ಬೆಂಗಳೂರು: ಬಳ್ಳಾರಿ, ಹಾಸನ, ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವ ಹಣಾಧಿಕಾರಿಗಳೊಂದಿಗೆ ಇಂದು ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಳೆಯಿಂದ ಆಗುತ್ತಿರುವ ಹಾನಿ ಹಾಗೂ ಕೈಗೊಳ್ಳಲಾಗಿರುವ ಪರಿಹಾರ ಕ್ರಮಗಳ ಕುರಿತು ಚರ್ಚಿಸಿದರು.
ಕೊಡಗು, ಬಳ್ಳಾರಿ, ಹಾಸನ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಮಂಗಳೂರು, ಚಿಕ್ಕಮಗಳೂರು, ವಿಜಯಪುರ, ಕಲಬುರಗಿ, ಮೈಸೂರು, ಕೊಪ್ಪಳ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಕಳೆದ 8 ದಿನಗಳಿಂದ ಹೆಚ್ಚಿನ ಮಳೆಯಾಗುತ್ತಿದ್ದು, ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿ ಪರಿಹಾರ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಸೂಚಿಸಿದರು.
ಪ್ರವಾಹ ತಡೆಗಟ್ಟಲು ಅತ್ಯಾಧುನಿಕ ಉಪಕರಣಗಳನ್ನು ಖರೀದಿಸಲು ಹಣ ಬಿಡುಗಡೆ ಮಾಡಲಾಗುವುದು, ಜಿಲ್ಲಾಧಿಕಾರಿಗಳ ಪಿ. ಡಿ. ಖಾತೆಗಳಲ್ಲಿ ಈಗಾಗಲೇ ಲಭ್ಯವಿರುವ ಮೊತ್ತವನ್ನು ಪ್ರವಾಹ ಪರಿಸ್ಥಿತಿ ನಿಭಾಯಿಸಲು ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.
ನದಿ ಮತ್ತು ಭೂ ಕುಸಿತ ಉಂಟಾಗುವ ಸ್ಥಳಗಳನ್ನು ಗುರುತಿಸಲು ವಿಶೇಷ ತಂಡಗಳನ್ನು ರಚಿಸಲು ಕ್ರಮ ಕೈಗೊಳ್ಳಬೇಕು, ಭೂ ಕುಸಿತ ಉಂಟಾಗಬಹುದಾದ ಪ್ರದೇಶಗಳಲ್ಲಿರುವ ಜನರನ್ನು ಮುಂಚಿತವಾಗಿಯೇ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಬೇಕು, ಬೆಳೆ ನಷ್ಟ ಉಂಟಾಗಿರುವ ಬಗ್ಗೆ ಸಮೀಕ್ಷೆ ನಡೆಸಿ ವರದಿ ನೀಡಿದ್ದಲ್ಲಿ ಪರಿಹಾರ ವಿತರಣೆಗೆ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.
Advertisement