ಡಾ ಕೆ ಸುಧಾಕರ್
ಡಾ ಕೆ ಸುಧಾಕರ್

ಕೋವಿಡ್ ಹೆಚ್ಚಿರುವ ಜಿಲ್ಲೆಗಳಿಗೆ ಆಕ್ಸಿಜನ್ ಕಾನ್ಸಂಟ್ರೇಟರ್ ಪೂರೈಕೆ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್

ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಕಡೆಗಳಲ್ಲಿ ತಲಾ 25 ರಂತೆ ಆಕ್ಸಿಜನ್ ಕಾನ್ಸಂಟ್ರೇಟರ್ ಕಳುಹಿಸಿಕೊಡಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.

ಬೆಂಗಳೂರು: ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಕಡೆಗಳಲ್ಲಿ ತಲಾ 25 ರಂತೆ ಆಕ್ಸಿಜನ್ ಕಾನ್ಸಂಟ್ರೇಟರ್ ಕಳುಹಿಸಿಕೊಡಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋವಿಡ್ ಪ್ರಕರಣ ಹೆಚ್ಚಿರುವ ಜಿಲ್ಲೆಗಳಿಗೆ 25 ಆಕ್ಸಿಜನ್ ಕಾನ್ಸಂಟ್ರೇಟರ್ ನೀಡಲಾಗುತ್ತಿದೆ. ಇತ್ತೀಚೆಗೆ 800 ಕಾನ್ಸಂಟ್ರೇಟರ್ ಬಂದಿದ್ದು, ಜಿಲ್ಲೆಗಳಿಗೆ ಹಂಚಲಾಗುತ್ತಿದೆ. ಮಂಡ್ಯ, ಚಿತ್ರದುರ್ಗ, ಕೋಲಾರ, ಹಾಸನ, ಚಿಕ್ಕಬಳ್ಳಾಪುರ ಮೊದಲಾದ ಮೂಲಸೌಕರ್ಯ ಕಡಿಮೆ ಇರುವ ಕಡೆಗಳಿಗೆ ನೀಡಲಾಗುತ್ತಿದೆ ಎಂದರು.

ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಕೋವಿಡ್ ಚಿಕಿತ್ಸೆಗೆ ಐಸಿಯು ವ್ಯವಸ್ಥೆ, ಆಕ್ಸಿಜನ್ ಪೂರೈಕೆ ಸೇರಿದಂತೆ ಹೆಚ್ಚು ನೆರವು ನೀಡಲು ಚರ್ಚಿಸಲಾಗುವುದು. ಇದಕ್ಕಾಗಿ ತುಮಕೂರು, ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡಲಾಗುತ್ತಿದೆ. ನಂತರ ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಗದಗ ಜಿಲ್ಲೆಗಳಿಗೆ ಭೇಟಿ ನೀಡಿ ಚರ್ಚಿಸಲಾಗುವುದು ಎಂದರು.

ಪ್ರತಿ ಜಿಲ್ಲಾಡಳಿತ, ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಮಾಹಿತಿ ನೀಡಲಾಗುವುದು. ಎಲ್ಲಾ ಜನಪ್ರತಿನಿಧಿಗಳು ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಕೋರಲಾಗುವುದು. ಪಾಸಿಟಿವಿಟಿ ದರ 37-40% ಇದ್ದು, 27% ಕ್ಕೆ ಬಂದಿದೆ. ಇದನ್ನು 5% ಕ್ಕಿಂತ ಕಡಿಮೆ ಇಳಿಸುವ ಗುರಿ ಇದೆ. ಬೇರೆ ದೇಶಗಳ ಕೊರೊನಾ ಅಲೆ ಬಗ್ಗೆ ಕಾನ್ಪುರ ಐಐಟಿ ವರದಿ ನೀಡಿದ್ದು, ಈ ಬಗ್ಗೆ ಕೇಂದ್ರದ ಜೊತೆ ಚರ್ಚೆಯಾಗಿ ಸಲಹೆ ದೊರೆತಿದೆ. ಸಾವಿನ ಸಂಖ್ಯೆ ಹೆಚ್ಚು ಕಂಡುಬರುತ್ತಿದ್ದು, ಅದನ್ನೂ ಕಡಿಮೆ ಮಾಡಬೇಕಿದೆ ಎಂದರು.

ಪ್ರತಿ ಗ್ರಾಮ ಪಂಚಾಯಿತಿಗೆ 50 ಸಾವಿರ ರೂ. ಮುಂಗಡ ನೀಡಲು ಮುಖ್ಯಮಂತ್ರಿಗಳು ನಿರ್ಧರಿಸಿದ್ದಾರೆ. ಹಳ್ಳಿಗಳ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿಗೆ ಇದು ಅನುಕೂಲವಾಗಲಿದೆ. ಸೋಂಕಿತರ ಮನೆಗೆ ಭೇಟಿ ನೀಡಿ, ಅವರನ್ನು ಕೋವಿಡ್ ಕೇರ್ ಕೇಂದ್ರಕ್ಕೆ ಸಾಗಿಸಲು ಸಹಕಾರಿಯಾಗಲಿದೆ ಎಂದರು.

Related Stories

No stories found.

Advertisement

X
Kannada Prabha
www.kannadaprabha.com