ಬಳ್ಳಾರಿಯಲ್ಲಿ 1 ಸಾವಿರ ಆಕ್ಸಿಜನ್ ಹಾಸಿಗೆಯುಳ್ಳ ಆಸ್ಪತ್ರೆ 15 ದಿನಗಳಲ್ಲಿ ಕಾರ್ಯಾರಂಭ: ಬಿ. ಶ್ರೀರಾಮುಲು

ಒಂದು ಸಾವಿರ ಆಕ್ಸಿಜನ್ ಬೆಡ್ ಹೊಂದಿರುವ ತಾತ್ಕಾಲಿಕ ಆಸ್ಪತ್ರೆ ಇನ್ನು 15 ದಿನಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದರು.
ಶ್ರೀರಾಮುಲು
ಶ್ರೀರಾಮುಲು

ಬಳ್ಳಾರಿ: ಒಂದು ಸಾವಿರ ಆಕ್ಸಿಜನ್ ಬೆಡ್ ಹೊಂದಿರುವ ತಾತ್ಕಾಲಿಕ ಆಸ್ಪತ್ರೆ ಇನ್ನು 15 ದಿನಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದರು.

ಜಿಂದಾಲ್ ಎದುರುಗಡೆ ನಿರ್ಮಾಣವಾಗುತ್ತಿರುವ 1 ಸಾವಿರ ಆಕ್ಸಿಜನ್ ಹಾಸಿಗೆಗಳ ತಾತ್ಕಾಲಿಕ ಆಸ್ಪತ್ರೆ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 265 ಹಾಸಿಗೆಯುಳ್ಳ ಒಂದು ಘಟಕ ಇನ್ನು ಎರಡು ದಿನಗಳಲ್ಲಿ ಕಾರ್ಯಾರಂಭವಾಗಲಿದೆ. ಇದರೊಂದಿಗೆ ಇನ್ನು 15 ದಿನಗಳಲ್ಲಿ ಸಂಪೂರ್ಣ ಆಸ್ಪತ್ರೆ ಜನರ ಉಪಯೋಗಕ್ಕೆ ಬರಲಿದೆ ಎಂದರು.

ರಾಜ್ಯದಲ್ಲಿ ಆಕ್ಸಿಜನ್ ಬೆಡ್ ಗಾಗಿ ಜನರು ಪರದಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಬಳ್ಳಾರಿಯಲ್ಲಿ ನಿರ್ಮಾಣವಾಗುತ್ತಿರುವ ಸಾವಿರಬೆಡ್ ಗಳ ಆಸ್ಪತ್ರೆಯಿಂದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಸೇರಿ ಸುತ್ತಮುತ್ತಲಿನ ರಾಯಚೂರು, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳಿಗೂ ಅನುಕೂಲವಾಗಲಿದೆ ಎಂದರು.

ಅವಳಿ ಜಿಲ್ಲೆಯ ಜನರು ಬೆಡ್ ಸಿಗುತ್ತಿಲ್ಲ ಎಂದು ಯಾವುದೇ ರೀತಿಯ ಆತಂಕ ಪಡುವ ಅವಶ್ಯಕತೆ ಇಲ್ಲ. ಎಲ್ಲಾ ರೀತಿಯ ಸಮಸ್ಯೆಗಳಿಗೆ ಆಸ್ಪತ್ರೆ ಸಹಾಯವಾಗಲಿದ್ದು, ಜಿಲ್ಲಾಡಳಿತ ಮತ್ತು ಜಿಂದಾಲ್ ಕಂಪನಿಯ ಈ ಒಂದು ಕಾರ್ಯ ರಾಜ್ಯಕ್ಕೆ ಮಾದರಿಯಾಗಲಿದೆ ಎಂದು ಹೇಳಿದರು.

ಮೂಲಭೂತ ಸೌಕರ್ಯ, ಹಜ್ ಮತ್ತು ವಕ್ಫ್ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಮಾತನಾಡಿ, ರಾಜ್ಯದಲ್ಲಿ ಆಕ್ಸಿಜನ್ ಹಾಸಿಗೆಯಿಲ್ಲದೆ ಜನರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಸಾವಿರ ಹಾಸಿಗೆಯುಳ್ಳ ಆಸ್ಪತ್ರೆ ನಿರ್ಮಾಣ ಮಾಡಲು ಹೊರಟಿರುವ ಜಿಂದಾಲ್ ಕಂಪನಿಗೆ ತುಂಬಾ ಧನ್ಯವಾದಗಳು. ಜಿಲ್ಲಾಡಳಿತದ ಸಹಕಾರದೊಂದಿಗೆ ಜಿಂದಾಲ್ ಸಂಸ್ಥೆ ಜಿಲ್ಲೆಯ ಜನರ ಕಷ್ಟಕ್ಕೆ ಸ್ಪಂದಿಸುವ ಒಂದೊಳ್ಳೆಯ ಕೆಲಸಕ್ಕೆ ಮುಂದಾಗಿದ್ದಾರೆ ಎಂದರು.

ಆಕ್ಸಿಜನ್ ನ ತೊಂದರೆಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಜಿಂದಾಲ್ ಸಂಸ್ಥೆಯ ಸಮೀಪವೇ ಈ ಆಸ್ಪತ್ರೆ ನಿರ್ಮಾಣ ಮಾಡಲಾಗಿದ್ದು, ಎಲ್ಲಾ ರೀತಿಯ ಸೌಲಭ್ಯಗಳು ಆಸ್ಪತ್ರೆಯಲ್ಲಿ ರೋಗಿಗಳಿಗೆ ದೊರಕಲಿವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಸೇರಿ ಜಿಂದಾಲ್ ನ ಅಧಿಕಾರಿಗಳು ಮತ್ತಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com