ಬೆಂಗಳೂರು: ಸರ್ಕಾರಿ ಅಧಿಕಾರಿಗಳು ಕೋರ್ಟ್ ನ ಆದೇಶಗಳನ್ನು ಹಗುರವಾಗಿ ಪರಿಗಣಿಸುತ್ತಿರುವುದರ ಬಗ್ಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಸರ್ಕಾರಿ ಅಧಿಕಾರಿಗಳ ಸಹಕಾರದ ನಡುವೆ ಪ್ರಕರಣಗಳ ವಿಚಾರಣೆ ನಡೆಸುವುದಕ್ಕೆ ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದ್ದು, ಇದರಿಂದಾಗಿ ಅನಗತ್ಯವಾಗಿ ಪ್ರಕರಣಗಳು ಬಾಕಿ ಉಳಿಯುತ್ತಿವೆ ಎಂದು ಹೇಳಿದೆ.
ಮುಖ್ಯ ಕಾರ್ಯದರ್ಶಿ ಪಿ ರವಿ ಕುಮಾರ್ ಗೆ ಇದೇ ವೇಳೆ ನಿರ್ದೇಶನ ನೀಡಿರುವ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಹಾಗೂ ನ್ಯಾ. ಸಚಿನ್ ಶಂಕರ್ ಮಗದುಮ್ ಅವರಿದ್ದ ವಿಭಾಗೀಯ ಪೀಠ, ಸ್ಥಳೀಯ ಸಂಸ್ಥೆಗಳೂ ಸೇರಿದಂತೆ ಸರ್ಕಾರಿ ಅಧಿಕಾರಿಗಳಿಗೆ ಕೋರ್ಟ್ ಗೆ ಅಗತ್ಯ ನೆರವು ನೀಡುವಂತೆ ಸೂಚನೆ ನೀಡಲು ಹೇಳಿದೆ.
ಪ್ರಕರಣಗಳನ್ನು ಇತ್ಯರ್ಥಗೊಳಿಸುವುದಕ್ಕೆ ಸರ್ಕಾರಿ ಅಧಿಕಾರಿಗಳ ಅಸಹಕಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತಹ ಪರಿಸ್ಥಿತಿ ಒಂದು ವೇಳೆ ಎದುರಾದರೂ ಅದಕ್ಕೂ ಕೋರ್ಟ್ ಹಿಂಜರಿಯುವುದಿಲ್ಲ" ಎಂದು ಕೋರ್ಟ್ ಎಚ್ಚರಿಸಿದೆ.
ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್- ಕಲ್ಚರಲ್ ಹೆರಿಟೇಜ್ ನಿಂದ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ, ಬಿಡಿಎ ವಿರುದ್ಧ ದಾಖಲಾಗಿದ್ದ ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್, ಸರ್ಕಾರಿ ಅಡ್ವೊಕೇಟ್ ತಮಗೆ ಸರ್ಕಾರದಿಂದ ಸೂಚನೆ ಬಂದಿಲ್ಲ ಎಂದು ಹೇಳಿರುವುದನ್ನು ಗಮನಿಸಿತು. ಪ್ರಕರಣವನ್ನು ಇತ್ಯರ್ಥಗೊಳಿಸುವುದಕ್ಕಾಗಿ ಸರ್ಕಾರಕ್ಕೆ ಅಂತಿಮವಾಗಿ ಒಂದು ತಿಂಗಳ ಕಾಲಾವಕಾಶ ನೀಡುತ್ತಿರುವುದಾಗಿ ಕೋರ್ಟ್ ಹೇಳಿದೆ.
Advertisement