ಬೆಂಗಳೂರು: ಕಾರ್ಮಿಕ ಇಲಾಖೆಯ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದು, ದಾಳಿ ವೇಳೆ ದಾಖಲೆ ಇಲ್ಲದ ರೂ.1.54 ಲಕ್ಷ ನಗದು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.
ಇಲಾಖೆಯ ಸಿಬ್ಬಂದಿ ಕಾರ್ಮಿಕ ಏಜೆನ್ಸಿಗಳಿಂದ ಲಂಚ ಪಡೆಯುತ್ತಿದ್ದರು ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಡೇರಿ ಸರ್ಕಲ್ ಬಳಿಯ ಕಾರ್ಮಿಕ ಇಲಾಖೆ ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿತ್ತು.
ಇಲಾಖೆ ಕಾರ್ಮಿಕರ ಪಿಎಫ್, ಗ್ರ್ಯಾಚ್ಯುವಿಟಿ ಸೇರಿದಂತೆ ನಾನಾ ಸೌಲಭ್ಯಗಳ ಬಗ್ಗೆ ಪರಿಶೀಲನೆ ಮಾಡಬೇಕು. ಆದರೆ ಕಾರ್ಮಿಕ ಇಲಾಖೆಯ ಸಿಬ್ಬಂದಿ ವ್ಯವಸ್ಥೆಯಲ್ಲಿ ಲೋಪ ಕಂಡು ಬಂದಲ್ಲಿ ಕ್ರಮ ಜರುಗಿಸದೆ ಅಕ್ರಮ ಹಣಕ್ಕಾಗಿ ಡಿಮ್ಯಾಂಡ್ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಇದೀಗ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿಯ ನಂತರ ತನಿಖೆ ಮುಂದುವರೆಸಿದ್ದಾರೆ.
ನಿನ್ನೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಎಸಿಬಿ ಅಧಿಕಾರಿಗಳು ಕಚೇರಿ ಮೇಲೆ ದಾಳಿ ನಡೆಸಿದ್ದು, ತಡರಾತ್ರಿವರೆಗೂ ಪರಿಶೀಲನೆ ನಡೆಸಿದ್ದಾರೆಂದು ತಿಳಿದುಬಂದಿದೆ. ಈ ವೇಳೆ ದಾಖಲೆ ಇಲ್ಲದ ರೂ.1.54 ನಗದು ಪತ್ತೆಯಾಗಿದ್ದು, ಈ ಕುರಿತು ಅಧಿಕಾರಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ.
Advertisement