ಮೈಸೂರು: ಮೈಸೂರು ಮೇಯರ್ ರುಕ್ಮಿಣಿ ಮಾದೇಗೌಡ ಅವರ ಸದಸ್ಯತ್ವವನ್ನು ಜಿಲ್ಲಾ ನ್ಯಾಯಾಲಯ ರದ್ದುಪಡಿಸಿರುವುದನ್ನು ರಾಜ್ಯ ಹೈಕೋರ್ಟ್ ಬುಧವಾರ ಎತ್ತಿಹಿಡಿದಿದೆ.
ಕಳೆದ ಚುನಾವಣೆಯಲ್ಲಿ ಅವರ ವಿರುದ್ಧ ಸ್ಪರ್ಧಿಸಿದ್ದ ಕಾಂಗ್ರೆಸ್'ನ ರಜನಿ ಅಣ್ಣಯ್ಯ ಅವರು ಚುನಾವಣೆ ಕಾಲಕ್ಕೆ ಸರಿಯಾದ ಮಾಹಿತಿ ನೀಡದೆ ಮುಚ್ಚಿಟ್ಟಿದ್ದಾರೆಂದು ರುಕ್ಮಿಣಿ ಮಾದೇಗೌಡರ ವಿರುದ್ಧ ನ್ಯಾಯಾಲಯ ಮೊರೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಅವರ ಸದಸ್ಯತ್ವ ರದ್ದಾಗಿತ್ತು. ಇದರ ವಿರುದ್ಧ ರುಕ್ಮಿಣಿ ಅವರು ಹೈಕೋರ್ಟ್ ಮೊರೆ ಹೋಗಿ ತಡೆಯಾಜ್ಞೆ ಪಡೆದಿದ್ದರು.
ಫೆ.24ರಂದು ನಡೆದ ಮೇಯರ್ ಚುನಾವಣೆಯಲ್ಲಿ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಕಾಂಗ್ರೆಸ್ ಬೆಂಬಲದೊಂದಿಗೆ ಮೇಯರ್ ಆಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್'ನ ಅನ್ವರ್ ಬೇಗ್ ಉಪ ಮೇಯರ್ ಆಗಿ ಆಯ್ಕೆಯಾಗಿದ್ದರು. ತಮಗೆ ಮಾಹಿತಿ ನೀಡದೇ ಕೊನೆ ಕ್ಷಣದಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆಂದು ಜಿಲ್ಲೆಯವರೇ ಆದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶಾಸಕ ತನ್ವೀರ್ ಸೇಠ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು ಈ ವಿವಾದ ಎಐಸಿಸಿವರೆಗೆ ತಲುಪಿತ್ತು.
Advertisement