ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣ ತನಿಖೆ ನಡೆಸುತ್ತಿರುವ ಬೆಂಗಳೂರು ಪೊಲೀಸರು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ಪ್ರಕರಣದ ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಬೆಂಗಳೂರಿನಲಿರುವ ಶಾಸಕರ ನಿವಾಸಕ್ಕೆ ತೆರಳಿದ ಪೊಲೀಸರು ಹೇಳಿಕೆ ದಾಖಲಿಸಿದ್ದಾರೆ.
ಬಿಜೆಪಿ ಹಾಗೂ ಆರ್ಎಸ್ಎಸ್ ಮುಖಂಡರು ಪರಿಚಯಸ್ಥರೆಂದು ಹೇಳಿಕೊಂಡು ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಯುವರಾಜ್ನನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದರು. ಸದ್ಯ ಆತ ನ್ಯಾಯಾಂಗ ಬಂಧನದಲ್ಲಿದ್ದು, ಕೇಂದ್ರ ಕಾರಾಗೃಹದ ವಾಸದಲ್ಲಿದ್ದಾನೆ.
ಪೊಲೀಸರು ಸಿಡಿಆರ್ ವಿವರಗಳನ್ನು ಸಂಗ್ರಹಿಸಿದ್ದಾರೆ, ಬೆಲ್ಲದ್ ಅವರಿಗೆ ಕರೆ ಮಾಡಲು ಬಳಸಿದ ಸಂಖ್ಯೆಯ ಕಾಲ್ ರೆಕಾರ್ಡ್ ಹಿಸ್ಟರ್ ಮತ್ತು ಅದರ ಟವರ್ ಇರುವ ಸ್ಥಳದ ಜೊತೆಗೆ ವಿಶ್ಲೇಷಿಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನನ್ನ ಫೋನ್ ಕದ್ದಾಲಿಕೆ ಆಗುತ್ತಿದೆಯೆಂದು ಆರೋಪಿಸಿ ಶಾಸಕ ಅರವಿಂದ್ ಬೆಲ್ಲದ್ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಪೊಲೀಸ್ ಮುಖ್ಯಸ್ಥರಿಗೆ ದೂರು ನೀಡಿದ್ದರು. ನ್ಯಾಯಾಂಗ ಬಂಧನದಲ್ಲಿರುವ ವ್ಯಕ್ತಿಯೊಬ್ಬ ನನಗೆ ಕರೆ ಮಾಡುತ್ತಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.
ಪ್ರಕರಣದ ತನಿಖೆ ನಡೆಯುತ್ತಿದ್ದು, ಪೊಲೀಸ್ ಅಧಿಕಾರಿಗಳು ಎಲ್ಲಾ ಆಯಾಮಗಳಿಂದಲೂ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Advertisement