ಬೆಂಗಳೂರು: ರಾಜ್ಯದ ವಕ್ಫ್ ಆಸ್ತಿಗಳ ಕಬಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಅಲ್ಪಸಂಖ್ಯಾತರ ಆಯೋಗ ಸಲ್ಲಿಸಿರುವ ವಿಶೇಷ ವರದಿಯ ಶಿಫಾರಸುಗಳನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಿರುವ ಬಗ್ಗೆ ವಿವರ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ವಕ್ಫ್ ಆಸ್ತಿ ದುರ್ಬಳಕೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ 2012ರಲ್ಲಿ ಸಲ್ಲಿಸಿರುವ ವಿಶೇಷ ವರದಿ ಆಧರಿಸಿ ವಕ್ಫ್ ಆಸ್ತಿಗಳ ಒತ್ತುವರಿ ಹಾಗೂ ದುರ್ಬಳಕೆಯನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಮಾಜಿ ಸಚಿವ ಎಸ್.ಕೆ. ಕಾಂತಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ಮುಖ್ಯ ನ್ಯಾಯಮೂರ್ತಿ ಎ. ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲ ಕಾಲ ವಾದ - ಪ್ರತಿವಾದ ಆಲಿಸಿದ ಪೀಠ, ರಾಜ್ಯದಲ್ಲಿ ವಕ್ಫ್ ಆಸ್ತಿಗಳ ಒತ್ತುವರಿ ಹಾಗೂ ರ್ದುಬಳಕೆಗೆ ಸಂಬಂಧಿಸಿದಂತೆ ಆಯೋಗ ಸಲ್ಲಿಸಿರುವ ವರದಿಯ ಶಿಫಾರಸುಗಳನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಿರುವ ಬಗ್ಗೆ ವಿವರ ನೀಡಬೇಕು. ಅದೇ ರೀತಿ ಆಯೋಗದ ವರದಿ ಆಧರಿಸಿ ಲೋಕಾಯುಕ್ತ ಸಂಸ್ಥೆಯು 2016ರಲ್ಲಿ ನೀಡಿದ ವರದಿ ಮೇರೆಗೆ ಕರ್ನಾಟಕ ಲೋಕಾಯುಕ್ತ ಕಾಯ್ದೆ-1984ರ ಸೆಕ್ಷನ್ 12 (2) ಪ್ರಕಾರ ಕೈಗೊಂಡ ಕ್ರಮಗಳ ಮಾಹಿತಿ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಆಗಸ್ಟ್ 8ಕ್ಕೆ ಮುಂದೂಡಿತು.
Advertisement