ಎಂಬಿಬಿಎಸ್ ಪದವೀಧರರಿಗೆ ಗ್ರಾಮೀಣ ಸೇವೆ ಕಡ್ಡಾಯ: ವಿನಾಯಿತಿಗೆ ಹೈಕೋರ್ಟ್ ನಕಾರ

ಗ್ರಾಮೀಣ ಸೇವೆ ಕಡ್ಡಾಯ ನಿಯಮ ಪ್ರಶ್ನಿಸಿ ವೈದ್ಯಕೀಯ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿ ಸಂಬಂಧ ಪರಿಹಾರಾತ್ಮಕ ಮಧ್ಯಂತರ ಆದೇಶ ಹೊರಡಿಸಲು ಹೈಕೋರ್ಟ್ ನಿರಾಕರಿಸಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಗ್ರಾಮೀಣ ಸೇವೆ ಕಡ್ಡಾಯ ನಿಯಮ ಪ್ರಶ್ನಿಸಿ ವೈದ್ಯಕೀಯ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿ ಸಂಬಂಧ ಪರಿಹಾರಾತ್ಮಕ ಮಧ್ಯಂತರ ಆದೇಶ ಹೊರಡಿಸಲು ಹೈಕೋರ್ಟ್ ನಿರಾಕರಿಸಿದೆ. 

ಈ ವಿಷಯದಲ್ಲಿ ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ಕರಾರು ಮಾಡಿಕೊಟ್ಟಿದ್ದಾರೆ ಎಂದು ಪೀಠ ಹೇಳಿದೆ. 2020–21ನೇ ಸಾಲಿನಲ್ಲಿ ಎಂಬಿಬಿಎಸ್ ಮುಗಿಸಿದ ವಿದ್ಯಾರ್ಥಿಗಳು ಗ್ರಾಮೀಣ ಸೇವೆಗೆ ನೋಂದಾಯಿಸಿಕೊಳ್ಳಬೇಕು ಎಂದು 2021ರ ಜೂನ್ 8ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದನ್ನು ಪ್ರಶ್ನಿಸಿ ಡಾ. ಎನ್. ಪ್ರಾರ್ಥನಾ ಹಾಗೂ ಇತರರು ಅರ್ಜಿ ಸಲ್ಲಿಸಿದ್ದರು.

ಈ ಅಧಿಸೂಚನೆ ವಿಷಯದಲ್ಲಿ ಮಧ್ಯಂತರ ಪರಿಹಾರ ನೀಡಲು ನಿರಾಕರಿಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಮ್ ಅವರಿದ್ದ ಪೀಠ, ‘ಒಂದು ವರ್ಷದ ಗ್ರಾಮೀಣ ಸೇವೆಗೆ ವಿದ್ಯಾರ್ಥಿಗಳನ್ನು ಆಹ್ವಾನಿಸಿರುವ ಸರ್ಕಾರದ ನಿರ್ಧಾರ ಸಮಂಜಸವಾಗಿದೆ’ ಎಂದು ಅಭಿಪ್ರಾಯ ಪಟ್ಚಿದೆ.

ವೃತ್ತಿಪರ ವೈದ್ಯರು ತಮ್ಮ ಕರ್ತವ್ಯ ಅರ್ಥ ಮಾಡಿಕೊಳ್ಳುವ  ಸಮಯ ಇದಾಗಿದೆ’ ಎಂದು ತಿಳಿಸಿತು. ‘ಹೊಸದಾಗಿ ಎಂಬಿಬಿಎಸ್‌ ಪದವಿ ಪಡೆದವರ ಗ್ರಾಮೀಣ ಸೇವೆ ಜೂನ್ 30ರಿಂದ ಆರಂಭವಾಗಿದೆ. ಆಡಳಿತ ಮಂಡಳಿ ಕೋಟಾದಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಈ ನಿಯಮ ಅನ್ವಯ ಆಗುವುದಿಲ್ಲ. ಆದ್ದರಿಂದ ಇದು ವಿದ್ಯಾರ್ಥಿಗಳಲ್ಲಿ ತಾರತಮ್ಯ ಹುಟ್ಟು ಹಾಕಿದೆ. ಉನ್ನತ ಶಿಕ್ಷಣಕ್ಕಾಗಿ ನೀಟ್ ಪರೀಕ್ಷೆಗೆ ಹಾಜರಾಗಬೇಕಿದ್ದು, ಅದಕ್ಕಾಗಿ ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದು ಅರ್ಜಿ ದಾರರು ಉಲ್ಲೇಖಿಸಿದ್ದರು.

‘ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಾರೆ ಎಂಬ ವಿಶ್ವಾಸದಿಂದ ಶುಲ್ಕ ರಿಯಾಯಿತಿಯೊಂದಿಗೆ ವೈದ್ಯಕೀಯ ಶಿಕ್ಷಣವನ್ನು ಸರ್ಕಾರ ನೀಡಿದೆ. ಕೋವಿಡ್‌ 3ನೇ ಅಲೆಯ ನಿರೀಕ್ಷೆ ಇರುವ ಸಂದರ್ಭದಲ್ಲಿ ವೈದ್ಯಕೀಯ ಪದವಿ ಪಡೆದ ಹೊಸ ವಿದ್ಯಾರ್ಥಿಗಳ ಗ್ರಾಮೀಣ ಸೇವೆ ಸರ್ಕಾರಕ್ಕೆ ಅಗತ್ಯವಿದೆ ಎಂದು ಹೈಕೋರ್ಟ್ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com