ಮತ್ತೆ ರೋಹಿಣಿ ಸಿಂಧೂರಿ ಸುದ್ದಿಯಲ್ಲಿ: 6 ಕೋಟಿ ರೂ. ಕಿಕ್ ಬ್ಯಾಕ್ ಆರೋಪ; ವಜಾಗೊಳಿಸುವಂತೆ ಸಾ.ರಾ. ಮಹೇಶ್ ಆಗ್ರಹ

ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್ ಶಾಸಕ ಸಾ.ರಾ ಮಹೇಶ್ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. 
ರೋಹಿಣಿ ಸಿಂಧೂರಿ
ರೋಹಿಣಿ ಸಿಂಧೂರಿ

ಮೈಸೂರು: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್ ಶಾಸಕ ಸಾ.ರಾ ಮಹೇಶ್ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. 

ಮೈಸೂರನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ಯೋಜನೆ ನೆಪದಲ್ಲಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅಕ್ರಮವೆಸಗಿದ್ದಾರೆ ಎಂದು ಸಾ.ರಾ. ಮಹೇಶ್ ಆರೋಪಿಸಿದ್ದಾರೆ. ಇದಕ್ಕೆ ಅವರು ದಾಖಲೆಗಳನ್ನು ಕೂಡ ಪ್ರದರ್ಶಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಬಟ್ಟೆ ಬ್ಯಾಗ್ ಖರೀದಿಗೆ ಜಿಎಸ್‌ಟಿ ಸೇರಿ 9 ರೂ ಆಗುತ್ತದೆ. ಆದರೆ, ರೋಹಿಣಿ ಸಿಂಧೂರಿ ಅವರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಕೈಮಗ್ಗ ಇಲಾಖೆಯವರಿಂದ ಖರೀದಿಸದೆ, ಖಾಸಗಿಯವರಿಂದ ಬ್ಯಾಗ್ ಖರೀದಿಸಿದ್ದಾರೆ. ಈ ಒಂದು ಬ್ಯಾಗ್ ಬೆಲೆ 52 ರೂ. ಇದೆ ಎಂದು ಆರೋಪಿಸಿದರು.

ಬ್ಯಾಗ್ ಮೇಲೆ ಕೇವಲ "ನಾನು ಪರಿಸರ ಸ್ನೇಹಿ" ಎಂಬ ಸಾಲು ಹಾಗೂ ಹಾಗೂ ಚಿಹ್ನೆ ಮುದ್ರಣ ಮಾಡಿಸಲು, ಪ್ರತಿ ಚೀಲಕ್ಕೆ 42 ರೂ. ಬಿಲ್ ಮಾಡಿದ್ದಾರೆ. ಒಟ್ಟು 14,71,458 ಬಟ್ಟೆ ಬ್ಯಾಗ್ ಖರೀದಿ ಮಾಡಲಾಗಿದೆ. ಇದಕ್ಕೆ ವಾಸ್ತವವಾಗಿ ತಗುಲುವುದು 1,47,15,000 ರೂಪಾಯಿ. ಆದರೆ 7 ಕೋಟಿಗೂ ಅಧಿಕ ರೂಪಾಯಿ ನೀಡಿ ಖರೀದಿ ಮಾಡಲಾಗಿದೆ. ಅಂದರೆ 6 ಕೋಟಿ 18 ಲಕ್ಷ ರೂ. ಭ್ರಷ್ಟಾಚಾರ ನಡೆದಿದೆ. ರೋಹಿಣಿ ಸಿಂಧೂರಿ ಆರು ಕೋಟಿ ರೂ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ದೂರಿದರು.

ರೋಹಿಣಿ ಸಿಂಧೂರಿಯನ್ನು ವಜಾಗೊಳಿಸಬೇಕು. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸುವೆ. ಮುಖ್ಯ ಕಾರ್ಯದರ್ಶಿ ಅವರ ಕಚೇರಿ ಮುಂದೆ ಸದ್ಯದಲ್ಲಿಯೇ ಧರಣಿ ನಡೆಸುತ್ತೇನೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com