ಚಾಮರಾಜನಗರ ದುರಂತದಲ್ಲಿ ಮೃತಪಟ್ಟ 24 ಮಂದಿ ಕುಟುಂಬಕ್ಕೆ ಪರಿಹಾರ ಕುರಿತು ಪ್ರತಿಕ್ರಿಯೆ ನೀಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್

ಚಾಮರಾಜನಗರದಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟವ್ಯಕ್ತಿಗಳ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತು ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಚಾಮರಾಜನಗರದಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟವ್ಯಕ್ತಿಗಳ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತು ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. 

ಕೊರೋನಾ ನಿರ್ವಹಣೆ ಸಂಬಂಧ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎ.ಎಸ್‌.ಓಕ ಅವರಿದ್ದ ವಿಭಾಗೀಯ ಪೀಠ, ಘಟನೆ ಸಂಬಂಧ ಪ್ರಾಥಮಿಕ ತನಿಖೆ ನಡೆಸಿರುವ ನಿವೃತ್ತ ನ್ಯಾ. ಎ.ಎನ್‌. ವೇಣುಗೋಪಾಲಗೌಡ ನೇತೃತ್ವದ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿ​ಕಾರದ ಉನ್ನತ ಮಟ್ಟದ ಸಮಿತಿ ಮಂಗಳವಾರ ಸಲ್ಲಿಸಿದ್ದ ಪ್ರಾಥಮಿಕ ವರದಿ ಪರಿಶೀಲಿಸಿ, ಶಿಫಾರಸ್ಸುಗಳನ್ನು ಪರಿಗಣಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿತು. 

ಅಲ್ಲದೆ, ಮೃತಪಟ್ಟ 24 ಮಂದಿ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಪ್ರತಿಕ್ರಿಯೆ ನೀಡುವಂತೆ ಸರ್ಕಾರಕ್ಕೆ ಸೂಚಿಸಿದ್ದು, ಮಂದಿನ ವಿಚಾರಣೆಯೊಳಗೆ ನಿರ್ಧಾರ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಪೀಠ ನಿರ್ದೇಶನ ನೀಡಿದೆ. 

ಸರ್ಕಾರದ ನಿರ್ಲಕ್ಷ್ಯದಿಂದ ಸಂಭವಿಸಿದ ಸಾವುಗಳಿಗೆ ಪರಿಹಾರ ನೀಡಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶವನ್ನು  ನೆನಪಿಸಿದ ಪೀಠ, ‘ಸಂವಿಧಾನದ ಪರಿಚ್ಛೇದ 21ರ ಅಡಿಯಲ್ಲಿನ ಜೀವಿಸುವ ಮೂಲಭೂತ ಹಕ್ಕಿನ ಉಲ್ಲಂಘನೆ ಆಗಿರುವ ಕಾರಣ ಪರಿಹಾರ ನೀಡಬೇಕು’ ಎಂದು ಹೇಳಿತು.

ಸಮಿತಿಯ ಶಿಫಾರಸುಗಳು ಇಂತಿವೆ...

  • ಆಮ್ಲಜನಕ ಹಂಚಿಕೆ ಮತ್ತು ವಿತರಣೆ ವ್ಯವಸ್ಥೆ ಮೇಲುಸ್ತುವಾರಿ ವಹಿಸಲು ಜಿಲ್ಲಾಧಿಕಾರಿಗಿಂತ ಉನ್ನತ ಅಧಿಕಾರಿಯನ್ನು ನೇಮಿಸಬೇಕು
  • ಎಲ್ಲಾ ಆಸ್ಪತ್ರೆಗಳಲ್ಲಿ ಕನಿಷ್ಠ 24 ಗಂಟೆಗಳಿಗೆ ಸಾಕಾಗುವಷ್ಟು ಆಮ್ಲಜನಕ ಸಂಗ್ರಹ ಇರುವಂತೆ ನೋಡಿಕೊಳ್ಳಬೇಕು
  • ಆಮ್ಲಜನಕ ಕೊರತೆಯಿಂದ ಸಾವು ಸಂಭವಿಸಿದರೆ ಅಂತಹ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಬೇಕು
  • ಆಮ್ಲಜನಕ ನಿರ್ವಹಣೆ ಕುರಿತು ದಾಖಲು ಮಾಡುವ ವಿಧಾನ ರಾಜ್ಯದಾದ್ಯಂತ ಏಕರೂಪದಲ್ಲಿ ಇರಬೇಕು. ಎಷ್ಟು ಆಮ್ಲಜನಕ ಲಭ್ಯವಿದೆ ಎಂಬುದರ ಮಾಹಿತಿಯನ್ನು ಎಲ್ಲಾ ಆಸ್ಪತ್ರೆಗಳಲ್ಲಿ ಡಿಜಿಟಲ್ ಫಲಕದಲ್ಲಿ ಪ್ರದರ್ಶಿಸಬೇಕು
  • ಸಂಭವನೀಯ ಮೂರನೇ ಅಲೆ ಗಮನದಲ್ಲಿಟ್ಟುಕೊಂಡು ಎಲ್ಲಾ ಆಸ್ಪತ್ರೆಗಳಲ್ಲಿ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ ಆಯೋಜಿಸಬೇಕು
  • ಆಮ್ಲಜನಕ ಬಳಕೆ ಬಗ್ಗೆ ಕೈಪಿಡಿಯನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ತಜ್ಞರಿಂದ ಸಿದ್ಧಪಡಿಸಬೇಕು
  • ಆಮ್ಲಜನಕ ಸಿಲಿಂಡರ್ ಸಾಗಿಸುವ ವಾಹನಗಳಿಗೆ ಜಿಪಿಎಸ್‌ ಅಳವಡಿಸಬೇಕು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com