ಬೆಂಗಳೂರು: ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವ ಎಲ್ಲರ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಶನಿವಾರ ಹೇಳಿದೆ.
ಚಾಮರಾಜನಗರದ ವಕೀಲ ಕೆ.ಎಂ.ಶ್ರೀನಿವಾಸಮೂರ್ತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ನಿನ್ನೆಯಷ್ಟೇ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದಿಂದ ನೇಮಿಸಿರುವ ಅಧಿಕಾರಿ ಅಥವಾ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ನಿಯೋಜಿಸಿರುವ ಸಮಿತಿಯಿಂದ ಪ್ರಾಥಮಿಕ ತನಿಖಾ ವರದಿ ಬಂದ ನಂತರ ಅರ್ಜಿಯನ್ನು ಪರಿಗಣಿಸಲಾಗುವುದು ಎಂದು ತಿಳಿಸಿ ವಿಚಾರಣೆ ಮುಂದೂಡಿದೆ.
ಇದೇ ವೇಳೆ ಸಾವನ್ನಪ್ಪಿದ ಎಲ್ಲ ಕೋವಿಡ್ ಸೋಂಕಿತರ ಮರಣೋತ್ತರ ಪರೀಕ್ಷೆ ನಡೆಸಬೇಕು ಎಂಬ ಕೋರಿಕೆಯನ್ನು ಈ ಹಂತದಲ್ಲಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿತು.
ಅರ್ಜಿದಾರರು, ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವ ಎಲ್ಲರ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಬೇಕು, ಆಕ್ಸಿಜನ್ ಲಭ್ಯವಾಗದೇ ಸಾವನ್ನಪ್ಪಿರುವ ಕುರಿತು ಖಚಿತಪಡಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಮೃತರ ಕುಟುಂಬಗಳಿಗೆ ತಲಾ 15ಲಕ್ಷ ಪರಿಹಾರ ಕೊಡಿಸಬೇಕು ಎಂದು ಕೋರಿದ್ದರು.
Advertisement