ಮೈಸೂರು: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮ ಧ್ವಂಸ ಒಂದು ಅಕ್ಷಮ್ಯ ಅಪರಾಧ. ಯಾವುದೇ ಮುಖಂಡರು, ದೇಶಭಕ್ತರ ಮೂರ್ತಿಗಳನ್ನು ಧ್ವಂಸ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ. ಈಗಾಗಲೇ 27 ಮಂದಿ ಆರೋಪಿಗಳನ್ನು ಪತ್ತೆಹಚ್ಚಿ ಹಲವರನ್ನು ಜೈಲಿಗೆ ಕಳುಹಿಸಲಾಗಿದೆ. ಇನ್ನಷ್ಟು ಅಪರಾಧಿಗಳನ್ನು ಪೊಲೀಸರು ಪತ್ತೆಹಚ್ಚಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಗಿಯಾದ ಕ್ರಮ ತೆಗೆದುಕೊಂಡು ಇನ್ನು ಮುಂದೆ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ. ವಿಧಾನ ಮಂಡಲದಲ್ಲಿ ಕೂಡ ಈ ಬಗ್ಗೆ ಸುದೀರ್ಘ ಚರ್ಚೆಯಾಗಬಹುದು, ಅಲ್ಲಿ ಕ್ರಮ ತೆಗೆದುಕೊಳ್ಳುವ ಬಗ್ಗೆ ನಿರ್ಣಯ ತೆಗೆದುಕೊಳ್ಳಬಹುದು ಎಂದರು.
ಉದ್ದೇಶಪೂರ್ವಕವಾಗಿ ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಈ ರೀತಿಯ ಪುಂಡಾಟಿಕೆ ನಡೆಯುವುದು ಅಧಿವೇಶನ ಕಾರ್ಯಕಲಾಪಗಳು ಸುಸೂತ್ರವಾಗಿ ನಡೆಯಬಾರದು ಎಂಬ ದುರುದ್ದೇಶವೂ ಇದೆಯೆನ್ನುವುದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲದರ ಬಗ್ಗೆಯೂ ಸುದೀರ್ಘ ಚರ್ಚೆ ನಡೆಯಲಿದೆ ಎಂದರು.
ನಾಳೆ ಕನ್ನಡಪರ ಸಂಘಟನೆಗಳಿಂದ ಸುವರ್ಣ ಸೌಧಕ್ಕೆ ಮುತ್ತಿಗೆ: ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣ ಖಂಡಿಸಿ ಬೆಂಗಳೂರು ನಗರದಿಂದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ಪ್ರಾರಂಭ ಮಾಡುತ್ತಿದ್ದೇವೆ.ನೆಲಮಂಗಲ ಟೋಲ್ ನಿಂದ ತುಮಕೂರಲ್ಲಿ, ಚಿತ್ರದುರ್ಗ, ದಾವಣಗೆರೆ ಹಾಗೂ ಹಾವೇರಿ ಮುಖಾಂತರ ಕಾರ್ಯಕರ್ತರೆಲ್ಲ ಸೇರಿ ರ್ಯಾಲಿ ಸಾಗಿ ಹುಬ್ಬಳ್ಳಿ-ಧಾರವಾಡ ಮೂಲಕ ಸಾಗಿ ನಾಳೆ ಬೆಳಗ್ಗೆ 11 ಗಂಟೆ ಹೊತ್ತಿಗೆ ಬೆಳಗಾವಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆಗೆ ಮಾಲೆಯನ್ನು ಹಾಕಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕನ್ನಡಿಗರು, ಕನ್ನಡಪರ ಸಂಘಟನೆಗಳು, ಕನ್ನಡಿಗರ ಹೊಟೇಲ್ ಗಳ ಮೇಲೆ ನಡೆಯುತ್ತಿರುವ ದಾಳಿಗಳನ್ನು ನಿಲ್ಲಿಸಲು ಎಂಇಎಸ್ ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇಧಿಸಬೇಕೆಂದು ಮತ್ತು ಈ ಸಂದರ್ಭದಲ್ಲಿ ಸರ್ಕಾರಕ್ಕೆ, ಪೊಲೀಸರಿಗೆ ಧೈರ್ಯ ತುಂಬಲು ಈ ಹೋರಾಟ ಮಾಡುತ್ತಿದ್ದೇವೆ ಎಂದರು.
ಮತಾಂತರ ನಿಷೇಧ ಕಾಯ್ದೆಯನ್ನು ನೂರಕ್ಕೆ ನೂರರಷ್ಟು ತರಲಾಗುವುದು ಎಂದು ಕೂಡ ಬಿ ಎಸ್ ಯಡಿಯೂರಪ್ಪ ಹೇಳಿದರು.
Advertisement