ಬೀದಿ ಬದಿ ವ್ಯಾಪಾರಿಗಳ ಖಾತೆಗೆ 2,000 ರೂ. ಸಹಾಯಧನ: ಸಾಲ ಖಾತೆಗೆ ಹೊಂದಾಣಿಕೆ ಮಾಡದಂತೆ ಬ್ಯಾಂಕುಗಳಿಗೆ ಸಿಎಂ ಸೂಚನೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ನೋಂದಾಯಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ಕೋವಿಡ್ 19 2ನೇ ಅಲೆಯ ಪರಿಹಾರ ಪ್ಯಾಕೇಜ್‍ನಡಿ ಘೋಷಿಸಿದ ತಲಾ ಎರಡು ಸಾವಿರ ರೂ.ಗಳ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿದರು.
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ನೋಂದಾಯಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ಕೋವಿಡ್ 19 2ನೇ ಅಲೆಯ ಪರಿಹಾರ ಪ್ಯಾಕೇಜ್‍ನಡಿ ಘೋಷಿಸಿದ ತಲಾ ಎರಡು ಸಾವಿರ ರೂ.ಗಳ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿದರು.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ನೋಂದಾಯಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ಈ ಸೌಲಭ್ಯ ದೊರೆತಿದೆ. 

ಕೋವಿಡ್-19 ರಿಂದ ಸಂಕಷ್ಟಕ್ಕೊಳಗಾದವರಿಗೆ ಮಾನವೀಯ ನೆಲೆಯಲ್ಲಿ ಸ್ಪಂದಿಸುವ ನಮ್ಮ ಸರ್ಕಾರದ ಒಂದು ಪ್ರಯತ್ನವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ನಗರ ಸ್ಥಳೀಯ ಸಂಸ್ಥೆಗಳಿಂದ ಸಮೀಕ್ಷೆಯ ಮೂಲಕ 2,16,439 ಬೀದಿಬದಿ ವ್ಯಾಪಾರಸ್ಥರನ್ನು ಗುರುತಿಸಲಾಗಿದೆ. ಇವರುಗಳಿಗೆ ಗುರುತಿನ ಬೀಟಿ ಮತ್ತು ಮಾರಾಟ ಪ್ರಮಾಣ ಪತ್ರವನ್ನು ವಿತರಿಸಿ, ಬೀದಿ ವ್ಯಾಪಾರ ಕೈಗೊಳ್ಳವ ಸ್ಥಳದಲ್ಲಿ ಮೂಲಭೂತ ಸೌಕರ್ಯವನ್ನು ಕಲ್ಪಿಸಲಾಗಿದೆ. ಅಂತೆಯೇ, ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯವನ್ನು ಪಡೆಯಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಕೋವಿಡ್-19 ಮೊದಲನೇ ಅಲೆಯ ಸಂದರ್ಭದಲ್ಲಿ ಜೀವನೋಪಾಯ ನಿರ್ವಹಣೆಗೆ ಸಂಕಷ್ಟಕ್ಕೊಳಗಾದ ಬೀದಿಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಬೀದಿ ವ್ಯಾಪಾರಗಳ ಆತ್ಮನಿರ್ಭರ್ ನಿಧಿ ಯೋಜನೆಯಡಿ ಪ್ರತಿ ಬೀದಿಬದಿ ವ್ಯಾಪಾರಿಗಳಿಗೆ ರೂ. 10,000/- ಗಳ ವರೆಗೆ ಬ್ಯಾಂಕ್ ಮೂಲಕ ಕಿರುಸಾಲ ಸೌಲಭ್ಯವನ್ನು ಒದಗಿಸಲಾಗಿದೆ. ಈವರೆವಿಗೂ ಯೋಜನೆಯಡಿ ರೂ. 107.92 ಕೋಟಿಗಳಷ್ಟು ಸಾಲವನ್ನು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರಾಜ್ಯದಲ್ಲಿ ಕೋವಿಡ್-19ರ 2ನೇ ಅಲೆಯ ಸಂದರ್ಭದಲ್ಲಿ ವಿಧಿಸಲಾದ ನಿರ್ಬಂಧಗಳಿಂದ ಸಂಕಷ್ಟಕ್ಕೊಳಗಾದ ಬೀದಿಬದಿ ವ್ಯಾಪಾರಿಗಳಿಗೆ ದಿನಾಂಕ: 19.05.2021 ರಂದು ಸರ್ಕಾರದಿಂದ ವಿಶೇಷ ಪ್ಯಾಕೇಜ್‍ನಡಿ ತಲಾ 2,000 ರೂ. ಆರ್ಥಿಕ ನೆರವನ್ನು ಘೋಷಿಸಲಾಗಿತ್ತು. ಅದರಂತೆ, 2,16,439 ಫಲಾನುಭವಿಗಳ ಪೈಕಿ ಆಧಾರ ಜೋಡಣೆಯಾಗಿರುವ 1,91,684 ಫಲಾನುಭವಿಗಳ ಬ್ಯಾಂಕ್ ಖಾತೆಗೆ ಸಹಾಯಧನವನ್ನು ನೇರ ನಗದು ವರ್ಗಾವಣೆ (ಡಿಬಿಟಿ) ವಿಧಾನದ ಮೂಲಕ ತಲಾ ರೂ. 2,000/- ರಂತೆ ಒಟ್ಟು ಸಹಾಯಧನ ರೂ. 38.33 ಕೋಟಿಗಳನ್ನು ವರ್ಗಾಯಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ನುಡಿದರು.

ಉಳಿದಂತೆ, ಬ್ಯಾಂಕ್ ಖಾತೆಗೆ ಆಧಾರ ಜೋಡಣೆ ಆಗದೇ ಇರುವ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯನ್ನು ಮಾಡಿ, ಸಹಾಯಧನವನ್ನು ತ್ವರಿತವಾಗಿ ಬಿಡುಗಡೆ ಮಾಡಲು ಕ್ರಮವಹಿಸಲಾಗುವುದು. ಈ ಸಹಾಯಧನ ಪಡೆದುಕೊಳ್ಳಲು ನೋಂದಾಯಿತ ಬೀದಿಬದಿ ವ್ಯಾಪಾರಿಗಳು ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಈ ಪ್ಯಾಕೇಜ್‍ನಡಿ ಬಿಡುಗಡೆ ಮಾಡಿರುವ ಸಹಾಯಧನವನ್ನು ಬೀದಿಬದಿ ವ್ಯಾಪಾರಿಗಳ ಯಾವುದೇ ಸಾಲಕ್ಕೆ ಸರಿದೂಗಿಸಬಾರದೆಂದು, ಈಗಾಗಲೇ ಸಂಬಂಧಿಸಿದ ಬ್ಯಾಂಕಿನವರಿಗೆ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಎರಡನೇ ಅಲೆ ನಮ್ಮನ್ನು ತೀವ್ರವಾಗಿ ಬಾಧಿಸಿದೆ. ಇಂತಹ ಕಠಿಣ ಸಂದರ್ಭದಲ್ಲಿ ಸಂಕಷ್ಟಕ್ಕೆ ಒಳಗಾದ ವಿವಿಧ ವಲಯಗಳ ಕಾರ್ಮಿಕರು, ರೈತರು, ಶಿಕ್ಷಕರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಅರ್ಚಕರು ಮತ್ತಿತರರಿಗೆ ಸರ್ಕಾರ 1,700 ಕೋಟಿ ರೂ. ಗಳಿಗೂ ಹೆಚ್ಚಿನ ಧನ ಸಹಾಯ ಘೋಷಿಸಿದ್ದು, ಈಗಾಗಲೇ ವಿವಿಧ ವರ್ಗದ ಕಾರ್ಮಿಕರಿಗೆ ನೇರ ನಗದು ವರ್ಗಾವಣೆ ಮೂಲಕ ಧನ ಸಹಾಯ ಮಾಡಲಾಗಿದೆ. ಇಂದು ಬೀದಿ ಬದಿ ವ್ಯಾಪಾರಿಗಳಿಗೆ ನೆರವು ನೀಡಲಾಗುತ್ತಿದೆ. ಶೀಘ್ರದಲ್ಲಿಯೇ ಪ್ಯಾಕೇಜ್ ಘೋಷಣೆಯಾದ ಇತರ ವರ್ಗಗಳಿಗೂ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಬೀದಿ ಬದಿ ವ್ಯಾಪಾರಿಗಳು ಕೋವಿಡ್ ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ, ಅವರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಲು ಕ್ರಮ ವಹಿಸುವಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಬೆಂಗಳೂರು ಮಹಾನಗರದಲ್ಲಿ ಈ ಕಾರ್ಯಕ್ರಮಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದರು.

ಬೀದಿ ಬದಿ ವ್ಯಾಪಾರಿಗಳು ತಮ್ಮ ಕಾರ್ಯ ನಿರ್ವಹಣೆಯ ಸಂದರ್ಭದಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧಾರಣೆ ಮತ್ತು ಸ್ವಚ್ಛತೆ ಕಾಪಾಡುವ ಮೂಲಕ ಎಲ್ಲ ಮುನ್ನೆಚ್ಚರಿಕೆಯ ಕ್ರಮ ವಹಿಸಬೇಕೆಂದು ಮನವಿ ಮಾಡಿದರು.

ಸಮಾರಂಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು, ಬೀದಿ ಬದಿ ವ್ಯಾಪಾರಿಗಳಿಗೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ. 2.14 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ನೇರವಾಗಿ ತಲಾ ಎರಡು ಸಾವಿರ ರೂ. ನೆರವನ್ನು ಅರ್ಜಿ ಪಡೆಯದೇ ವಿತರಿಸಲಾಗುತ್ತಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಫಲಾನುಭವಿಗಳಾದ ನಂಜಪ್ಪ ಹಾಗೂ ಲಕ್ಷ್ಮಮ್ಮ ಅವರು ಪಿ.ಎಂ. ಸ್ವನಿಧಿ ಅಡಿ 10 ಸಾವಿರ ಸಾಲ ಸೌಲಭ್ಯ ಹಾಗೂ ಎರಡನೇ ಅಲೆ ಸಂದರ್ಭದಲ್ಲಿ ನೀಡಲಾಗುತ್ತಿರುವ 2 ಸಾವಿರ ರೂ. ನೆರವಿನಿಂದ ಅನುಕೂಲವಾಗಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com