ಮುಂದಿನ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಡಿ.13ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಂಡಿಸುವ ಸಾಧ್ಯತೆಯಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.
ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಡಿ.13ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಂಡಿಸುವ ಸಾಧ್ಯತೆಯಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಬೆಳಗಾವಿಯಲ್ಲಿ ಮುಂಬರುವ ದಿನಗಳಲ್ಲಿ ನಡೆಯುವ ಅಧಿವೇಶನದಲ್ಲಿ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಂಡಿಸುವ ಸಾಧ್ಯತೆಗಳಿದ್ದು, ಮಸೂದೆ ಅಂಗೀಕರಿಸಲು ಸರ್ಕಾರ ಉತ್ಸುಕವಾಗಿದೆ ಮತ್ತು ಡಿಸೆಂಬರ್‌ನೊಳಗೆ ಕರಡು ಸಿದ್ಧವಾಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶ, ಗುಜರಾತ್, ಮಧ್ಯಪ್ರದೇಶ ಮತ್ತು ಜಾರ್ಖಂಡ್'ನಲ್ಲಿ ಈಗಾಗಲೇ ಇಂತಹ ಕಾನೂನುಗಳನ್ನು ಜಾರಿಗೆ ತರಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಅಧ್ಯಯನ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಈಗಾಗಲೇ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದ್ದು, ಕರಡು ಸಿದ್ಧಪಡಿಸಲಾಗುತ್ತಿದೆ. ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲು ಚಿಂತನೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಈ ನಡುವೆ ಪ್ರಸ್ತಾವಿತ ಮಸೂದೆಯನ್ನು ವಿರೋಧಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಆರ್ಚ್‌ಬಿಷಪ್ ಪೀಟರ್ ಮಚಾಡೊ ಅವರು ಪತ್ರ ಬರೆದಿದ್ದಾರೆ.

ಪತ್ರ ಕುರಿತು ಪ್ರತಿಕ್ರಿಯೆ ನೀಡಿರುವ ಆರಗ ಜ್ಞಾನೇಂದ್ರ ಅವರು, ಮಚಾಡೋ ಮತ್ತು ಅವರ ತಂಡವು ಭೇಟಿ ಮಾಡಿದೆ, ಮನವಿ ಸಲ್ಲಿಸಿದೆ. ಈ ಕಾನೂನಿಗೂ ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ ಮತ್ತು ಯಾವುದೇ ಧರ್ಮದವರೂ ಆತಂಕಪಡುವ ಅಗತ್ಯವಿಲ್ಲ. ಜನರನ್ನು ಬಲವಂತವಾಗಿ ಮತಾಂತರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದು ಈ ಮಸೂದೆಯಾಗಿದೆ. ಇಂತಹ ಮತಾಂತರಗಳಿಂದ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಇದು ಭಾವನಾತ್ಮಕ ಅಂಶವನ್ನು ಒಳಗೊಂಡಿರುವುದರಿಂದ, ಇದು ಸಮಾಜದಲ್ಲಿ ಸಾಮರಸ್ಯವನ್ನು ಕದಡುತ್ತದೆ. ಸಮುದಾಯಗಳ ನಡುವೆ ಘರ್ಷಣೆಗಳು ನಡೆಯುತ್ತಿದ್ದು, ಸರ್ಕಾರ ಸುಮ್ಮನೆ ಕೂರುವಂತಿಲ್ಲ. ಬಲವಂತದ ಮತಾಂತರವನ್ನು ನಿಷೇಧಿಸಬೇಕಿದೆ. ಇದರ ಅರ್ಥ ಸರ್ಕಾರವು ಪ್ರಾರ್ಥನೆ ಮತ್ತು ಇತರ ಧಾರ್ಮಿಕ ಆಚರಣೆಗಳನ್ನು ನಿರ್ಬಂಧಿಸುತ್ತದೆ ಎಂದಲ್ಲ. ನಾವು ಎಲ್ಲಾ ಧರ್ಮಗಳನ್ನು ಸ್ವೀಕರಿಸುತ್ತೇವೆ ಎಂದು ಹೇಳಿದ್ದಾರೆ.

ಈ ನಡುವೆ ಮತಾಂತರ ನಿಷೇಧ ಕಾಯ್ದೆ ಸಂಬಂಧ ಪಕ್ಷದೊಳಗೆ ಮಾತುಕತೆ ನಡೆಸುವುದಾಗಿ ಹೇಳಿರುವ ಸಿಎಂ ಬೊಮ್ಮಾಯಿಯವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿ, ಕರಡು ವಿಧೇಯಕ ಸಿದ್ಧಪಡಿಸಿ ಪಕ್ಷದ ಮುಖಂಡರ ಅಭಿಪ್ರಾಯ, ಸಲಹೆಗಳನ್ನು ಪಡೆದು ಒಪ್ಪಿಗೆ ಪಡೆಯುತ್ತೇವೆಂದಿದ್ದಾರೆ.

ನಾವು ಈ ಅಧಿವೇಶನದಲ್ಲಿ ಮಸೂದೆಯನ್ನು ಪರಿಚಯಿಸಲು ಮತ್ತು ಅಂಗೀಕರಿಸಲು ಬಯಸುತ್ತೇವೆ. ಅಧಿವೇಶನದಲ್ಲಿ ಮಸೂದೆ ಅಂಗೀಕಾರವಾಗುವ ಸಾಧ್ಯತೆ ಹೆಚ್ಚಾಗಿದೆ. ಅಧಿವೇಶನದ ಅವಧಿ ಕೇವಲ ಹತ್ತು ದಿನಗಳಾಗಿರುವ ಹಿನ್ನೆಲೆಯಲ್ಲಿ ಅಂಗೀಕಾರ ಕುರಿತು ಸಂಶಯಗಳನ್ನು ವ್ಯಕ್ತಪಡಿಸಿದ್ದೇವಷ್ಟೇ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ, ಸಂತೋಷ್ ಗುರೂಜಿ, ಸಿದ್ದಲಿಂಗ ಸ್ವಾಮಿ ಮತ್ತು ಪ್ರಣವಾನಂದ ಸ್ವಾಮಿ ಸೇರಿದಂತೆ ಹಲವು ಮಠಗಳ ಮುಖ್ಯಸ್ಥರು ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಧಾರ್ಮಿಕ ಮತಾಂತರವನ್ನು ನಿಷೇಧಿಸುವಂತೆ ಒತ್ತಾಯಿಸಿದರು.

ಹಿಂದಿನ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ವಿಷಯ ಪ್ರಸ್ತಾಪಿಸಿದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್, ಚಿತ್ರದುರ್ಗದಲ್ಲಿ ಧಾರ್ಮಿಕ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿದ್ದರು ಮತ್ತು ಅವರ ತಾಯಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com