ಚಿತ್ರದುರ್ಗ: ಚಿತ್ರದುರ್ಗದಲ್ಲಿ ನವೆಂಬರ್ 8 ಹಾಗೂ 9 ರಂದು ಎರಡು ದಿನಗಳ ಕಾಲ ರಾಜ್ಯಮಟ್ಟದ ಬುಡಕಟ್ಟು ಉತ್ಸವ ಹಮ್ಮಿಕೊಳ್ಳಲಾಗುವುದು ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬುಡಕಟ್ಟು ಸಮುದಾಯದ ಇತಿಹಾಸ, ಕಲೆ ಹಾಗೂ ಪರಂಪರೆ ಉಳಿಸುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ರಾಜ್ಯಮಟ್ಟದ ಬುಡಕಟ್ಟು ಉತ್ಸವ ಆಚರಿಸಲಾಗುತ್ತಿದೆ ಎಂದರು.
ಬುಡಕಟ್ಟು ಉತ್ಸವದ ಕುರಿತು ಮಾಹಿತಿ ನೀಡಿದ ಅವರು, 'ಈ ಉತ್ಸವದಲ್ಲಿ ಬುಡಕಟ್ಟು ಜನರು ತಯಾರಿಸಿದ ಕರಕುಶಲ ವಸ್ತುಗಳು, ನಾಟಿ ಔಷಧಿಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಆಹಾರ ಮೇಳ ನಡೆಯಲಿದೆ. ಆಹಾರ ಮೇಳದಲ್ಲಿ ಬುಡಕಟ್ಟು ಜನರ ಆಹಾರ ಖಾದ್ಯಗಳ ಪರಿಚಯಿಸಲು ಚಿಂತನೆ ನಡೆದಿದ್ದು, ವಿಶೇಷವಾಗಿ ಬಂಬೂ ಬಿರಿಯಾನಿ ಆಕರ್ಷಕ ಖಾದ್ಯವಾಗಲಿದೆ. ಇದರೊಂದಿಗೆ ಕಾಡು ಜೇನುತುಪ್ಪ ಹಾಗೂ ಕಾಡು ಗೆಣಸುಗಳಿಂದ ತಯಾರಿಸಲಾದ ತರಾವರಿ ಖಾದ್ಯಗಳು ವಿಶೇಷ ಆಕರ್ಷಣೆಯಾಗಲಿವೆ ಎಂದರು.
ಸಂಜೆ ಬುಡಕಟ್ಟು ಕಲಾ ತಂಡಗಳಿಂದ ನೃತ್ಯ, ಕುಣಿತ, ಬುಡಕಟ್ಟು ಹಬ್ಬಗಳ ಆಚರಣೆ ಮುಂತಾದ ಸಾಂಸ್ಕೃತಿಕ ಕಲಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಎರಡು ದಿನ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಬುಡಕಟ್ಟು ಸಮುದಾಯಗಳ ಜೀವನಶೈಲಿ ಕುರಿತಂತೆ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ನಿರ್ಮಿಸಲಾಗಿರುವ ಸಾಕ್ಷ್ಯಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ. ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ನಿರ್ಮಿಸಿರುವ ಸಾಕ್ಷ್ಯಚಿತ್ರಗಳ ಪ್ರದರ್ಶನವಿರಲಿದೆ. ಬುಡಕಟ್ಟು ಸಮುದಾಯಗಳಿಗೆ ಶಕ್ತಿ ತುಂಬಿ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಈ ಹೊಸ ಪ್ರಯತ್ನ ನಡೆದಿದೆ ಎಂದರು.
Advertisement