ಗ್ರಾಮ ವಾಸ್ತವ್ಯ ಪುನರಾರಂಭ; ಕಟ್ಟಡ ಕಾರ್ಮಿಕರ ಸೌಲಭ್ಯ ದುರುಪಯೋಗವಾದರೆ ಕ್ರಮ: ಮುಖ್ಯಮಂತ್ರಿ ಎಚ್ಚರಿಕೆ

ಕೋವಿಡ್ ಬಿಕ್ಕಟ್ಟಿನ ಕಾರಣ ಕೆಲಕಾಲ ಸ್ಥಗಿತಗೊಂಡಿದ್ದ ಗ್ರಾಮ ವಾಸ್ತವ್ಯ ಶನಿವಾರದಿಂದ ಮತ್ತೆ ಪುನರಾರಂಭಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ನ್ಯಾಮತಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ- ಹಳ್ಳಿಗಳ ಕಡೆ ಮತ್ತು ಗ್ರಾಮ ವಾಸ್ತವ್ಯಕ್ಕೆ  ವಾಸ್ತವ್ಯಕ್ಕೆ ಮರು ಚಾಲನೆ ನೀಡಿದರು.
ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಮರು ಚಾಲನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಮರು ಚಾಲನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದಾವಣಗೆರೆ: ಕೋವಿಡ್ ಬಿಕ್ಕಟ್ಟಿನ ಕಾರಣ ಕೆಲಕಾಲ ಸ್ಥಗಿತಗೊಂಡಿದ್ದ ಗ್ರಾಮ ವಾಸ್ತವ್ಯ ಶನಿವಾರದಿಂದ ಮತ್ತೆ ಪುನರಾರಂಭಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ನ್ಯಾಮತಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ- ಹಳ್ಳಿಗಳ ಕಡೆ ಮತ್ತು ಗ್ರಾಮ ವಾಸ್ತವ್ಯಕ್ಕೆ  ವಾಸ್ತವ್ಯಕ್ಕೆ ಮರು ಚಾಲನೆ ನೀಡಿದರು. 

ವಿವಿಧ ಸರ್ಕಾರಿ ಸೌಲಭ್ಯಗಳನ್ನು ಫಲಾನುಭವಿಗಳಿಗೆ ವಿತರಿಸಿ, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿದರು.  ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳು ವರದಿಯಾಗಿದೆ.

ಹೊನ್ನಾಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ನೀಡುತ್ತಿರುವ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಂಡರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಇಂತಹ ದುರುಪಯೋಗ ತಡೆಗಟ್ಟುವ ಸಲುವಾಗಿ ಕೇಂದ್ರ ಸರ್ಕಾರ ಇ-ಶ್ರಮ ಪೋರ್ಟಲ್ ಪ್ರಾರಂಭಿಸಿ ಆಧಾರ್ ಕಾರ್ಡ್‌ನ್ನು ಜೋಡಿಸಲಾಗಿದೆ ಎಂದರು.

ಇದಕ್ಕೂ ಮುನ್ನ ಮೈಸೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ,  ಕೋವಿಡ್ ನಿಯಮಾವಳಿಗಳನ್ನು ಸರಳಗೊಳಿಸುವ ನಿಟ್ಟಿನಲ್ಲಿ ಒಂದೆರಡು ದಿನಗಳಲ್ಲಿ ತಜ್ಞರ ಸಮಿತಿ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದರು. ಗಡಿ ಪ್ರದೇಶಗಳಲ್ಲಿ ಸಂಚಾರ ಮೇಲಿನ ನಿರ್ಬಂಧ ತೆರವು, ಶಾಲೆಗಳ ಪುನರಾರಂಭ ಸೇರಿದಂತೆ ಎಲ್ಲವನ್ನೂ ಸಮಗ್ರವಾಗಿ ಪರಿಶೀಲಿಸಿ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದರು. ಮುಂದಿನ ವರ್ಷ ನಾಡಹಬ್ಬ ದಸರಾವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದರು.

ಮೈಸೂರಿನ ವಸ್ತುಪ್ರದರ್ಶನವನ್ನು ವರ್ಷವಿಡೀ ಉಪಯೋಗ ಮಾಡಿಕೊಳ್ಳುವ ನಿಟ್ಟಿನಲ್ಲಿ ಶಾಶ್ವತ ವಸ್ತುಪ್ರದರ್ಶನ ಆಯೋಜಿಸುವ ಬಗ್ಗೆ ಯೋಜನೆ ರೂಪಿಸಲಾಗುವುದು. ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಸರ್ಕಿಟ್ ರೂಪಿಸಲು ಚಿಂತನೆ ನಡೆದಿದ್ದು, ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಮರ ಮುಡ್ನೂರು ಮತ್ತು ಅಮರ ಪಡ್ನೂರು ಗ್ರಾಮದಲ್ಲಿ ಸಚಿವ ಎಸ್. ಅಂಗಾರ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಂದಾಯ ಇಲಾಖೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅವಕಾಶವಿದೆ. ಅಧಿಕಾರಿಗಳು ಕೂಡ ಗ್ರಾಮೀಣ ಜನರ ಅಹವಾಲುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಸಚಿವರು ಹೇಳಿದರು.

ಚಿತ್ರದುರ್ಗ ಜಿಲ್ಲೆಯಲ್ಲೂ ಶನಿವಾರದಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಪುನರಾರಂಭಗೊಂಡಿದೆ. ಜಿಲ್ಲಾಧಿಕಾರಿ ರೇಣುಕಾಪುರದಲ್ಲಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ.

ತುಮಕೂರು ಜಿಲ್ಲೆಯ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಮತ್ತು ತುಮಕೂರು ತಹಶೀಲ್ದಾರ್ ಮೋಹನ್ ಕುಮಾರ್ ಅವರನ್ನು ಒಳಗೊಂಡ ಅಧಿಕಾರಿಗಳ ತಂಡ ಗ್ರಾಮ ವಾಸ್ತವ್ಯ ಹೂಡಲಿದೆ. ಸಾರ್ವಜನಿಕರ ಅಹವಾಲುಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಮನೆ ಬಾಗಿಲಿಗೆ ಪಡಿತರ:
ಜನವರಿ 26 ರ ನಂತರ ಪಡಿತರವನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಸಿದ್ಧತೆಗಳನ್ನು ಮಾಡಲಾಗುತ್ತಿದೆ ಎಂದ ಮುಖ್ಯಮಂತ್ರಿಗಳು, ಸಾಮಾಜಿಕ ಭದ್ರತೆ ಮನೆ ಬಾಗಿಲಿಗೆ ಬರಬೇಕು. ಪ್ರತಿ ಗ್ರಾಮ ಪಂಚಾಯತಿಯಲ್ಲಿ ಎಲ್ಲ ಸೌಲಭ್ಯಗಳು ದೊರಕಲು ಯೋಜನೆ ರೂಪಿಸಲಾಗಿದೆ. ಪ್ರಾಯೋಗಿಕವಾಗಿ ನವೆಂಬರ್ 1 ರಂದು  ಜನಸೇವಕ ಕಾರ್ಯಕ್ರಮವನ್ನು ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಎಲ್ಲ ಸೌಲಭ್ಯಗಳನ್ನು ಮೊಬೈಲ್ ಮೂಲಕ  ದೊರಕಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವಿವರಿಸಿದರು.  ಪಿಂಚಣಿ ಸೌಲಭ್ಯ  ಆನ್‌ಲೈನ್ ನಲ್ಲಿ ಈಗಾಗಲೇ ಲಭ್ಯವಿದೆ. ಇದು ಲಭ್ಯವಾಗುವಲ್ಲಿ ತೊಂದರೆಯಾದರೆ, ತಾಲ್ಲೂಕು ಕಚೇರಿಗೆ ಹೋಗಬೇಕಾಗಿಲ್ಲ. ಪ್ರತಿ ಗ್ರಾಮ ಪಂಚಾಯತಿಯಲ್ಲಿ ಇರುವ ಕೇಂದ್ರದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು. ಜನರ ಸೇವೆಯಲ್ಲಿ  ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಹಿಡಿದು, ಗ್ರಾಮ ಪಂಚಾಯತಿಯ ಅಧಿಕಾರಿಗಳು ಭಾಗವಹಿಸಬೇಕು ಎಂದರು.    

ನಮ್ಮ ಸರ್ಕಾರ ಬಡವರಿಗೆ 4  ಲಕ್ಷ ಮನೆಗಳನ್ನು ಕೇವಲ ಒಂದೂವರೆ ವರ್ಷದಲ್ಲಿ ಕಟ್ಟಿದ್ದು,  ನಗರಗಳ ಕೊಳಗೇರಿಯಲ್ಲಿರುವವರಿಗೆ 1 ಲಕ್ಷ ಮನೆಗಳನ್ನು ಕಟ್ಟಿ ಕೊಡಲಾಗುತ್ತಿದೆ. ಜಲ್ ಜೀವನ್ ಮಿಷನ್ ಯೋಜನೆಯನ್ನು ಅನುಷ್ಠಾನಗೊಳಿಸಲು 2  ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆಯಲ್ಲದೆ,  ಅಮೃತ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಸಮಗ್ರ ಅಭಿವೃದ್ಧಿಯ ಕಲ್ಪನೆಯನ್ನು ಸರ್ಕಾರ ಹೊಂದಿದ್ದು,  ಉದ್ಯಮ, ಉದ್ಯೋಗಕ್ಕೆ ಸಮಾನ  ಮಹತ್ವವನ್ನು ನೀಡಿದೆ.  ಶಿಕ್ಷಣದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿದ್ದೇವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com