ಬೆಂಗಳೂರು: ಡೆತ್ ನೋಟ್ ಬರೆದಿಟ್ಟು 12 ವರ್ಷದ ಬಾಲಕ ಆತ್ಮಹತ್ಯೆ

ಆರನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಆರನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.

12 ವರ್ಷದ ಬಾಲಕ ನೇಣಿಗೆ ಶರಣಾಗಿರುವುದನ್ನು ನೆರೆಮನೆಯವರು ನೋಡಿ ಅವರ ಪೋಷಕರಿಗೆ ವಿಷಯ ತಿಳಿಸಿದ್ದಾರೆ.

ಲಾರಿ ಚಾಲಕನಾಗಿರುವ ಸಿದ್ದರಾಜು ಅವರ ಮಗ ಪುನೀತ್(ಹೆಸರು ಬದಲಾಯಿಸಲಾಗಿದೆ) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಆತನ ತಾಯಿ ಮನೆಗೆಲಸ ಮಾಡುತ್ತಾರೆ. ವಿಷಯ ಕೇಳಿ ಸ್ಥಳಕ್ಕೆ ಬಂದ ಆಕೆ ಸ್ಥಳೀಯರ ಸಹಾಯದೊಂದಿಗೆ ಆಸ್ಪತ್ರೆಗೆ ಕರೆ ತಂದಿದ್ದರು, ಆದರೆ ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿರುವುದಾಗಿ ತಿಳಿಸಿದರು.

ರಾಜಾಜಿನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪುನೀತ್ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ಬಸವೇಶ್ವರ ನಗರ ಪೊಲೀಸ್ ಠಾಣೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಧ್ಯಾಹ್ನದ ವರೆಗೆ 4ನೇ ತರಗತಿ ಓದುತ್ತಿದ್ದ ತನ್ನ ಸಹೋದರನ ಜೊತೆ ಆಟವಾಡುತ್ತಿದ್ದ. 

ಆಟವಾಡುತ್ತಿದ್ದವನು ಇದ್ದಕ್ಕಿದ್ದ ಹಾಗೆ ತಾನು ಸಾಯುವುದಾಗಿ ಹೇಳಿ ಮೊದಲ ಮಹಡಿಯಲ್ಲಿದ್ದ ತನ್ನ ಮನೆಯ ರೂಮಿಗೆ ಹೋಗಿ ನೇಣು ಹಾಕಿಕೊಂಡ. ಆತ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಸಾವಿಗೆ  ಸ್ನೇಹಿತನೊಬ್ಬ ಕಾರಣ ಎಂದು ಬರೆದಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. 

ಆದರೆ ಸಾವಿಗೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಬಾಲಕನ ಸಾವಿಗೆ ಅದೇ ಸ್ಥಳದಲ್ಲಿರುವ ಮತ್ತೊಬ್ಬ ಬಾಲಕ ಕಾರಣ ಎಂದು ತಿಳಿದು ಬಂದಿದೆ, ಆದರೆ ಇಬ್ಬರು ಸಂಪರ್ಕದಲ್ಲಿರಲಿಲ್ಲ ಎಂದು ತಿಳಿದು ಬಂದಿದೆ.  ಆದರೆ ಬಾಲಕನ ಕೈ ಬರಹದ ಬಗ್ಗೆ ಅನುಮಾನವಿದೆ ಎಂದು ಆತನ ತಂದೆ ತಿಳಿಸಿದ್ದಾರೆ. ಅದು ಪುನೀತ್ ಕೈ ಬರಹವಲ್ಲ ಎಂದು  ಪೊಲೀಸರಿಗೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com