ಕರಾವಳಿಯಲ್ಲಿ ಶಾಂತಿ ಕಾಪಾಡಲು ಸರ್ವ ಧರ್ಮೀಯರ ಸಹಕಾರ ಅಗತ್ಯ, ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ: ರಾಜ್ಯ ಸರ್ಕಾರ

ಕರ್ನಾಟಕದ ಕರಾವಳಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರ ನಿಯಂತ್ರಣಕ್ಕೆ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು. ಕರಾವಳಿಯಲ್ಲಿ ಶಾಂತಿ ಕಾಪಾಡಲು ಸರ್ವ ಧರ್ಮೀಯರ ಸಹಕಾರ ಅಗತ್ಯ ಎಂದು ರಾಜ್ಯ ಸರ್ಕಾರ ಹೇಳಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಳಗಾವಿ: ಕರ್ನಾಟಕದ ಕರಾವಳಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರ ನಿಯಂತ್ರಣಕ್ಕೆ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು. ಕರಾವಳಿಯಲ್ಲಿ ಶಾಂತಿ ಕಾಪಾಡಲು ಸರ್ವ ಧರ್ಮೀಯರ ಸಹಕಾರ ಅಗತ್ಯ ಎಂದು ರಾಜ್ಯ ಸರ್ಕಾರ ಹೇಳಿದೆ.

ಬುಧವಾರ ವಿಧಾನಸಭೆಯ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಯು.ಟಿ.ಖಾದರ್, ಉಪ್ಪಿನಂಗಡಿಯಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಸಂಭವಿಸಿದ ಘಟನೆಗಳ ಬಗ್ಗೆ ಪ್ರಸ್ತಾಪಿಸಿದ ವಿಷಯಕ್ಕೆ ಅವರು ಉತ್ತರಿಸಿದ ಅವರು, 'ರಾಜ್ಯದಲ್ಲಿ ಶಾಂತಿ, ಸೌಹಾರ್ದತೆ, ಅದರಲ್ಲೂ ಕೋಮುಸೌಹಾರ್ದತೆ ಕಾಪಾಡುವುದು ನಮ್ಮ ಪಾಲಿಗೆ ಮುಖ್ಯ. ಕರಾವಳಿಯಲ್ಲಿ ಶಾಂತಿಯನ್ನು ಕಾಪಾಡಲು ಎಲ್ಲ ಧರ್ಮೀಯರು ಸರ್ಕಾರಕ್ಕೆ ಸಹಕಾರ ನೀಡಬೇಕು. ಯು.ಟಿ.ಖಾದರ್ ಅವರಿಗೆ ಯಾವುದೆ ಆತಂಕ ಬೇಡ. ಯಾವುದಾದರೂ ನಿರ್ದಿಷ್ಟ ಪ್ರಕರಣ ಇದ್ದರೆ ನನ್ನ ಅಥವಾ ಮುಖ್ಯಮಂತ್ರಿಯ ಗಮನಕ್ಕೆ ತಂದರೆ ಖಂಡಿತವಾಗಿಯೂ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕರಾವಳಿಯಲ್ಲಿ ಶಾಂತಿಯನ್ನು ಕಾಪಾಡಲು ಎಲ್ಲ ಧರ್ಮೀಯರು ಸರ್ಕಾರದೊಂದಿಗೆ ಸಹಕಾರ ನೀಡಬೇಕು ಎಂದು ಅವರು ಹೇಳಿದರು.

ಕರಾವಳಿ ಜಿಲ್ಲೆಯ ಕೆಲವು ಘಟನಾವಳಿಗಳ ಬಗ್ಗೆ ಖಾದರ್ ಪ್ರಸ್ತಾಪಿಸಿದ್ದಾರೆ. ಸಣ್ಣಪುಟ್ಟ ಘಟನೆಗಳು ಆದಾಗ ಪೊಲೀಸರು ಗಂಭೀರ ಕ್ರಮ ಕೈಗೊಳ್ಳುವ ಪ್ರಯತ್ನ ಮಾಡಿದ್ದಾರೆ. ಇಲ್ಲಿ ಯಾವುದೇ ಜಾತಿ, ಧರ್ಮದ ಪ್ರಶ್ನೆಯಿಲ್ಲ. ಶಾಂತಿ ಸುವ್ಯವಸ್ಥೆಗೆ ಭಂಗ ಬರಬಾರದು ಎಂಬುದು ಸರ್ಕಾರದ ಉದ್ದೇಶ. ಉಪ್ಪಿನಂಗಡಿಯಲ್ಲಿ ಪೊಲೀಸರ ಮೇಲೆಯೆ ಹಲ್ಲೆಯಾಗಿದೆ. 300-400 ಜನ ಸೇರಿ ಪೊಲೀಸರ ಮೇಲೆ ಹಲ್ಲೆ ಮಾಡಿ, ಚೂರಿ ಹಾಕಿದ್ದಾರೆ. ಅಂತಹ ಸಂದರ್ಭದಲ್ಲಿ ಕಠಿಣ ಕ್ರಮ ಕೈಗೊಳ್ಳಲೇಬೇಕು. ಈ ಘಟನೆ ಕುರಿತು ವರದಿ ತರಿಸುತ್ತಿದ್ದೇನೆ. ಕರಾವಳಿ ಶಾಂತಿ ಕಾಪಾಡಲು ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಹೇಳಿದರು.

ಬಿಪಿನ್ ರಾವತ್ ಸಾವನ್ನ ಸಂಭ್ರಮಿಸಿದವರ ವಿರುದ್ಧ ಗೃಹ ಸಚಿವರ ಕಿಡಿ; ವಿಪಕ್ಷ ಕಾಂಗ್ರೆಸ್ ಆಕ್ಷೇಪ
ಭಾರತೀಯ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾದ್ದನ್ನು ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಪಡಿಸಿಕೊಂಡು ಸಂಭ್ರಮಿಸಿದ್ದಾರೆ ಎಂದು ಆರಗ ಜ್ಞಾನೇಂದ್ರ ಕಿಡಿಗಾರಿದರು. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಕಾಂಗ್ರೆಸ್ ಶಾಸಕರು, ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಹೇಳಿಕೆ ಕೊಡಬೇಡಿ ಎಂದರು. ಆಗ ಬಿಜೆಪಿ ಶಾಸಕರು ಆಕ್ರೋಶ ವ್ಯಕ್ತಪಡಿಸಿ, ದೇಶದ್ರೋಹಿಗಳಿಗೆ ಶಿಕ್ಷೆಯಾಗಬೇಕು. ಅಂತಹವರನ್ನು ವಿಧಾನಸಭೆಯಲ್ಲಿ ಬೆಂಬಲಿಸುವವರನ್ನು ಒಳಕ್ಕೆ ಹಾಕಬೇಕು ಎಂದರು.

ಈ ವೇಳೆ ಮಾತನಾಡಿದ ಗೃಹ ಸಚಿವರು, 'ನಾನು ಯಾರ ಪರವೂ ಇಲ್ಲ, ವಿರುದ್ಧವೂ ಇಲ್ಲ. ಇಡೀ ದೇಶ ಕಣ್ಣೀರು ಹಾಕಿದ ಘಟನೆಯನ್ನು ಸಂಭ್ರಮಿಸಿದ ಕುರಿತು ಎರಡು, ಮೂರು ಪ್ರಕರಣ ದಾಖಲು ಮಾಡಲಾಗಿದೆ. ಅಲ್ಲದೆ, ಮಂಗಳೂರಿನಲ್ಲಿ ಬಸ್ಸಿನಲ್ಲಿ ಒಟ್ಟಿಗೆ ಹೋಗುತ್ತಿದ್ದ ಹುಡುಗ, ಹುಡುಗಿ ಮೇಲೆ ನಡೆದ ಹಲ್ಲೆ ಕುರಿತು ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿದ್ದಾರೆ. ನಮ್ಮ ಸರಕಾರ ಪೊಲೀಸರ ಮೇಲೆ ಯಾವುದೆ ಒತ್ತಡ ಹಾಕುತ್ತಿಲ್ಲ. ನಮಗೆ ಶಾಂತಿ, ಸೌಹಾರ್ದತೆ, ಕೋಮುಸೌಹಾರ್ದತೆ ಕಾಪಾಡುವುದು ಮುಖ್ಯ ಎಂದು ಅವರು ಹೇಳಿದರು.

ಫೊಲೀಸರ ವಿರುದ್ಧ ಯುಟಿ ಖಾದರ್ ಕಿಡಿ
ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿ ಮಾತನಾಡಿದ ಯು.ಟಿ.ಖಾದರ್, ಕರಾವಳಿ ಜಿಲ್ಲೆಗಳಲ್ಲಿ ಅನೈತಿಕ ಗೂಂಡಾಗಿರಿ, ದ್ವೇಷದ ಮಾತುಗಳನ್ನು ಆಡಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. 'ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡುವವರನ್ನು ಬಂಧಿಸಿ, ಮರು ದಿವಸ ಬಿಡುಗಡೆ ಮಾಡಲಾಗುತ್ತದೆ. ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ತಲವಾರುಗಳನ್ನು ಇಟ್ಟುಕೊಳ್ಳಿ ಎಂದು ಕರೆ ನೀಡಲಾಗುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಯನ್ನು ಪ್ರಶ್ನಿಸಿದರೆ, ಆಕ್ಷನ್‍ಗೆ ರಿಯಾಕ್ಷನ್ ಎನ್ನುತ್ತಾರೆ. ತ್ರಿಶೂಲ ದೀಕ್ಷೆ ನೀಡಲಾಗುತ್ತಿದೆ. ಆನಂತರ ಹಲ್ಲೆ ಪ್ರಕರಣಗಳು ವರದಿಯಾಗಿವೆ. ತ್ರಿಶೂಲ ದೀಕ್ಷೆ ನೀಡಿದ್ದು ಯಾಕೆ ಎಂಬುದರ ಬಗ್ಗೆ ಸರಕಾರ ವರದಿ ತರಿಸಿಕೊಳ್ಳಬೇಕು. ಸಮಾಜದಲ್ಲಿನ ಶಾಂತಿ, ಸುವ್ಯವಸ್ಥೆ ಹಾಳು ಮಾಡಲು ಪ್ರಯತ್ನಿಸುವವರು ಯಾರೇ ಆಗಿದ್ದರೂ ಅವರ ವಿರುದ್ದ ಸರಕಾರ ಕಠಿಣ ಕ್ರಮ ಕೈಗೊಳ್ಳಲಿ. ಆದರೆ, ಅಮಾಯಕರಿಗೆ ತೊಂದರೆಯಾಗಬಾರದು ಎಂದು ಖಾದರ್ ಹೇಳಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com