ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ 2023ರ ರಾಜ್ಯ ವಿಧಾನಸಭೆ ಚುನಾವಣೆಯನ್ನು ಎದುರಿಸಲಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ನಡೆಯಲಿದೆ ಎಂಬ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಯಾವುದೇ ಪಕ್ಷದಲ್ಲಿ ನಾಯಕರಿದ್ದಾಗ ಅವರ ಮುಂದಾಳತ್ವದಲ್ಲೇ ಎಲ್ಲಾ ರಾಜಕೀಯ ಚಟುವಟಿಕೆ ನಡೆಯುವುದು ಸಾಮಾನ್ಯ. ಈಗ ಸಿಎಂ ಬೊಮ್ಮಾಯಿ ಇದ್ದಾರೆ, ಅಧ್ಯಕ್ಷರು ಕಟೀಲ್ ಇದ್ದಾರೆ. ಅವರ ಮುಂದಾಳತ್ವದಲ್ಲಿ ಪಕ್ಷ ನಡೆಯುತ್ತಿದೆ. ಮುಂದಿನ ಚುನಾವಣೆ ಯಾರ ನಾಯಕತ್ವದಲ್ಲಿ ನಡೆಯಬೇಕು ಅನ್ನೋದನ್ನ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದ್ದಾರೆ.
ಆಫ್ಘಾನ್ ವಿದ್ಯಾರ್ಥಿಗಳ ವೀಸಾ ವಿಸ್ತರಣೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿ, ಅದನ್ನು ವಿದೇಶಾಂಗ ಸಚಿವರು ನೋಡಿಕೊಳ್ಳುತ್ತಾರೆ ಎಂದರು. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಿಗದಿಯಂತೆ ಪ್ರಸಕ್ತ ಸಾಲಿನಿಂದಲೇ ಜಾರಿ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
Advertisement