ಜಿಂದಾಲ್​ಗೆ ಸರ್ಕಾರಿ ಭೂಮಿ ಪರಭಾರೆ: ಹೊಸ ಅರ್ಜಿ ಸಲ್ಲಿಕೆಗೆ ಹೈಕೋರ್ಟ್ ಅವಕಾಶ

ಸರ್ಕಾರದ 3,667 ಎಕರೆ ಜಮೀನನ್ನು ಜಿಂದಾಲ್ ಸಂಸ್ಥೆಗೆ ಹಸ್ತಾಂತರ ಮಾಡಿರುವ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿರುವ ಹೈಕೋರ್ಟ್, ಮತ್ತೊಮ್ಮೆ ಹೊಸದಾಗಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸರ್ಕಾರದ 3,667 ಎಕರೆ ಜಮೀನನ್ನು ಜಿಂದಾಲ್ ಸಂಸ್ಥೆಗೆ ಹಸ್ತಾಂತರ ಮಾಡಿರುವ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿರುವ ಹೈಕೋರ್ಟ್, ಮತ್ತೊಮ್ಮೆ ಹೊಸದಾಗಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದೆ. 

ಈ ಸಂಬಂಧ ಕೆ.ಎ.ಪಾಲ್ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರಿದ್ದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.  

ಕೆಲ ಕಾಲ ವಾದ ಆಲಿಸಿದ ಪೀಠ, ಜಮೀನು ಪರಭಾರೆ ಆಗಿರುವ ಜಿಂದಾಲ್ ಸಂಸ್ಥೆಯನ್ನು ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿ ಮಾಡಿಲ್ಲ. ಇದಲ್ಲದೇ ಅರ್ಜಿಯಲ್ಲಿ ಕೆಲವು ತಾಂತ್ರಿಕ ನ್ಯೂನತೆಗಳಿವೆ. ಹೀಗಾಗಿ ಅರ್ಜಿ ವಿಚಾರಣೆ ನಡೆಸಲು ಸಾಧ್ಯವಾಗುವುದಿಲ್ಲ ಎಂದಿತು.

ಇದಕ್ಕೆ ಪ್ರತಿಕ್ರಿಯಿಸಿದ ಅಜಿರ್ದಾರರ ಪರ ವಕೀಲರು, ಮೊದಲು ಅರ್ಜಿಯಲ್ಲಿರುವ ಗೊಂದಲಗಳನ್ನು ಸರಿಪಡಿಸುವುದಾಗಿ ತಿಳಿಸಿದರು. ಹಾಗೆಯೇ, ನ್ಯಾಯಾಲಯ ಸಮ್ಮತಿಸಿದರೆ ಈ ಅರ್ಜಿ ವಾಪಸ್ ಪಡೆದು ಹೊಸದಾಗಿ ಅರ್ಜಿ ಸಲ್ಲಿಸುವುದಾಗಿ ಪೀಠಕ್ಕೆ ತಿಳಿಸಿದರು. ಹೇಳಿಕೆ ಪರಿಗಣಿಸಿದ ಪೀಠ, ಮರು ಅರ್ಜಿ ಸಲ್ಲಿಸಲು ಅವಕಾಶ ನೀಡಿ ಅರ್ಜಿ ಇತ್ಯರ್ಥ ಪಡಿಸಿತು.

ಜಿಂದಾಲ್ ಸಂಸ್ಥೆಗೆ ಸುಮಾರು 3,667 ಎಕರೆ ಭೂಮಿಯನ್ನು ಸರ್ಕಾರ ಇತ್ತೀಚೆಗೆ ಮಂಜೂರು ಮಾಡಿದೆ. ಇದು ನಿಯಮಬಾಹಿರ ಎಂದು ಆರೋಪಿಸಿರುವ ಅರ್ಜಿದಾರರು, ಸರ್ಕಾರ ತರಾತುರಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿ, ಜಮೀನನ್ನು ಖಾಸಗಿ ಸಂಸ್ಥೆಗೆ ನೀಡಿದೆ. ಅಲ್ಲದೇ, ಜಿಂದಾಲ್ ಸಂಸ್ಥೆ ಕಾನೂನು ಬಾಹಿರ ಚಟುವಟಿಕೆ ನಡೆಸಿರುವ ಕುರಿತು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಿದೆ. ಸಂಸ್ಥೆಯಿಂದ ಸರ್ಕಾರಕ್ಕೆ 1,078 ಕೋಟಿ ರೂ.ಗಳ ರಾಜಧನ ಬರಬೇಕಿದೆ. ಈ ಸಂಬಂಧ ಹೈಕೋರ್ಟ್, ಸುಪ್ರೀಂಕೋರ್ಟ್ ಮತ್ತು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದಲ್ಲಿ ಅರ್ಜಿ ಸಲ್ಲಿಸಿದ್ದು, ವಿಚಾರಣೆ ಹಂತದಲ್ಲಿವೆ. ಹೀಗಾಗಿ ಜಮೀನು ಪರಭಾರೆ ನಿರ್ಧಾರವನ್ನು ಹಿಂಪಡೆಯಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com