ಮೈಸೂರು: ವಿಶ್ವವಿಖ್ಯಾತ, ನಾಡಿನ ಹೆಮ್ಮೆಯ ‘ಮೈಸೂರು ದಸರಾ -2021’ರ ಮಹೋತ್ಸವಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ನಾಡು ಕಂಡ ಧೀಮಂತ ನಾಯಕ, ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು 411ನೇ ನಾಡಹಬ್ಬ ದಸರಾ ಹಬ್ಬಕ್ಕೆ ಗುರುವಾರ ಚಾಲನೆ ನೀಡಿದರು.
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ದೀಪಾ ಬೆಳಗುವ ಮೂಲಕ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.
ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆಯೊಂದಿಗೆ ಬೆಳಗ್ಗೆ 8.15ರಿಂದ 8.45ರ ಸಲ್ಲುವ ಶುಭ ಮುಹೂರ್ತದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ದಸರಾಗೆ ಚಾಲನೆ ನೀಡಿದರು.
ಇದನ್ನೂ ಓದಿ: ನವರಾತ್ರಿಯ ಒಂಭತ್ತು ದಿನ ಏನೇನು ಭಕ್ಷ-ಭೋಜ್ಯಗಳು?
ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಸಚಿವರಾದ ಎಸ್.ಟಿ.ಸೋಮಶೇಖರ್, ಆರ್.ಅಶೋಕ್, ಬಿ.ಸಿ.ಪಾಟೀಲ್, ಶಿವರಾಂ ಹೆಬ್ಬಾರ್, ಸುನೀಲ್ ಕುಮಾರ್, ನಾರಾಯಣ ಗೌಡ, ಭೈರತಿ ಬಸವರಾಜು, ಶಶಿಕಲಾ ಜೊಲ್ಲೆ, ಶಾಸಕರಾದ ಜಿಟಿಡಿ, ರಾಮದಾಸ್, ನಾಗೇಂದ್ರ, ಬೆಲ್ಲದ್, ತನ್ವೀರ್ ಸೇಠ್, ಹೆಚ್.ವಿಶ್ವನಾಥ್, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಸೇರಿ ನಿಗಮ ಮಂಡಳಿ ಅಧ್ಯಕ್ಷರ ಹಲವರ ಉಪಸ್ಥಿತರಿದ್ದರು.
ಸಂಜೆ 6ಕ್ಕೆ ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.
ಇದೇ ವೇಳೆ ಆನಂದ್ ಅವರಿಗೆ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡುವರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮುಖ್ಯ ಅತಿಥಿಗಳಾಗಿರುವರು. ಶಾಸಕ ಎಸ್.ಎ.ರಾಮದಾಸ್ ಅಧ್ಯಕ್ಷತೆ ವಹಿಸುವರು. ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರಿಗಿದು ಮೊದಲ ದಸರಾ ಆಗಿದೆ.
ಇದನ್ನೂ ಓದಿ: ದಸರಾವನ್ನು 'ನಾಡಹಬ್ಬ' ಎಂದು ಏಕೆ ಕರೆಯುತ್ತಾರೆ?
ದಸರೆಯ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಅ.15ರಂದು ನಡೆಯಲಿದೆ. ಅಂದು ಸಂಜೆ 4.36ರಿಂದ 4.46ರ ವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸುವರು.
ಸಂಜೆ 5ರಿಂದ 5.30ರವರೆಗೆ ಅರಮನೆ ಅಂಗಳದಲ್ಲಿ ವಿಜಯದಶಮಿ ಮೆರವಣಿಗೆ(ಜಂಬೂ ಸವಾರಿ)ಗೆ ಚಾಲನೆ ನೀಡುವರು. ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರ ತಂದೆ ಎಸ್.ಆರ್.ಬೊಮ್ಮಾಯಿ 1988ರಲ್ಲಿ ಜಂಬೂ ಸವಾರಿ ಉದ್ಘಾಟಿಸಿದ್ದರು. ಈ ಬಾರಿ ಬಸವರಾಜ ಬೊಮ್ಮಾಯಿ ಅವರಿಗೆ ಆ ಅವಕಾಶ ಸಿಗುತ್ತಿರುವುದು ವಿಶೇಷ. ಎಚ್.ಡಿ.ದೇವೇಗೌಡ-ಎಚ್.ಡಿ.ಕುಮಾರಸ್ವಾಮಿ ಅವರ ನಂತರ ಈ ರೀತಿ ತಂದೆ-ಮಗನಿಗೆ ಜಂಬೂ ಸವಾರಿ ಉದ್ಘಾಟಿಸುವ ಅದೃಷ್ಟ ಒದಗಿದೆ.
Advertisement