ಬೆಂಗಳೂರು: ರೈತರ ಸ್ವಾವಲಂಬಿ ಬದುಕಿಗೆ ಪೂರಕವಾಗಿ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಹಾಕಿಕೊಂಡಿದ್ದು, ಪ್ರಸಕ್ತ ಸಾಲಿನಲ್ಲಿ 12, 35, 033 ರೈತರಿಗೆ 9, 136 ಕೋಟಿ 89 ಲಕ್ಷ ರೂಪಾಯಿ ಕೃಷಿ ಸಾಲ ನೀಡಲಾಗಿದೆ ಎಂದು ಸಹಕಾರ ಹಾಗೂ ಮೈಸೂರು, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಹೇಳಿದ್ದಾರೆ.
ರೈತರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳುವುದೇ ಸರ್ಕಾರದ ಉದ್ದೇಶವಾಗಿದೆ. ಕಳೆದ ಬಾರಿ ಕೃಷಿ ಸಾಲ ವಿತರಣೆಯಲ್ಲಿ ಶೇ. 115 ರಷ್ಟು ಸಾಧನೆ ಮಾಡಲಾಗಿದ್ದು, ಈ ಬಾರಿ ಶೇಕಡಾ 125 ರಷ್ಟು ಸಾಧನೆ ಮಾಡುವ ಗುರಿ ಹಾಕಿಕೊಳ್ಳಲಾಗಿದೆ. ಅಕ್ಟೋಬರ್ ತಿಂಗಳಲ್ಲಿನಲ್ಲಿಯೇ ಅಲ್ಪಾವಧಿ, ಮಧ್ಯಮಾವಧಿ ಹಾಗೂ ಧೀರ್ಘಾವಧಿ ಸಾಲ ನೀಡಿಕೆಯಲ್ಲಿ ಗಮನಾರ್ಹ ಸಾಧನೆ ಮಾಡಲಾಗಿದೆ ಎಂದು ತಿಳಿಸಿದರು.
ಶೀಘ್ರದಲ್ಲಿಯೇ ಡಿಸಿಸಿ ಬ್ಯಾಂಕ್ ಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಕರೆದು ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುವುದು, ಈ ಮೂಲಕ ಬ್ಯಾಂಕ್ ಗಳನ್ನು ತೋರಿರುವ ಸಾಧನೆ, ಎದುರಿಸುತ್ತಿರುವ ಸಣ್ಣಪುಟ್ಟ ತೊಡಕುಗಳು, ಸಮಸ್ಯೆಗಳ ಬಗ್ಗೆಯೂ ಚರ್ಚಿಸಿ ಪರಿಹಾರಗಳನ್ನು ಸೂಚಿಸಲಾಗುವುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Advertisement