ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಮುಖ್ಯ ರಸ್ತೆಗಳ ಗುಂಡಿ ಮುಚ್ಚಲು ಸೆ. 20 ಹಾಗೂ ವಾರ್ಡ್ ರಸ್ತೆಗಳ ಗುಂಡಿ ಮುಚ್ಚಲು ಸೆ. 30ರ ಗಡುವು ವಿಧಿಸಲಾಗಿದೆ.
ಸೋಮವಾರ ಬಿಬಿಎಂಪಿ ರಸ್ತೆ ಮೂಲಸೌಕರ್ಯ ವಿಭಾಗದ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್, ಮೂರು ನಾಲ್ಕು ತಿಂಗಳುಗಳಿಂದ ನಗರದಲ್ಲಿ ಮಳೆ ಸುರಿಯುತ್ತಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಮುಖ್ಯ ರಸ್ತೆಗಳಲ್ಲಿ ಹಾಗೂ ವಾರ್ಡ್ ರಸ್ತೆಗಳಲ್ಲಿ ಗುಂಡಿಗಳು ಕಾಣಿಸಿಕೊಂಡಿವೆ. ಒಟ್ಟು 2,653 ರಸ್ತೆಗಳು ಹಾಳಾಗಿವೆ. ಗುಂಡಿಗಳನ್ನು ತ್ವರಿತವಾಗಿ ಮುಚ್ಚಲು ಸೂಚನೆ ನೀಡಿದ್ದೇನೆ ಎಂದರು.
ಬಿಬಿಎಂಪಿಯು ಕಣ್ಣೂರಿನಲ್ಲಿ ಸ್ಥಾಪಿಸಿರುವ ಘಟಕದಲ್ಲಿ ನಿತ್ಯ 20 ಲೋಡ್ಗಳಷ್ಟು ಜಲ್ಲಿ– ಬಿಸಿ ಡಾಂಬರು ಮಿಶ್ರಣ ಸಿದ್ಧವಾಗುತ್ತದೆ. ಇದನ್ನು ಎಲ್ಲ ವಲಯಗಳಿಗೆ ಕಳುಹಿಸಿಕೊಡಲಾಗುತ್ತಿದೆ ಎಂದು ತಿಳಿಸಿದರು.
ಜಲ್ಲಿ– ಡಾಂಬರು ಮಿಶ್ರಣ ಪೂರೈಕೆಯಾಗುವ ಕಡೆ ಸ್ಥಳೀಯ ಎಂಜಿನಿಯರ್ಗಳು ಕಡ್ಡಾಯವಾಗಿ ಹಾಜರಿರಬೇಕು. ರಸ್ತೆ ಗುಂಡಿಯನ್ನು ಶುಚಿಗೊಳಿಸಿ, ಅದರಲ್ಲಿ ನೀರು ನಿಲ್ಲದಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚನೆ ನೀಡಿದರು.
Advertisement