ಮುಂಗಾರು ಆರಂಭಕ್ಕೆ ಕ್ಷಣಗಣನೆ: ಕೃಷಿ ಚಟುವಟಿಕೆ ಸಿದ್ಧತೆ ಬಗ್ಗೆ ಸಿಎಂ ಯಡಿಯೂರಪ್ಪ ಪರಿಶೀಲನೆ

ಕೊರೋನಾ 2ನೇ ಅಲೆ ನಡುವಲ್ಲೇ ರಾಜ್ಯದಲ್ಲಿ ಮುಂಗಾರು ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೃಷಿ ಚಟುವಟಿಕೆಗೆ ಸಂಬಂಧಿಸಿದ ಪೂರ್ವ ಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಸಮಾಲೇಚನೆ ನಡೆಸಿದರು. 
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಬೆಂಗಳೂರು: ಕೊರೋನಾ 2ನೇ ಅಲೆ ನಡುವಲ್ಲೇ ರಾಜ್ಯದಲ್ಲಿ ಮುಂಗಾರು ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೃಷಿ ಚಟುವಟಿಕೆಗೆ ಸಂಬಂಧಿಸಿದ ಪೂರ್ವ ಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಸಮಾಲೇಚನೆ ನಡೆಸಿದರು. 

ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ ನಡೆದ ಸಭೆ ವೇಳೆ ಮಾತನಾಡಿ ಯಡಿಯೂರಪ್ಪ ಅವರು, ರೈತರಿಗೆ ಅಗತ್ಯ ಇರುವ ಡಿಎಪಿ ಗೊಬ್ಬರ ಹಾಗೂ ಯೂರಿಯಾ ಗೊಬ್ಬರ ಸಕಾಲದಲ್ಲಿ ಪೂರೈಸುವ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. 

ಜೊತೆಗೆ ಪ್ರಸಕ್ತ ರಾಜ್ಯದಲ್ಲಿ 690 ಕೃಷಿ ಯಂತ್ರ ಧಾರೆ ಕೇಂದ್ರಗಳು ಹಾಗೂ 210 ಗ್ರಾಮ ಮಟ್ಟದ ಕೃಷಿ ಯಂತ್ರೋಪಕರಣಗಳು ಬ್ಯಾಂಕ್ ಗಳ ಕಾರ್ಯಾನಿರ್ವಹಿಸುತ್ತಿದ್ದು, ಬಾಡಿಗೆ ಆಧಾರದಲ್ಲಿ ಕೃಷಿ ಯಂತ್ರೋಪಕರಣ ಒದಗಿಸಲಾಗುತ್ತದೆ ಎಂದು ಹೇಳಿದ್ದಾರೆ. 

ರಾಜ್ಯದಲ್ಲಿ ಈ ವರೆಗೆ ಚೆನ್ನಾಗಿ ಮಳೆಯಾಗಿದೆ. ಕರ್ನಾಟಕದಲ್ಲಿ 20 ಜಿಲ್ಲೆಗಳಲ್ಲಿ ವಾಡಿಕೆಯಷ್ಟು ಹಾಗೂ 10 ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 6-7ರ ವೇಳೆಗೆ ಮುಂಗಾರು ಪ್ರಾರಂಭವಾಗಲಿದೆ. 2020-2021ರಲ್ಲಿ ದಾಖಲೆ ಪ್ರಮಾಣದ 153.08 ಲಕ್ಷ ಟನ್ ಗಳಷ್ಟು ಆಹಾರ ಧಾನ್ಯ ಉತ್ಪಾದನೆ ಆಗಿದೆ. ಕಳೆದ ವರ್ಷಕ್ಕಿಂತ ಶೇ.10 ರಷ್ಟು ಹೆಚ್ಚಳವಾಗಿದೆ. ಈ ವರ್ಷ 135.48 ಲಕ್ಷ ಟನ್ ಆಹಾರ ಉತ್ಪಾದನೆಯ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ. 

ಕೊರೋನಾ 2ನೇ ಅಲೆಯ ನಿಯಂತ್ರಣಕ್ಕಾಗಿ ಜಾರಿ ಮಾಡಿರುವ ಸೆಮಿ ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೊಳಗಾಗಿರುವ ಹೂವು, ಹಣ್ಣು ಮತ್ತು ತರಕಾರಿ ಬೆಳಗಾರರಿಗೆ ಘೋಷಿಸಲಾದ ಪರಿಹಾರ ವಿತರಣೆ ಈಗಾಗಲೇ ಆರಂಭವಾಗಿದೆ. ಬಿಡುಗಡೆಯಾಗಿರುವ ರೂ.19 ಕೋಟಿ ಪೈಕಿ ರೂ. 15.23 ಕೋಟಿಯನ್ನು 36,327 ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ ಎಂದಿದ್ದಾರೆ. 

2020-21ರಲ್ಲಿ ಕೃಷಿ ಸಾಲ ಗುರಿಗಿಂತ ಶೇ.16ರಷ್ಟು ಹೆಚ್ಚು ವಿತರಣೆ ಮಾಡಲಾಗಿದೆ. ಕಳೆದ ವರ್ಷಕ್ಕಿಂತ ಮೂರು ಸಾವಿರ ಕೋಟಿ ರೂ. ಹೆಚ್ಚುವರಿ ಗುರಿ ನಿಗದಿಪಡಿಸಿದ್ದು, ಪ್ರಸಕ್ತ ಸಾಲಿನಲ್ಲಿ ರೂ.21 ಸಾವಿರ ಕೋಟಿ ಸಾಲ ವಿತರಣೆಯ ಗುರಿ ನಿಗದಿಪಡಿಸಲಾಗಿದೆ. ಬೆಂಬಲ ಬೆಲೆಯಲ್ಲಿ ಬೆಳೆ ಖರೀದಿ ಕಳೆದ ವರ್ಷ ದಾಖಲೆ ಪ್ರಮಾಣದಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ರೂ.1067 ಕೋಟಿ ಪಾವತಿಗೆ ಬಾಕಿ ಇದ್ದು ಕೂಡಲೇ ರೂ.250 ಕೋಟಿ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com