ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೂ ಎಸ್ಎಸ್ಎಲ್'ಸಿ ಪರೀಕ್ಷೆ ಬರೆಯಲು ಅವಕಾಶ

ಎಸ್ಎಸ್ಎಲ್'ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಹಾಲ್‌ ಟಿಕೆಟ್‌ (ಪ್ರವೇಶ ಪತ್ರ) ಸಿಗದೇ ಇದ್ದರೆ, ತಕ್ಷಣ ಹಾಲ್‌ ಟಿಕೆಟ್‌ ವಿತರಿಸಲು ಕ್ರಮ ತೆಗೆದುಕೊಳ್ಳಬೇಕು’ ಎಂದು ಎಲ್ಲ ಡಿಡಿಪಿಐ ಹಾಗೂ ಬಿಇಒಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ. ಅನ್ಬುಕುಮಾರ್‌ ಸುತ್ತೋಲೆ ಹೊರಡಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಎಸ್ಎಸ್ಎಲ್'ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಹಾಲ್‌ ಟಿಕೆಟ್‌ (ಪ್ರವೇಶ ಪತ್ರ) ಸಿಗದೇ ಇದ್ದರೆ, ತಕ್ಷಣ ಹಾಲ್‌ ಟಿಕೆಟ್‌ ವಿತರಿಸಲು ಕ್ರಮ ತೆಗೆದುಕೊಳ್ಳಬೇಕು’ ಎಂದು ಎಲ್ಲ ಡಿಡಿಪಿಐ ಹಾಗೂ ಬಿಇಒಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧ್ಯಕ್ಷರೂ ಆಗಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ. ಅನ್ಬುಕುಮಾರ್‌ ಸುತ್ತೋಲೆ ಹೊರಡಿಸಿದ್ದಾರೆ.

ಪೂರ್ಣ ಶುಲ್ಕ ಪಾವತಿಸದಿದ್ದರೆ ಹಾಲ್‌ ಟಿಕೆಟ್‌ ನೀಡಲಾಗುತ್ತಿಲ್ಲ ಎಂದು ಹೇಳಿ ಸಾಕಷ್ಟು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಸಚಿವ ಸುರೇಶ್ ಕುಮಾರ್ ಅವರು, ಯಾವುದೇ ಒಂದು ಮಗುವಿಗೂ ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕೆಂದು ಸೂಚನೆ ನೀಡಿದ್ದರು. 

ಸೂಚನೆಯ ಬೆನ್ನಲ್ಲೇ ಸುತ್ತೋಲೆ ಹೊರಡಿಸಿರುವ ಆಗಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ. ಅನ್ಬುಕುಮಾರ್‌ ಅವರು, ಯಾವುದೇ ವಿದ್ಯಾರ್ಥಿ ಹಾಲ್‌ ಟಿಕೆಟ್‌ ಸಿಗದೆ, ಮಾನಸಿಕ ತೊಂದರೆ ಮತ್ತು ಆತಂಕಕ್ಕೆ ಒಳಗಾಗದಂತೆ ಹಾಗೂ ಪರೀಕ್ಷೆಯಿಂದ ವಂಚಿತರಾಗದಂತೆ  ಆದ್ಯತೆಯ ಮೇರೆಗೆ ಜಿಲ್ಲಾ ಉಪನಿರ್ದೇಶಕರು (ಆಡಳಿತ), ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಶಾಲೆಗಳ ಮುಖ್ಯಸ್ಥರು ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ. 

ಜುಲೈ.19 ಮತ್ತು 22 ರಂದು ಎಸ್ಎಸ್ಎಲ್'ಸಿ ಪರೀಕ್ಷೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಸಚಿವ ಸುರೇಶ್ ಕುಮಾರ್ ಅವರು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ನಿರ್ದೇಶಕರ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾರ್ಗದರ್ಶನ ನೀಡಿದರು. 

ಈ ವೇಳೆ ಮಾತನಾಡಿದ್ದ ಸುರೇಶ್ ಕುಮಾರ್ ಅವರು, ಮಕ್ಕಳಿಗೆ ಪರೀಕ್ಷಾಂಗಣ ಸುರಕ್ಷತೆ ಮತ್ತು ಆತ್ಮವಿಶ್ವಾಸ ಮೂಡಿಸಲು ಕ್ರಮ ವಹಿಸಲಾಗಿದೆ. ಎಲ್ಲ ವಿದ್ಯಾರ್ಥಿಗಳಿಗೂ ಒಎಂಆರ್ ಶೀಟ್ ಕುರಿತು ತಿಳಿವಳಿಕೆ ಮೂಡಿಸಲಾಗಿದೆ. ಪರೀಕ್ಷಾ ಕೊಠಡಿಯಲ್ಲೂ ಮೇಲ್ವಿಚಾರಕರು ಮಾರ್ಗದರ್ಶನ ನೀಡಲಿದ್ದಾರೆ. ಪರೀಕ್ಷೆಗೆ ಮೊದಲು ಮತ್ತು ನಂತರ ಪರೀಕ್ಷಾ ಕೇಂದ್ರದ ಆವರಣ ಮತ್ತು ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಶೇ 100ರಷ್ಟು ಪರೀಕ್ಷಾ ಸಿಬ್ಬಂದಿ ಲಸಿಕೆ ಪಡೆದಿದ್ದಾರೆ. 

ಪರೀಕ್ಷೆಗೆ ಎರಡು ದಿನಗಳ ಮೊದಲು ಈ ಪ್ರಕ್ರಿಯೆಗೆ ನೇಮಕಗೊಂಡಿರುವ ಅಧಿಕಾರಿಗಳು, ಆರೋಗ್ಯ ಸಿಬ್ಬಂದಿ, ಸ್ಕೌಟ್ಸ್-ಗೈಡ್ಸ್ ಸ್ವಯಂಸೇವಕರು ಪರೀಕ್ಷಾ ಕೇಂದ್ರದಲ್ಲಿ ಅಣಕು ಪರೀಕ್ಷಾ ಪ್ರಕ್ರಿಯೆ ನಡೆಸಲಿದ್ದಾರೆ. ಸ್ಯಾನಿಟೈಸರ್, ಮಾಸ್ಕ್, ಥರ್ಮಲ್ ಸ್ಕ್ಯಾನರ್ ಪೂರೈಕೆ ಸೇರಿದಂತೆ ಎಲ್ಲ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿ, ಸ್ಕೌಟ್ಸ್-ಗೈಡ್ಸ್ ಸ್ವಯಂಸೇವಕರು, ಕೊಠಡಿ ಮೇಲ್ವಿಚಾರಕರು, ಪರೀಕ್ಷಾ ಕೇಂದ್ರದ ಅಧೀಕ್ಷಕರು ಸೇರಿದಂತೆ ಎಲ್ಲ ಸಿಬ್ಬಂದಿಯನ್ನು ನಿಯುಕ್ತಿಗೊಳಿಸಲಾಗಿದೆ. 

ಯಾವುದೇ ವಿದ್ಯಾರ್ಥಿ ವಾಹನ ಸೌಲಭ್ಯ ಇಲ್ಲದೆ ಪರೀಕ್ಷೆಗೆ ಗೈರು ಹಾಜರಾಗದಂತೆ ಗಮನಿಸಲು ಸೂಚಿಸಲಾಗಿದೆ. ಪ್ರವೇಶ ಪತ್ರ ತೋರಿಸಿ ಮಕ್ಕಳು ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಿ ಸಾರಿಗೆ ಇಲಾಖೆ ಈಗಾಗಲೇ ಸುತ್ತೋಲೆ ಹೊರಡಿಸಿದೆ ಎಂದು ವಿವರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com