ಬೆಂಗಳೂರು: ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (ನೈಸ್) ಕಂಪನಿ ವಿರುದ್ಧ ಮಾಡಿದ್ದ ಆರೋಪ ಸಾಬೀತುಪಡಿಸುವಲ್ಲಿ ವಿಫಲರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಕಂಪನಿಗೆ 2 ಕೋಟಿ ರೂ. ಪರಿಹಾರ ನೀಡಬೇಕೆಂದು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶಿಸಿದೆ.
ಖಾಸಗಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ ದೇವೇಗೌಡರು ಸಂಸ್ಥೆಯ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ನೈಸ್ ಕಂಪನಿಯು ಮಾನನಷ್ಟ ಮೊಕದ್ದಮೆ ಹೂಡಿತ್ತು.
ಕಂಪನಿ ವಿರುದ್ಧ ಆರೋಪ ಸಾಬೀತುಪಡಿಸುವಲ್ಲಿ ದೇವೇಗೌಡರು ವಿಫಲರಾಗಿದ್ದಾರೆ. ಹೀಗಾಗಿ ಕಂಪನಿಗೆ 2 ಕೋಟಿ ರೂ. ನಷ್ಟ ಪರಿಹಾರ ಕಟ್ಟಿಕೊಡಬೇಕೆಂದು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲನಗೌಡ ತೀರ್ಪು ನೀಡಿದ್ದಾರೆ.
2011ರ ಜೂನ್ 20ರಂದು ಸುದ್ದಿ ವಾಹಿನಿಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ನೈಸ್ ಕಂಪನಿ ‘ಸಾರ್ವಜನಿಕ ಹಣ ಲೂಟಿ ಮಾಡುವ ಯೋಜನೆ’ ಎಂದು ಆರೋಪಿಸಿದ್ದರು. ‘ಗೌಡರ ಘರ್ಜನೆ’ ಎಂಬ ಶೀರ್ಷಿಕೆಯಡಿ ಈ ಸಂದರ್ಶನ ಬಿತ್ತರವಾಗಿತ್ತು.
Advertisement