ದೇಗುಲಗಳನ್ನು ಮುಚ್ಚಬೇಕೆಂಬ ಆದೇಶ ಪಾಲನೆಯಲ್ಲಿ ಯಾರಿಗೂ ವಿನಾಯಿತಿ ಇರಬಾರದು: ಹೈಕೋರ್ಟ್

ವಿಪತ್ತು ನಿರ್ವಹಣಾ ಕಾಯ್ದೆಯಡಿ ರಾಜ್ಯ ಮಟ್ಟದ ಕಾರ್ಯಕಾರಿ ಸಮಿತಿ ಹೊರಡಿಸುವ ಆದೇಶಗಳನ್ನು ಎಲ್ಲರೂ ಪಾಲಿಸಬೇಕು. ದೇಗುಲಗಳನ್ನು ಮುಚ್ಚಬೇಕು ಎಂಬ ಆದೇಶ ಪಾಲನೆಯಲ್ಲಿ ಯಾರಿಗೂ ವಿನಾಯಿತಿ ಇರಬಾರದು.
ಹೈಕೋರ್ಟ್
ಹೈಕೋರ್ಟ್
Updated on

ಬೆಂಗಳೂರು: ವಿಪತ್ತು ನಿರ್ವಹಣಾ ಕಾಯ್ದೆಯಡಿ ರಾಜ್ಯ ಮಟ್ಟದ ಕಾರ್ಯಕಾರಿ ಸಮಿತಿ ಹೊರಡಿಸುವ ಆದೇಶಗಳನ್ನು ಎಲ್ಲರೂ ಪಾಲಿಸಬೇಕು. ದೇಗುಲಗಳನ್ನು ಮುಚ್ಚಬೇಕು ಎಂಬ ಆದೇಶ ಪಾಲನೆಯಲ್ಲಿ ಯಾರಿಗೂ ವಿನಾಯಿತಿ ಇರಬಾರದು, ಆದೇಶ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆಯೇ ಎಂಬುದನ್ನು ಖಚಿತಪಡಿಸಬೇಕು ಎಂಬ ನಿರ್ದೇಶನವನ್ನು ಮುಜರಾಯಿ ಇಲಾಖೆಗೆ ನೀಡಬೇಕು’ ಎಂದು ಹೈಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ..

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ ಅವರು ಕೋವಿಡ್‌ ಮಾರ್ಗಸೂಚಿ ಉಲ್ಲಂಘಿಸಿ ನಂಜನಗೂಡಿನ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಪ್ರಕರಣದಲ್ಲಿ ಅಧಿಕಾರಿಗಳು ಮತ್ತು ರಾಜಕಾರಣಿಗಳ ಕಣ್ತೆರೆಸುವ ಅಗತ್ಯವಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. 

ವಿಚಾರಣೆ ವೇಳೆ ಪ್ರಕರಣದ ಕುರಿತು ಬೇಸರ ವ್ಯಕ್ತಪಡಿಸಿದ ಪೀಠ, ಸಾರ್ವಜನಿಕರಿಗೆ ದೇವಾಲಯಕ್ಕೆ ಪ್ರವೇಶವಿಲ್ಲ ಎಂದರೆ ಯಾರಿಗೂ ಇಲ್ಲ ಎಂದೇ ಅರ್ಥ. ಅಂತಹದ್ದರಲ್ಲಿ ರಾಜಕಾರಣಿಗಳು ಹೇಗೆ ಭೇಟಿ ನೀಡಲು ಸಾಧ್ಯ. ರಾಜಕಾರಣಿಗಳಿಗೆ ಇತರರಿಗಿಂತ ಹೆಚ್ಚು ಹೊಣೆಗಾರಿಕೆಯಿರುತ್ತದೆ. ಈ ಪ್ರಕರಣ ಸಂಬಂಧಪಟ್ಟ ಎಲ್ಲರ ಕಣ್ತೆರೆಸಬೇಕು. ಅಧಿಕಾರಿಗಳು, ರಾಜಕಾರಣಿಗಳಿಗೆ ಅರಿವಾಗಬೇಕು.

ಮೈಸೂರು ಜಿಲ್ಲಾಧಿಕಾರಿ ಸಲ್ಲಿಸಿದ್ದ ವರದಿ ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ದೇವಸ್ಥಾನಕ್ಕೆ ಪ್ರವೇಶ ನಿಷೇಧ ನಿಯಮಗಳನ್ನು ಉಲ್ಲಂಘಿಸದಂತೆ ಮುಜರಾಯಿ ಇಲಾಖೆಗೆ ಸೂಚನೆ ನೀಡಬೇಕು’ ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು. 

ನಿಷೇಧ ಇದ್ದರೂ ದೇವಾಲಯಕ್ಕೆ ವಿಜಯೇಂದ್ರ ಪ್ರವೇಶಿಸಿದ್ದಾರೆ ಎಂಬುದನ್ನು ಜಿಲ್ಲಾಧಿಕಾರಿ ವರದಿಯಲ್ಲಿ ಒಪ್ಪಿಕೊಳ್ಳಲಾಗಿದೆ. ವಿಜಯೇಂದ್ರ ಅವರಿಗೆ ವಿಶೇಷ ದರ್ಶನದ ವ್ಯವಸ್ಥೆ ಮಾಡಿರಲಿಲ್ಲ ಎಂದು ದೇಗುಲದ ಕಾರ್ಯನಿರ್ವಹಣಾ ಅಧಿಕಾರಿ ಹೇಳಿಕೆ ನೀಡಿರುವ ಅಂಶವನ್ನೂ ವರದಿಯಲ್ಲಿ ಉಲ್ಲೇಖಿಸಲಾಗಿದೆ. ‘ನಿಯಮ ಉಲ್ಲಂಘಿಸಿದ ವ್ಯಕ್ತಿ ನ್ಯಾಯಾಲಯದಲ್ಲಿ ಇಲ್ಲ. ಆದರೂ ಅವರು ಜಿಲ್ಲಾಧಿಕಾರಿ ವರದಿಯಲ್ಲಿ ನೀಡಿರುವ ಹೇಳಿಕೆ ಗಮನಿಸಬೇಕಾಗಿದೆ’ ಎಂದು ಪೀಠ ಹೇಳಿತು.

ಇದಕ್ಕೂ ಮುನ್ನ ಪ್ರಕರಣದ ಕುರಿತು ಜಿಲ್ಲಾಧಿಕಾರಿ ನಡೆಸಿದ್ದ ಪ್ರಾಥಮಿಕ ತನಿಖಾ ವರದಿಯನ್ನು ಪೀಠಕ್ಕೆ ಸಲ್ಲಿಸಲಾಯಿತು. ಈ ವೇಳೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಸಮರ್ಥನೆ ಕೊಡಲು ಯತ್ನಿಸಿದರು. ನಂಜನಗೂಡು ದೇವಸ್ಥಾನವನ್ನು ವಿಜಯೇಂದ್ರ ಪ್ರವೇಶಿಸಿದ್ದರು ನಿಜ. ಆದರೆ, ವಿಶೇಷ ದರ್ಶನಕ್ಕೆ ಅವಕಾಶ ನೀಡಿರಲಿಲ್ಲ. ವಿಜಯೇಂದ್ರ ಉದ್ದೇಶಪೂರ್ವಕವಾಗಿ ಭೇಟಿ ನೀಡಿರಲಿಲ್ಲ. ಪೂಜೆ ವೇಳೆ ಅರ್ಚಕರು ಕರೆದರೆಂದು ಹೋಗಿದ್ದಾರೆ. ಕೇವಲ ಐದು ಹತ್ತು ನಿಮಿಷವಷ್ಟೇ ದೇವಾಸ್ಥಾನದೊಳಗೆ ಇದ್ದರು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com