ಬೆಂಗಳೂರು: ನಗರದಲ್ಲಿ ವೈದ್ಯಕೀಯ ಸೌಕರ್ಯ ಹೆಚ್ಚಿಸಲು 1 ಸಾವಿರ ಕೋಟಿ ರೂ. ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.
ಸ್ಮಾರ್ಟ್ ಸಿಟಿ ಯೋಜನೆಯಡಿ ಪುನರ್ ನವೀಕರಣ ಮಾಡುತ್ತಿರುವ ಕೆ.ಆರ್.ಮಾರ್ಕೆಟ್ ಪ್ರದೇಶಕ್ಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಮತ್ತಿತರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಒಂದು ಕೋಟಿಗೂ ಹೆಚ್ಚು ಜನಸಂಖ್ಯೆ ಇರುವ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೇವಲ 41 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ 6 ರೆಫರಲ್ ಆಸ್ಪತ್ರೆಗಳು ಮಾತ್ರ ಇವೆ. ಬಹುತೇಕ ಆಸ್ಪತ್ರೆಗಳಲ್ಲಿ ಪ್ರಸೂತಿ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಸರ್ಕಾರದಿಂದ ಅನುದಾನ ಪಡೆದುಕೊಂಡು ಎಲ್ಲಾ ಆಸ್ಪತ್ರೆಗಳನ್ನು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳನ್ನಾಗಿ ಪರಿವರ್ತಿಸುವುದರ ಜತೆಗೆ ಆಸ್ಪತ್ರೆ ಇಲ್ಲದ ಕಡೆ ಹೊಸದಾಗಿ ಆಸ್ಪತ್ರೆ ನಿರ್ಮಾಣ ಮಾಡುವ ಅವಶ್ಯಕತೆ ಇದೆ.
ನಗರದಲ್ಲಿ 57 ಪ್ರಾಥಮಿಕ ಆರೋಗ್ಯ ಕೇಂದ್ಕ ಮತ್ತು ಐದು ತೃತೀಯ ಮತ್ತು ಮಾಧ್ಯಮಿಕ ಆಸ್ಪತ್ರೆಗಳನನ್ನು 50-100 ಹಾಸಿಗೆಗಳೊಂದಿಗೆ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ, ನಾಲ್ಕು ಕಡೆಗಳಲ್ಲಿ ಮಲ್ಟಿ ಸ್ಪೆಷಾಲಿಟಿ ಆರಂಭಿಸಲು 1 ಸಾವಿರ ಕೋಟಿ ರೂಪಾಯಿ ಯೋಜನೆಗೆ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಅಲ್ಲದೆ, 28 ಸ್ಪೆಷಾಲಿಟಿ ಆಸ್ಪತ್ರೆ ಪೈಕಿ 4 ಈಗಾಗಲೇ ಕಾರ್ಯ ನಿರ್ವಹಿಸುತ್ತಿದ್ದು, ಉಳಿದ ಎಲ್ಲ ವಿಧಾನಸಭಾ ಕ್ಷೇತ್ರಕ್ಕೊಂದರಂತೆ ಆರಂಭಿಸಲು ಯೋಜನೆ ರೂಪಿಸಲಾಗಿದೆ.
ನಗರದ ವೈದ್ಯಕೀಯ ಸೇವೆ ಹೆಚ್ಚಳ ಮಾಡುವ ಉದ್ದೇಶದಿಂದ 1 ಸಾವಿರ ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೇವೆ. ಒಪ್ಪಿಗೆ ಸಿಕ್ಕರೆ ಎಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಅವರು ಹೇಳಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ಕೈಗೊಂಡಿರುವ ಕಾಮಗಾರಿಗಳು, ಕೆಲವು ತಾಂತ್ರಿಕ ಕಾರಣಗಳಿಂದ ನಿಧಾನಗತಿಯಲ್ಲಿ ಸಾಗುತ್ತಿವೆ.
Advertisement