1 ರಿಂದ 5ನೇ ತರಗತಿ ಶಾಲೆ ಪುನರಾರಂಭಿಸುವ ಬಗ್ಗೆ ಎರಡು ದಿನಗಳಲ್ಲಿ ನಿರ್ಧಾರ: ಸಿಎಂ ಬೊಮ್ಮಾಯಿ
ದಾವಣಗೆರೆ: ಪರಿಣಿತ ತಾಂತ್ರಿಕ ಸಮಿತಿಯೊಂದಿಗೆ ಚರ್ಚಿಸಿದ ನಂತರ 1 ರಿಂದ 5 ನೇ ತರಗತಿವರೆಗೆ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಎರಡು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದ್ದಾರೆ.
ಇಂದು ಹೊನ್ನಾಳಿಯಲ್ಲಿ ನವೆಂಬರ್ ಅಂತ್ಯದ ವೇಳೆಗೆ ಸಿಎಂ ಕುರ್ಚಿ ಕಳೆದುಕೊಳ್ಳುತ್ತಾರೆ ಎಂಬ ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಇಬ್ರಾಹಿಂ ಅವರಿಗೆ ಯಾವಾಗ ಜ್ಞಾನೋದಯವಾಯಿತು ಎಂದು ಗೊತ್ತಿಲ್ಲ ಎಂದರು.
ಇದೇ ವೇಳೆ ವರದಿಗಾರರ ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ತಾವು ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಇಬ್ಬರೂ ಹಾನಗಲ್ ಮತ್ತು ಸಿಂದಗಿಯಲ್ಲಿ ಎರಡು ದಿನಗಳ ಕಾಲ ಪ್ರಚಾರ ಮಾಡಲಿದ್ದೇವೆ ಮತ್ತು ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಮೆಗಾ ರೋಡ್ ಶೋ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.
ಕೋವಿಡ್ ನಿಯಮಾವಳಿಗಳನ್ನು ಸರಳಗೊಳಿಸುವ ನಿಟ್ಟಿನಲ್ಲಿ ಒಂದೆರಡು ದಿನಗಳಲ್ಲಿ ತಜ್ಞರ ಸಮಿತಿ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಗಡಿ ಪ್ರದೇಶಗಳಲ್ಲಿ ಸಂಚಾರ ಮೇಲಿನ ನಿರ್ಬಂಧ ತೆರವು, ಶಾಲೆಗಳ ಪುನರಾರಂಭ ಸೇರಿದಂತೆ ಎಲ್ಲವನ್ನೂ ಸಮಗ್ರವಾಗಿ ಪರಿಶೀಲಿಸಿ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.