ಬೆಂಗಳೂರು: ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು-ಶಿಕ್ಷಕರ ವರ್ಗಾವಣೆ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ಮಾಡುವ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅನುಮೋದನೆ ಸಿಕ್ಕಿರುವುದರಿಂದ ಶೀಘ್ರದಲ್ಲೇ ಶಿಕ್ಷಕರ ವರ್ಗಾವಣೆ ಪ್ರತಿಕ್ರಿಯೆ ಪ್ರಾರಂಭಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು-ಶಿಕ್ಷಕರ ವರ್ಗಾವಣೆ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ತರುವ ಸಚಿವ ಸಂಪುಟದ ನಿರ್ಣಯವನ್ನು ರಾಜ್ಯಪಾಲರು ಅನುಮೋದಿಸಿದ್ದು, ಈ ಕುರಿತಂತೆ ಅಧ್ಯಾದೇಶವನ್ನು ಅಧಿಕೃತ ರಾಜ್ಯಪತ್ರದ ಮೂಲಕ ಪ್ರಕಟಿಸಲು ಕ್ರಮ ವಹಿಸಲಾಗಿದೆ.
2019-20ನೇ ಸಾಲಿನಲ್ಲಿ ಕಡ್ಡಾಯ-ಹೆಚ್ಚುವರಿ ವರ್ಗಾವಣೆಗೊಳಗಾದ ಶಿಕ್ಷಕರಿಗೆ ಒಂದು ಬಾರಿ ವಿಶೇಷ ಅವಕಾಶ ಜಾರಿಯಲ್ಲಿಡಬೇಕು, ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ತಾಲ್ಲೂಕು ಅಥವಾ ಜಿಲ್ಲೆಯಲ್ಲಿ ಲಭ್ಯವಿರುವ ಹುದ್ದೆಗಳಿಗೆ ಮೊದಲ ಆದ್ಯತೆಯ ವರ್ಗಾವಣೆ ಅವಕಾಶವನ್ನು ನೀಡಲು ಸುಗ್ರೀವಾಜ್ಞೆಯಲ್ಲಿ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ವರ್ಗಾವಣೆ ಕೋರಿ ಸಲ್ಲಿಕೆಯಾಗಿರುವ ಸುಮಾರು 72 ಸಾವಿರ ಅರ್ಜಿಗಳನ್ನು ‘ಶಿಕ್ಷಕ ಮಿತ್ರ’ ಆ್ಯಪ್ ಮೂಲಕವೇ ನಿರ್ವಹಿಸಿ, ಆನ್ಲೈನ್ ಮೂಲಕವೇ ಕೌನ್ಸೆಲಿಂಗ್ ಪ್ರಕ್ರಿಯೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಶಿಕ್ಷಕರು ಭೌತಿಕ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಾರದು. ವರ್ಗಾವಣೆ ವ್ಯವಸ್ಥೆ ಅತ್ಯಂತ ಪಾರದರ್ಶಕವಾಗಿರಬೇಕು.
ಯಾವುದೇ ದೂರುಗಳು ಬಂದರೂ ಸಮರ್ಪಕವಾಗಿ ನಿರ್ವಹಿಸುವ ಸದೃಢ ವ್ಯವಸ್ಥೆ ಮಾಡಬೇಕು. ಇಡೀ ವರ್ಗಾವಣೆ ಪ್ರಕ್ರಿಯೆ ಕಾಲ ಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.
ಯಾವುದೇ ಕಾರಣಕ್ಕೂ ಶಿಕ್ಷಕರು ಭೌತಿಕವಾಗಿ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಾರದು, ವ್ಯವಸ್ಥೆ ಅತ್ಯಂತ ಪಾರದರ್ಶಕವಾಗಿರಬೇಕು. ಯಾವುದೇ ದೂರು ದುಮ್ಮಾನಗಳನ್ನು ಸಮರ್ಪಕವಾಗಿ ನಿರ್ವಹಿಸುವ ಸದೃಢ ವ್ಯವಸ್ಥೆ ಜಾರಿಯಲ್ಲಿಡಬೇಕು ಹಾಗೂ ಇಡೀ ಪ್ರಕ್ರಿಯೆ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ
ಎಂದು ಸಚಿವರು ಹೇಳಿದರು.
ಕಡ್ಡಾಯ-ಹೆಚ್ಚುವರಿ ವರ್ಗಾವಣೆಯಿಂದ ಸುಮಾರು ಮೂರೂವರೆ ಸಾವಿರ ಶಿಕ್ಷಕರು ತೀವ್ರ ಸಂಕಷ್ಟಕ್ಕೊಳಗಾಗಿದ್ದು, ಮಾನವೀಯ ನೆಲೆಗಟ್ಟಿನಲ್ಲಿ ಅವರಿಗೆ ಅವಕಾಶ ಕಲ್ಪಿಸಬೇಕಾಗಿರುವುದು ಸರ್ಕಾರದ ಜವಾಬ್ದಾರಿಯಾಗಿದೆ. ನ್ಯಾಯಾಲಯದ ಆಜ್ಞೆಯನ್ನು ಅನುಸರಿಸುವ, ಸಂಕಷ್ಟದಲ್ಲಿರುವ ಶಿಕ್ಷಕರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಅತಿ ಶೀಘ್ರ ಅವಧಿಯಲ್ಲಿ ಸುಗ್ರೀವಾಜ್ಞೆಯನ್ನು ಹೊರತರಲು ಕ್ರಮ ವಹಿಸಲಾಗಿದೆ ಎಂದರು.
Advertisement