಾರವೇ ಸೋಂಕಿತರ ವರದಿಗಳು ಕೇಂದ್ರ ಸರ್ಕಾರಕ್ಕೆ ಲಭ್ಯವಾಗಿದ್ದು, ಗುರುವಾರ ಈ ಕುರಿತು ಮಾಹಿತಿ ನೀಡಿದೆ ಎಂದು ತಿಳಿದುಬಂದಿದೆ.

ಕೇಂದ್ರ ಆರೋಗ್ಯ ಸಚಿವರು ರಾಜ್ಯದ ಕೋವಿಡ್ ನಿರ್ವಹಣೆಯನ್ನು ಶ್ಲಾಘಿಸಿದರು: ಸಿಎಂ
ನಾವು ಬಹಳ ಎಚ್ಚರಿಕೆಯಿಂದ ಹಾಗೂ ಜಾಗರೂಕರಾಗಿದ್ದೇವೆ. ಓಮಿಕ್ರಾನ್ ನಂತರ ಹೊಸ ತಳಿಗಳು ಎಲ್ಲೆಲ್ಲಿ ಕಂಡುಬಂದರೂ ಸೋಂಕಿತರ ಸಂಪರ್ಕಗಳನ್ನು ಪತ್ತೆಹಚ್ಚುವುದು ನಮ್ಮ ಕರ್ತವ್ಯವಾಗಿದೆ. ನಾವು ಈಗಾಗಲೇ ಅದರಲ್ಲಿ ಮುಂದೆ ಇದ್ದೇವೆ. ತಜ್ಞರ ಅಭಿಪ್ರಾಯಗಳನ್ನು ಪಡೆಯಲು ಪ್ರಯತ್ನಿಸಲಾಗುತ್ತಿದ್ದು, ಈ ಕುರಿತು ಭಾರತ ಸರ್ಕಾರದ ಮಾರ್ಗಸೂಚಿಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದೇ ವೇಳೆ ಹೊಸ ರೂಪಾಂತರದ ಪ್ರಕರಣಗಳನ್ನು ವರದಿ ಮಾಡುತ್ತಿರುವ ದೇಶಗಳಿಂದ ಅಂತರರಾಷ್ಟ್ರೀಯ ವಿಮಾನಯಾನವನ್ನು ನಿಷೇಧಿಸಬೇಕೆಂದು ಕೆಲವು ರಾಜ್ಯಗಳು ಒತ್ತಾಯಿಸುತ್ತಿರುವ ಪ್ರಶ್ನೆಗೆ ಉತ್ತರಿಸಿದ ಸಿಎಂ, ಈ ಕುರಿತು ಕೇಂದ್ರ ನಾಗರಿಕ ವಿಮಾನಯಾನ ಸಚಿವರೊಂದಿಗೆ ಚರ್ಚೆ ನಡೆಸಲಾಗಿದ್ದು, ಈ ಕುರಿತು ಸಮಗ್ರವಾಗಿ ಪರಿಶೀಲಿಸುವ ಅಗತ್ಯವಿದೆ ಎಂದು ತಿಳಿಸಿದರು.

ಕೇಂದ್ರ ಆರೋಗ್ಯ ಸಚಿವರು ರಾಜ್ಯದಲ್ಲಿನ ಕೋವಿಡ್ ನಿರ್ವಹಣೆ ಮತ್ತು ಲಸಿಕೆ ಅಭಿಯಾನಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಲಸಿಕೆ ಅಭಿಯಾನದಲ್ಲಿನ ವೇಗವನ್ನು ಇದೇ ರೀತಿ ಕಾಪಾಡಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆಂದು ಹೇಳಿದರು.

ಲಸಿಕೆ ಅಭಿಯಾನ ಮುಂದುವರಿಸಲು ನಮ್ಮಲ್ಲಿ ಸಾಕಷ್ಟು ಲಸಿಕೆಗಳಿವೆ. ನಮ್ಮ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವ ಕುರಿತು, ತಜ್ಞರೊಂದಿಗೆ ಚರ್ಚಿಸಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ನಂತರ ಈ ಕುರಿತು ಕೇಂದ್ರಕ್ಕೆ ಮಾಹಿತಿ ನೀಡಲಾಗುತ್ತದೆ ಎಂದಿದ್ದಾರೆ.

ಡೆಲ್ಟಾಗಿಂತ ಓಮಿಕ್ರಾನ್ ರೋಗಲಕ್ಷಣಗಳು ಭಿನ್ನವಾಗಿದೆಯೇ?
ಡೆಲ್ಟಾ ಸೋಂಕಿನಿಂತಯೇ ಓಮಿಕ್ರಾನ್ ಸೋಂಕಿತರಲ್ಲು ವಿಪರೀತ ದಣಿವು ಮತ್ತು ದೇಹದ ನೋವು, ವಾಸನೆ ಅಥವಾ ರುಚಿ ತಿಳಿಯದಿರುವ ಲಕ್ಷಣಗಳು ಕಂಡು ಬರುತ್ತಿವೆ.

ಈ ಸಂಬಂಧ ವಿಶ್ವ ಆರೋಗ್ಯ ಸಂಸ್ಥೆ ಓಮಿಕ್ರಾನ್ ಸೋಂಕಿನ ಲಕ್ಷಣಗಳು ಭಿನ್ನವಾಗಿಲ್ಲ ಇಂದು ಹೇಳಿದರೆ, ದಕ್ಷಿಣ ಆಫ್ರಿಕಾದ ವೈದ್ಯರು ಹೆಚ್ಚಿನ ಓಮಿಕ್ರಾನ್ ರೋಗಿಗಳಿಗೆ ತೀವ್ರವಾದ ಆಯಾಸ, ದೇಹದ ನೋವು, ಜೊತೆಗೆ ನೋಯುತ್ತಿರುವ ಗಂಟಲು, ಒಣ ಕೆಮ್ಮು ಮತ್ತು ಜ್ವರದಂತಹ ಸೌಮ್ಯ ಸಮಸ್ಯೆಗಳಿವೆ ಎಂದು ಹೇಳಿದ್ದಾರೆ.

ರುಚಿ ಅಥವಾ ವಾಸನೆ ತಿಳಿಯದಿರುವುದು ಮತ್ತು ಕಡಿಮೆ ಆಮ್ಲಜನಕವು ಡೆಲ್ಟಾದ ಲಕ್ಷಣಗಳಾಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com